ಬೆಂಗಳೂರು: ರಾಜ್ಯದಲ್ಲಿ ಮಾರಾಟ ತೆರಿಗೆಯನ್ನು ಪರಿಷ್ಕರಿಸಿದ ನಂತರ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಏರಿಕೆಯಾಗಿದೆ. ಗೆಜೆಟ್ ಅಧಿಸೂಚನೆಯ ಪ್ರಕಾರ, ಸರ್ಕಾರವು ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಮಾರಾಟ ತೆರಿಗೆಯನ್ನು ಕ್ರಮವಾಗಿ 29.84% ಮತ್ತು 18.44% ರಷ್ಟು ಪರಿಷ್ಕರಿಸಿದೆ. ಹೀಗಾಗಿ ಕರ್ನಾಟಕದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಸುಮಾರು 3 ಮತ್ತು 3.05 ರೂಪಾಯಿಯಷ್ಟು ಹೆಚ್ಚಾಗುವ ಸಾಧ್ಯತೆಯಿದೆ.
ಕಾಂಗ್ರೆಸ್ ಸರ್ಕಾರದ ಈ ಕ್ರಮಕ್ಕೆ ಬಿಜೆಪಿ ನಾಯಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಲೋಕಸಭೆ ಚುನಾವಣೆಯಲ್ಲಿ ಕನ್ನಡಿಗರು ಬಿಜೆಪಿಗೆ ಮತ ಹಾಕಿದ್ದಕ್ಕೆ ಸೇಡು ತೀರಿಸಿಕೊಳ್ಳಲು ಹೊರಟಿದೆ. ಪೆಟ್ರೋಲ್, ಡೀಸೆಲ್ ಬೆಲೆ ಜಾಸ್ತಿ ಮಾಡುವುದು ಬಡವರನ್ನು ಉಪವಾಸ ಬೀಳಿಸಿ ಸಾಯಿಸುವ ಫ್ಯಾಸಿಸ್ಟ್ ಮನಸ್ಸಿನ ಕ್ರೌರ್ಯ ಎನ್ನುತ್ತಿದ್ದ ಸಿದ್ದರಾಮಯ್ಯನವರು ಕಾಣೆಯಾಗಿದ್ದಾರೆ ಎಂದು ವಿಪಕ್ಷ ನಾಯಕ ಆರ್. ಅಶೋಕ್ ವಾಗ್ದಾಳಿ ನಡೆಸಿದ್ದಾರೆ.
ಕನ್ನಡಿಗರ ಮೇಲೆ ಸೇಡು ತೀರಿಸಿಕೊಳ್ತಿದೆ ಕಾಂಗ್ರೆಸ್!
“ಲೋಕಸಭೆ ಚುನಾವಣೆಯಲ್ಲಿ ಕನ್ನಡಿಗರು ಬಿಜೆಪಿಗೆ ಮತ ಹಾಕಿದ್ದಕ್ಕೆ ಸೇಡು ತೀರಿಸಿಕೊಳ್ಳಲು ಹೊರಟಿದೆ ಈ ಜನವಿರೋಧಿ ಕಾಂಗ್ರೆಸ್ ಸರ್ಕಾರ. ಅವೈಜ್ಞಾನಿಕ ಗ್ಯಾರೆಂಟಿಗಳಿಂದ ರಾಜ್ಯದ ಬೊಕ್ಕಸವನ್ನು ಖಾಲಿ ಮಾಡಿರುವ ಕಾಂಗ್ರೆಸ್ ಸರ್ಕಾರ ಕನ್ನಡಿಗರ ಮೇಲೆ ತೆರಿಗೆ ಭಾರ ಹೊರಿಸಿ ಖಜಾನೆ ತುಂಬಿಸಲು ಹೊರಟಿದೆ” ಎಂದು ಸಾಮಾಜಿಕ ಜಾಲತಾಣಗಳಲ್ಲಿ ಆರ್. ಅಶೋಕ್ ಕಿಡಿಕಾರಿದ್ದಾರೆ.
ಸಿದ್ದರಾಮಯ್ಯನವರು ಕಾಣೆಯಾಗಿದ್ದಾರೆ ಹುಡುಕಿಕೊಡಿ...
ಸಿದ್ದರಾಮಯ್ಯನವರು ಕಾಣೆಯಾಗಿದ್ದಾರೆ ಎಂದು ವ್ಯಂಗ್ಯವಾಡಿರುವ ಆರ್. ಅಶೋಕ್ ಕರ್ನಾಟಕ ಡಿಜಿಪಿಯನ್ನು ಟ್ಯಾಗ್ ಮಾಡಿದ್ದಾರೆ. “ಮಾನ್ಯ ಕರ್ನಾಟಕ ಡಿಜಿಪಿ ಅವರೇ, ಕಾಣೆಯಾಗಿದ್ದಾರೆ ಹುಡುಕಿಕೊಡಿ… ಪೆಟ್ರೋಲ್, ಡೀಸೆಲ್ ಬೆಲೆ ಜಾಸ್ತಿಯಾದರೆ ಜನರಿಗೆ ಸೈಕಲ್, ಎತ್ತಿನಗಾಡಿ, ಟಾಂಗಾ ಸವಾರಿಯೇ ಗತಿ ಎಂದು ಬೈಕ್ ಗಳ ಶವಯಾತ್ರೆ ನಡೆಸಿದ್ದ ಸಿದ್ದರಾಮಯ್ಯನವರು ಕಾಣೆಯಾಗಿದ್ದಾರೆ, ಹುಡುಕಿಕೊಡಿ” ಎಂದು ಹೇಳಿದ್ದಾರೆ.