ಚಿತ್ರದುರ್ಗ: ಮಹಿಳೆಯರನ್ನು ಆರ್ಥಿಕವಾಗಿ ಮತ್ತು ಸಾಮಾಜಿಕವಾಗಿ ಸದೃಢಗೊಳಿಸುವ ಉದ್ದೇಶದಿಂದ ರಾಜ್ಯ ಸರ್ಕಾರ ಜಾರಿಗೆ ತಂದಿರುವ ಗ್ಯಾರಂಟಿ ಯೋಜನೆಗಳು ಇಂದು ಮಹಿಳೆಯರ ಬದುಕಿಗೆ ಆಸರೆಯಾಗಿವೆ ಎಂದು ಯೋಜನೆ ಮತ್ತು ಸಾಂಖ್ಯಿಕ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಹೇಳಿದರು.
ನಗರದ ಜಿಲ್ಲಾ ವಾಲ್ಮೀಕಿ ಭವನದಲ್ಲಿ ಶನಿವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಇವರುಗಳ ಸಂಯುಕ್ತಾಶ್ರಯದಲ್ಲಿ ಮಿಷನ್ ಶಕ್ತಿ ಹಾಗೂ ಬೇಟಿ ಬಚಾವೋ ಬೇಟಿ ಪಡಾವೋ ಯೋಜನೆಯಡಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
2023ರ ವಿಧಾನಸಭಾ ಚುನಾವಣೆಯ ಪ್ರಣಾಳಿಕೆಯಲ್ಲಿ ಘೋಷಿಸಿದಂತೆ ಮಹಿಳೆಯರನ್ನು ಕೇಂದ್ರಬಿಂದುವಾಗಿಟ್ಟುಕೊಂಡು ನಮ್ಮ ಸರ್ಕಾರ ಯೋಜನೆಗಳನ್ನು ಜಾರಿಗೆ ತಂದಿದೆ. ಗೃಹಜ್ಯೋತಿ ಯೋಜನೆ, ಗೃಹಲಕ್ಷ್ಮಿ ಯೋಜನೆಯಡಿ ರೂ.2,000 ಹಣ, ಯುವ ಜನತೆಗೆ ಯುವನಿಧಿ, ಶಕ್ತಿ ಯೋಜನೆಯಡಿ ಉಚಿತ ಪ್ರಯಾಣದಂತಹ ಯೋಜನೆಗಳು ಮಹಿಳೆಯರಲ್ಲಿ ಆತ್ಮವಿಶ್ವಾಸ ಮೂಡಿಸಿವೆ. ಇಂತಹ ಕೆಲಸಗಳು ಸರ್ಕಾರದ ಮೂಲಕ ಸಾಧ್ಯವೇ ಎಂಬ ಅನುಮಾನ ಮೊದಲಿತ್ತು, ಆದರೆ ನಮ್ಮ ಸರ್ಕಾರ ಪಂಚ ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸಿದೆ ಎಂದರು.
ಮಹಿಳೆ ಎಂದರೆ ಶಕ್ತಿಯ ಸ್ವರೂಪಿ ಎಂಬುದನ್ನು ನಮ್ಮ ಪುರಾಣಗಳು ಮತ್ತು ಇತಿಹಾಸ ಸಾರುತ್ತಾ ಬಂದಿವೆ. ಆದಿಪರಾಶಕ್ತಿ, ಚಾಮುಂಡೇಶ್ವರಿಯಂತಹ ಶಕ್ತಿ ದೇವತೆಗಳನ್ನು ನಾವು ಆರಾಧಿಸುತ್ತೇವೆ. ಮಹಿಳೆಯರಿಗೆ ಗೌರವ ನೀಡುವ ಸಂಸ್ಕøತಿ ನಮ್ಮ ದೇಶದ್ದು. ಮನೆಯ ದೀಪ ಬೆಳಗುವ ಶಕ್ತಿ ಮಹಿಳೆಯ ಕೈಯಲ್ಲಿದೆ. ಸಂಸಾರದಲ್ಲಿ ಶಾಂತಿ ನೆಲೆಸಲು ಮಹಿಳೆಯೇ ಕಾರಣ ಎಂದು ಅಭಿಪ್ರಾಯಪಟ್ಟರು.
ದೇಶದ ಉಕ್ಕಿನ ಮಹಿಳೆ ಇಂದಿರಾ ಗಾಂಧಿಯವರು 18 ವರ್ಷಗಳ ಕಾಲ ದೇಶವನ್ನು ಮುನ್ನಡೆಸಿ ಬಡವರ ಪರವಾದ ಅನೇಕ ಕಾರ್ಯಕ್ರಮಗಳನ್ನು ನೀಡಿದ್ದಾರೆ. ಅವರ ದಾರಿಯಲ್ಲೇ ಸಾಗುತ್ತಿರುವ ನಮ್ಮ ಸರ್ಕಾರವು ಬಡವರ ಪರ ಯೋಜನೆಗಳಿಗೆ ಮೊದಲ ಆದ್ಯತೆ ನೀಡುತ್ತಿದೆ ಎಂದು ಸಚಿವರು ಸ್ಮರಿಸಿದರು.
ಚಳ್ಳಕೆರೆ ಶಾಸಕರು ಹಾಗೂ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮ ಅಧ್ಯಕ್ಷ ಟಿ.ರಘುಮೂರ್ತಿ ಮಾತನಾಡಿ, ಮಹಿಳೆಯರು ಸಾಧನೆ ಮಾಡಲು ಸೌಲಭ್ಯಗಳು, ಹಣವಿದ್ದರೆ ಸಾಲದು. ಆಚಲವಾದ ಇಚ್ಛಾಶಕ್ತಿ ಇರಬೇಕು. ಚಿತ್ರದುರ್ಗ ಇತಿಹಾಸದಲ್ಲಿ ಒನಕೆ ಓಬವ್ವ ಸಾಮಾನ್ಯ ಮಹಿಳೆಯಾಗಿದ್ದರೂ ಅಸಾಮಾನ್ಯ ಇಚ್ಛಾಶಕ್ತಿಯಿಂದ ಇತಿಹಾಸ ನಿರ್ಮಿಸಿದರು ಎಂದು ತಿಳಿಸಿದರು.
ಮಹಿಳೆಗೆ ಶಿಕ್ಷಣ ದೊರೆತಾಗ ಕುಟುಂಬದ ಶಕ್ತಿ ವೃದ್ಧಿಯಾಗುತ್ತದೆ. ಸೊಸೆಯಾದವರು ಅತ್ತೆ-ಮಾವಂದಿರನ್ನು ಹೆತ್ತ ತಂದೆ-ತಾಯಿಯಂತೆ ಗೌರವಿಸಿದರೆ ಕುಟುಂಬ ಹಾಗೂ ಸಮಾಜದಲ್ಲಿ ನೆಮ್ಮದಿ ನೆಲೆಸುತ್ತದೆ. ಮಾನವೀಯ ಮೌಲ್ಯಗಳ ಜೊತೆಗೆ ಶಿಕ್ಷಣ ಪಡೆದಾಗ ಮಹಿಳಾ ಸಬಲೀಕರಣಕ್ಕೆ ನಿಜವಾದ ಅರ್ಥ ಸಿಗುತ್ತದೆ ಎಂದು ಅಭಿಪ್ರಾಯಪಟ್ಟರು.
ನಮ್ ರಾಜ್ಯ ಸರ್ಕಾರ ಜಾರಿಗೆ ತಂದಿರುವ ಶಕ್ತಿ ಯೋಜನೆ ಗೃಹಲಕ್ಷ್ಮೀ ಯೋಜನೆ ಮತ್ತು ಗೃಹಜ್ಯೋತಿ ಯೋಜನೆಗಳ ಮೂಲಕ ಮಹಿಳೆಯರಿಗೆ ಆರ್ಥಿಕ ಸ್ವಾವಲಂಬನೆ ನೀಡಲಾಗಿದೆ. ಈ ಯೋಜನೆಗಳ ಫಲಾನುಭವಿಗಳು ಮಹಿಳೆಯರೇ ಆಗಿರುವುದರಿಂದ ಕುಟುಂಬದಲ್ಲಿ ಅವರ ಪಾತ್ರ ಹಿರಿದಾಗುತ್ತಿದೆ ಎಂದು ತಿಳಿಸಿದರು.
ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಆರ್.ಶಿವಣ್ಣ ಮಾತನಾಡಿ, ಜಿಲ್ಲೆಯ ಶೇ.100ರಷ್ಟು ಮಹಿಳೆಯರಿಗೆ ಗ್ಯಾರಂಟಿ ಯೋಜನೆಗಳ ಲಾಭ ತಲುಪುತ್ತಿರುವುದು ಸಂತಸದ ವಿಷಯ. ಸರ್ಕಾರದ ಸೌಲಭ್ಯಗಳನ್ನು ಪ್ರತಿಯೊಬ್ಬ ಬಡವರಿಗೂ ತಲುಪಿಸುವ ಅಂಗನವಾಡಿ ಮತ್ತು ಆಶಾ ಕಾರ್ಯಕರ್ತೆಯರ ನಿಸ್ವಾರ್ಥ ಸೇವೆ ಶ್ಘಾಘನೀಯ ಎಂದರು.
ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಮಾತನಾಡಿ, “ಸ್ತ್ರಿ” ಈ ಜಗತ್ತಿನ ಅತ್ಯಂತ ಅದ್ಭುತವಾದ ಸೃಷ್ಠಿ. ಮತ್ತೊಂದು ಜೀವನಕ್ಕೆ ಜೀವ ನೀಡುವ ಏಕೈಕ ಮತ್ತು ಅದ್ಭುತ ಶಕ್ತಿ ಪ್ರಕೃತಿಯಲ್ಲಿ ಮಹಿಳೆಗೆ ಮಾತ್ರ ಇದೆ ಎಂದು ತಿಳಿಸಿದ ಅವರು, ಮಹಿಳೆಯರ ಬಗ್ಗೆ ಕೇವಲ ಅನುಕಂಪ ತೋರುವುದಷ್ಟೇ ಅಲ್ಲದೇ, ಅವರಿಗೆ ಸಮಾಜದಲ್ಲಿ ಹೆಚ್ಚಿನ ಅವಕಾಶಗಳನ್ನು ನೀಡಬೇಕಾದ ಅಗತ್ಯವಿದೆ ಎಂದು ತಿಳಿಸಿದರು.
ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಮಹಿಳೆಯರಿಗೆ, ಮಾಜಿ ದೇವದಾಸಿ ಮಹಿಳೆಯರಿಗೆ ಉಚಿತ ಆರೋಗ್ಯ ತಪಾಸಣೆ, ಮಹಿಳಾ ಪೌರಕಾರ್ಮಿಕರಿಗೆ ಸನ್ಮಾನ ಹಾಗೂ ಹೊಯ್ಸಳ ಮತ್ತು ಕೆಳದಿ ಚೆನ್ನಮ್ಮ ಪ್ರಶಸ್ತಿ ಯೋಜನೆಯಡಿ ಅಸಾಧಾರಣ ಸಾಧನೆ ಮಾಡಿದ ಮಕ್ಕಳಿಗೆ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿಗಳ ಆಯೋಗದ ಅಧ್ಯಕ್ಷ ಪಿ.ರಘು, ಆದಿ ಜಾಂಬವ ಅಭಿವೃದ್ಧಿ ನಿಗಮ ಅಧ್ಯಕ್ಷ ಜಿ.ಎಸ್.ಮಂಜುನಾಥ್, ಕೆಡಿಪಿ ಸದಸ್ಯರಾದ ಸುನಂದಾ, ಸಂತೋಷ್, ಜಿಲ್ಲಾ ಗ್ಯಾರಂಟಿ ಯೋಜನೆ ಸದಸ್ಯೆ ಇಂದಿರಾ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಕೆ.ಹೆಚ್.ವಿಜಯಕುಮಾರ್, ಜಿಲ್ಲಾ ನಿರೂಪಣಾಧಿಕಾರಿ ಡಿ.ಮಂಜುನಾಥ್, ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಜೆ.ವೈಶಾಲಿ, ನೆರ್ಲಗಿ ಪೌಂಡೇಷನ್ ಅಧ್ಯಕ್ಷೆ ಮಮತಾ ನೆರ್ಲಗಿ ಸೇರಿದಂತೆ ಮತ್ತಿತರರು ಇದ್ದರು.
































