ಕೋವಿಡ್ ಉಲ್ಭಣ, 60 ವರ್ಷ ಮೇಲ್ಪಟ್ಟವರಿಗೆ ಮಾಸ್ಕ್ ಕಡ್ಡಾಯ, ಸಂಜೆ ಮಾರ್ಗಸೂಚಿ ಬಿಡುಗಡೆ; ಆರೋಗ್ಯ ಸಚಿವ ದಿನೇಶ್ ಗುಂಡೂರಾವ್

ಮಡಿಕೇರಿ : ನೆರೆಯ ಕೇರಳಲ್ಲಿ ತಾಂಡವ ಆರಂಭಿಸಿದ್ದ ಕೊರೊನಾ ರೂಪಾಂತರಿ ವೈರಸ್ ಕರ್ನಾಟಕ ರಾಜ್ಯದಲ್ಲೂ ಕಂಡುಬಂದಿರುವ ಹಿನ್ನೆಲೆಯಲ್ಲಿ ಕಟ್ಟೆಚ್ಚರ ವಹಿಸಲು ಜಿಲ್ಲಾಡಳಿತಗಳಿಗೆ ಸೂಚಿಸಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.

ಕೊಡಗಿನ ಕುಶಲನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು 60 ವರ್ಷದ ಮೇಲ್ಪಟ್ಟವರಿಗೆ ಮಾಸ್ಕ್ ಕಡ್ಡಾಯಗೊಳಿಸಲಾಗಿದೆ. ಕೋವಿಡ್ ವಿಚಾರವಾಗಿ ಸಾರ್ವಜನಿಕರು ತೆಗೆದುಕೊಳ್ಳಬೇಕಾದ ಮುನ್ನಚ್ಚರಿಕೆಯ ಕುರಿತು ಇಲಾಖೆಯಿಂದ ಇಂದು ಸೋಮವಾರ ಸಂಜೆ ಮಾರ್ಗಸೂಚಿ ಹೊರಡಿಸಲಾಗುವುದು ಎಂದು ತಿಳಿಸಿದರು. ಪ್ರಸ್ತುತ‌ ಕೊರೋನಾ ರೂಪಾಂತರಿ ಬಗ್ಗೆ ಯಾರೂ ಆತಂಕಪಡಬೇಕಿಲ್ಲ. ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳುವ ನಿಟ್ಟಿನಲ್ಲಿ ಈಗಾಗಲೇ ನಾನು ಒಂದು ಸುತ್ತಿನ ಸಭೆಯನ್ನು ಆರೋಗ್ಯ ಇಲಾಖೆ ಅಧಿಕಾರಿಗಳ ಜೊತೆ ನಡೆಸಿದ್ದೇನೆ. ಅಲ್ಲದೇ ಡಾ. ರವಿ ಅವರ ನೇತೃತ್ವದ ತಾಂತ್ರಿಕ ಸಲಹಾ ಸಮಿತಿ ಕೂಡಾ ನಿನ್ನಯೇ ಸಭೆ ನಡೆಸಿ ಕೆಲವು ಸಲಹೆಗಳನ್ನ ನೀಡಿದ್ದಾರೆ. 60 ವರ್ಷ ಮೇಲ್ಪಟ್ಟವರು ಹಾಗೂ ಹೃದಯ ಸಂಬಂಧಿ ಕಾಯಿಲೆ ಹೊಂದಿದವರು, ಉಸಿರಾಟದ ಸಮಸ್ಯೆ ಇರುವವರಿಗೆ ಮಾಸ್ಕ್ ಕಡ್ಡಾಯಗೊಳಿಸುವಂತೆ ಸಮಿತಿಯವರು ಸಲಹೆ ನೀಡಿದ್ದಾರೆ. ಹೆಚ್ಚು ಟೆಸ್ಟಿಂಗ್ ಮಾಡುವಂತೆ ಆರೋಗ್ಯ ಇಲಾಖೆಗೆ ಅಧಿಕಾರಿಗಳಿಗೆ ಸೂಚಿಸಲಾಗಿದ್ದು, ಅಗತ್ಯವಿರುವ ಬೆಡ್, ಪಿಪಿಇ ಕಿಟ್, ಸನ್ನದ್ದ ಸ್ಥಿತಿಯಲ್ಲಿ ಇರಿಸಿಕೊಳ್ಳಲು ರಾಜ್ಯದ ಎಲ್ಲ ಜಿಲ್ಲಾ ಆರೋಗ್ಯಾಧಿಕಾರಿಗಳಿಗೆ ತಿಳಿಸಲಾಗಿದೆ. ಕೇರಳ ಗಡಿ ಜಿಲ್ಲೆಗಳಲ್ಲಿ ಹೆಚ್ಚು ಮುನ್ನೆಚ್ಚರಿಕೆ ವಹಿಸಲು ಸೂಚಿಸಲಾಗಿದೆ ಎಂದರು. ಶೀತ, ಜ್ವರ ಕೆಮ್ಮು ಇರುವವರು ಕೊರೊನಾ ಪರೀಕ್ಷೆ ಮಾಡಿಸಿಕೊಳ್ಳಬೇಕು. ಹೆಚ್ಚು ಪಾಸಿಟಿವ್ ಬಂದರೆ ಮಾತ್ರ ಸಾರ್ವಜನಿಕ ಸ್ಥಳಗಳಲ್ಲಿ ಕಟ್ಟುನಿಟ್ಟಿನ ಕ್ರಮಗಳನ್ನ ಕೈಗೊಳ್ಳುವುದು ಅನಿವಾರ್ಯವಾಗಲಿದೆ ಎಂದರು.

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement