ಮಂಗಳೂರು: ಮೋದಿಯವರನ್ನು ಪ್ರಧಾನಿ ಮಾಡುವಂತೆ ಮದುವೆ ಆಮಂತ್ರಣ ಪತ್ರದಲ್ಲಿ ಉಲ್ಲೇಖ – ಪ್ರಕರಣ ದಾಖಲು

ಮಂಗಳೂರು: ಮದುವೆ ಆಮಂತ್ರಣ ಪತ್ರದಲ್ಲಿ “ಈ ಬಾರಿಯೂ ನರೇಂದ್ರ ಮೋದಿಯನ್ನು ಪ್ರಧಾನಿ ಮಾಡುವುದೇ ವಧುವರರಿಗೆ ನೀಡುವ ಉಡುಗೊರೆ. ಯಾಕೆಂದರೆ ನಮ್ಮ ಭವಿಷ್ಯದ ಭಾರತ ಸುಭದ್ರವಾಗಿರಬೇಕು” ಎಂದು ಮುದ್ರಿಸಿರುವ ವರನ ವಿರುದ್ಧ ಚುನಾವಣಾ ನೀತಿ ಸಂಹಿತೆ ಜಾರಿ ನಿಗಾ ತಂಡದ ಅಧಿಕಾರಿಗಳು ನೀಡಿರುವ ದೂರಿನನ್ವಯ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಡಬ ತಾಲೂಕು ಆಲಂತಾಯ ಗ್ರಾಮದ ನಿವಾಸಿ ಶಿವಪ್ರಸಾದ್‌ ಅಲಿಯಾಸ್ ರವಿ ಎಂಬವರ ವಿವಾಹ ಕಡಬ ತಾಲೂಕು ಹಳೆನೇರಂಕಿ ಗ್ರಾಮದ ಪ್ರಮೀಳಾ ಎಂಬವರೊಂದಿಗೆ ಎ.18 ರಂದು ಗೋಳಿತೊಟ್ಟು ಸಿದ್ಧಿ ವಿನಾಯಕ ಕಲಾ ಮಂದಿರದಲ್ಲಿ ನಡೆದಿತ್ತು. ಈ ಮದುವೆಯ ಆಮಂತ್ರಣ ಪತ್ರವನ್ನು ಮಾರ್ಚ್1 ರಂದು ಮುದ್ರಿಸಲಾಗಿತ್ತು. ಈ ಆಮಂತ್ರಣ ಪತ್ರದಲ್ಲಿ ಪ್ರಧಾನಿ ನರೇಂದ್ರ ಮೋದಿಯವರನ್ನು ಮತ್ತೆ ಪ್ರಧಾನಿ ಮಾಡುವುದೇ ನೀವು ನಮಗೆ ನೀಡುವ ಉಡುಗೊರೆ ಎಂದು ಶಿವಪ್ರಸಾದ್‌ ಉಲ್ಲೇಖಿಸಿದ್ದರು.

ಈ ಬಗ್ಗೆ ಮಾಹಿತಿ ಪಡೆದುಕೊಂಡ ಚುನಾವಾಣಾ ನೀತಿ ಸಂಹಿತೆ ಜಾರಿ ನಿಗಾ ತಂಡದ ಅಧಿಕಾರಿಗಳು ಎ.14 ರಂದು ವರನ ಮನೆಗೆ ಭೇಟಿ ನೀಡಿ ವಿಚಾರಿಸಿದ್ದಾರೆ. ಆಗ ಅವರು ತಾನು ಮಾರ್ಚ್ 1 ರಂದೇ 800 ಆಮಂತ್ರಣ ಪತ್ರವನ್ನು ಮುದ್ರಿಸಿದ್ದು, ಅದರಲ್ಲಿ ಹತ್ತು ಆಮಂತ್ರಣ ಪತ್ರ ಹೊರತುಪಡಿಸಿ ಎಲ್ಲವನ್ನೂ ಹಂಚಲಾಗಿದೆ ಎಂದು ಹೇಳಿದ್ದಾರೆ. ಚುನಾವಣಾ ನೀತಿಸಂಹಿತೆ ಜಾರಿಯಾಗುವ ಮೊದಲೇ ಆಮಂತ್ರಣ ಪತ್ರವನ್ನು ಮುದ್ರಿಸಿ, ವಿತರಿಸಲಾಗಿದೆ.

Advertisement

ಇದರಿಂದ ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆಯಾಗಿಲ್ಲ. ಪ್ರಧಾನಿ ಮೋದಿಯ ಮೇಲಿನ ಪ್ರೀತಿ ಹಾಗೂ ರಾಷ್ಟ್ರದ ಮೇಲಿನ ಕಾಳಜಿಯಿಂದ ನಾನು ಆ ರೀತಿ ಉಲೇಖಿಸಿದ್ದೇನೆಯೇ ಹೊರತು ಇದರಲ್ಲಿ ಕಾನೂನು ಉಲ್ಲಂಘಿಸುವ ಉದ್ದೇಶವಿಲ್ಲ. ಆದ್ದರಿಂದ ಇದನ್ನು ಅಪರಾಧವೆಂದು ಪರಿಗಣಿಸಬಾರದು ಹಾಗೂ ಯಾವುದೇ ಕಾನೂನು ಕ್ರಮವನ್ನು ಕೈಗೊಳ್ಳಬಾರದೆಂದು ಲಿಖಿತ ಹೇಳಿಕೆಯನ್ನು ನೀಡಿದ್ದರು. ಎಪ್ರಿಲ್ 18 ರಂದು ವಿವಾಹವೂ ನೆರವೇರಿತ್ತು.

ಎಪ್ರಿಲ್ 26ರ ಚುನಾವಣೆ ಮುಗಿದ ಬಳಿಕ ಚುನಾವಣಾ ಅಧಿಕಾರಿಗಳು ಉಪ್ಪಿನಂಗಡಿ ಠಾಣೆಯಲ್ಲಿ ದೂರು ನೀಡಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಶನಿವಾರ ಆಮಂತ್ರಣ ಪತ್ರಿಕೆ ಮುದ್ರಣ ಮಾಡಿದ ಸಂಸ್ಥೆಯ ಮಾಲಕರನ್ನು ಕರೆಯಿಸಿ ಮಹಜರು ಪ್ರಕ್ರಿಯೆ ನಡೆಸಲಾಗಿದೆ.

Add a comment

Leave a Reply

Your email address will not be published. Required fields are marked *

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement