ಬೆಂಗಳೂರು : ಮೈಸೂರು ಅಭಿವೃದ್ಧಿ ಪ್ರಾಧಿಕಾರ ಹಗರಣ ಸದ್ಯ ರಾಜ್ಯದಲ್ಲಿಯೇ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. ಸರ್ಕಾರ ಹಾಗೂ ವಿಪಕ್ಷ ನಾಯಕರ ನಡುವೆ ಆರೋಪ-ಪ್ರತ್ಯಾರೋಪಕ್ಕೆ ಕಾರಣವಾಗಿದೆ. ಈ ಮೂಡಾ ಹಗರದ ಬಗ್ಗೆ ಒಂದು ವರ್ಷದ ಹಿಂದೆಯೇ ಸರ್ಕಾರದ ಗಮನಕ್ಕೆ ತಂದಿದ್ದ ಮೈಸೂರು ಜಿಲ್ಲಾಧಿಕಾರಿ ಕೆ.ವಿ.ರಾಜೇಂದ್ರ ಅವರನ್ನು ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಡಿಸಿ ಕೆ.ವಿ.ರಾಜೇಂದ್ರ ಸೇರಿದಂತೆ 21 ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಸದ್ಯ ಮೈಸೂರು ಡಿಸಿಯಾಗಿದ್ದ ಕೆ.ವಿ.ರಾಜೇಂದ್ರ ಅವರು ಬೆಂಗಳೂರಿಗೆ ಬಂದಿದ್ದು, ಪ್ರವಾಸೋದ್ಯಮ ನಿರ್ದೇಶಕರಾಗಿ ವರ್ಗಾವಣೆಗೊಂಡಿದ್ದಾರೆ. ಮೈಸೂರಿಗೆ ಹೊಸ ಜಿಲ್ಲಾಧಿಕಾರಿಯಾಗಿ ಲಕ್ಷ್ಮೀಕಾಂತ್ ರೆಡ್ಡಿ ಅವರನ್ನು ನೇಮಕ ಮಾಡಲಾಗಿದೆ.
