ಚಿತ್ರದುರ್ಗ : ಸಮಾನತೆಗೆ ಪೂರಕವಾಗಿ ಬಡ ಜನರಿಗಾಗಿ ನಮ್ಮ ರಾಜ್ಯ ಸರ್ಕಾರ ಪಂಚ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿದೆ. ಬಡವರ ಪರ ನಿಲ್ಲುವ ಏಕೈಕ ಸರ್ಕಾರ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ನಮ್ಮ ಸರ್ಕಾರ ಎಂದು ಚಳ್ಳಕೆರೆ ಶಾಸಕರು ಹಾಗೂ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಟಿ.ರಘುಮೂರ್ತಿ ಹೇಳಿದರು.
ಚಳ್ಳಕೆರೆ ನಗರದ ಕೆಎಸ್ಆರ್ಟಿಸಿ ಬಸ್ ನಿಲ್ದಾಣದಲ್ಲಿ ಮಂಗಳವಾರ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಆಯೋಜಿಸಲಾಗಿದ್ದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಜನರಿಗಾಗಿ ಸರ್ಕಾರ ರೂಪಿಸಿರುವ ಕಾರ್ಯಕ್ರಮಗಳು ಹಾಗೂ ಪಂಚ ಗ್ಯಾರಂಟಿ ಯೋಜನೆಗಳ ಕುರಿತ ಜಾಗೃತಿ ಮೂಡಿಸುವ ವಿಶೇಷ ವಸ್ತು ಪ್ರದರ್ಶನ ಉದ್ಘಾಟಿಸಿ ಅವರು ಮಾತನಾಡಿದರು.
ಮೂಲಭೂತ ಸೌಕರ್ಯಗಳು, ಅಭಿವೃದ್ಧಿಯ ಜತೆಗೆ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿರುವುದು ಬಹಳ ಸಂತೋಷದಾಯಕವಾದುದು. ರಾಜ್ಯ ಸರ್ಕಾರ ಈಗಾಗಲೇ ಎರಡೂವರೆ ವರ್ಷ ಪೂರೈಸಿದ್ದು, ಚುನಾವಣೆ ಪೂರ್ವದಲ್ಲಿ ರಾಜ್ಯದ ಜನರಿಗೆ ನೀಡಿದ್ದ ಆಶ್ವಾಸನೆಯಂತೆ, ಪಂಚ ಗ್ಯಾರಂಟಿ ಯೋಜನೆಗಳಾದ ಶಕ್ತಿ ಯೋಜನೆ, ಅನ್ನಭಾಗ್ಯ, ಗೃಹಜ್ಯೋತಿ, ಗೃಹಲಕ್ಷ್ಮಿ, ಯುವನಿಧಿ ಯೋಜನೆಗಳನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸಿ, ನುಡಿದಂತೆ ನಡೆದಿದ್ದೇವೆ ಎಂದು ಹೇಳಿದರು.
ರಾಜ್ಯದಲ್ಲಿ ಬಡವರ, ದೀನದಲಿತರ, ರೈತರ ಮತ್ತು ಹಿಂದುಳಿದ ವರ್ಗಗಳ ಅಭಿವೃದ್ಧಿಗಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಮ್ಮ ಸರ್ಕಾರ ಜಾರಿಗೊಳಿಸಿದ ಯೋಜನೆಗಳು ಜನಪ್ರಿಯವಾಗಿವೆ. ಈ ಯೋಜನೆಗಳು ಜನರ ಜೀವನಮಟ್ಟ ಸುಧಾರಿಸಿದ್ದು, ಆರ್ಥಿಕವಾಗಿ ಸಬಲರನ್ನಾಗಿ ಮಾಡಿವೆ ಎಂದು ಹರ್ಷ ವ್ಯಕ್ತಪಡಿಸಿದರು.
ಗ್ಯಾರಂಟಿ ಯೋಜನೆಗಳು ಒಂದು ಜಾತಿ, ಧರ್ಮ ಅಥವಾ ಪಕ್ಷಕ್ಕೆ ಸೀಮಿತವಾಗಿಲ್ಲ. ಅರ್ಹತೆ ಇರುವ ಎಲ್ಲ ಫಲಾನುಭವಿಗಳಿಗೂ ಸಹ ಗ್ಯಾರಂಟಿ ಯೋಜನೆಗಳು ಯಾವುದೇ ಮಧ್ಯವರ್ತಿಗಳ ಹಾವಳಿ ಇಲ್ಲದೆ ನೇರವಾಗಿ ತಲುಪುತ್ತಿವೆ. ಆದರೆ ವಿಪಕ್ಷದವರು ರಾಜಕಾರಣ ಮಾಡಿ, ಸುಳ್ಳುಗಳನ್ನು ಹೇಳುವ ಮೂಲಕ ದಿಕ್ಕು ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಹೇಳಿದ ಅವರು, ನಮ್ಮ ಸರ್ಕಾರ ಬಡಜನರಿಗಾಗಿ, ಮಹಿಳೆಯರಿಗಾಗಿ, ಕಾರ್ಮಿಕರಿಗಾಗಿ, ವಿದ್ಯಾರ್ಥಿಗಳಿಗಾಗಿ ಯೋಜನೆಗಳನ್ನು ರೂಪಿಸಿ, ಸೌಲಭ್ಯಗಳನ್ನು ತಲುಪಿಸುತ್ತಿದೆ ಎಂದು ಹೇಳಿದರು.
ಗ್ಯಾರಂಟಿ ಯೋಜನೆಗಳ ಲಾಭ ಅರ್ಹ ಫಲಾನುಭವಿಗಳಿಗೆ ತಲುಪಿಸಬೇಕು ಹಾಗೂ ಅರ್ಹ ಫಲಾನುಭವಿಗಳಿಗೆ ಯಾವುದೇ ಕಾರಣಕ್ಕೂ ತೊಂದರೆ ಆಗಬಾರದು ಎಂಬ ಉದ್ದೇಶದಿಂದ ರಾಜ್ಯಮಟ್ಟದಿಂದ ತಾಲ್ಲೂಕು ಮಟ್ಟದವರೆಗೂ ಗ್ಯಾರಂಟಿ ಯೋಜನೆ ಪ್ರಾಧಿಕಾರ ರಚಿಸಿ, ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರುಗಳನ್ನು ನೇಮಕ ಮಾಡಿದ್ದು, ಇವರು ಸ್ಥಳೀಯ ಮಟ್ಟದ ಸಮಸ್ಯೆಗಳನ್ನು ಬಗೆಹರಿಸುವ ಕೆಲಸ ಮಾಡುತ್ತಿದ್ದಾರೆ. ನಮ್ಮ ಸರ್ಕಾರ ಕೊಟ್ಟ ಮಾತಿನಂತೆ ನಡೆದುಕೊಂಡಿದ್ದು, ಶಾಸಕನಾಗಿ ಈ ಯೋಜನೆಗಳನ್ನು ಜನರಿಗೆ ತಲುಪಿಸಿರುವುದಕ್ಕೆ ಸಂತೋಷವಾಗಿದೆ. ಸಾರ್ವಜನಿಕರು, ವಿದ್ಯಾರ್ಥಿಗಳು ಸರ್ಕಾರದ ಯೋಜನೆಗಳ ಮಾಹಿತಿ ಅರಿಯಬೇಕು ಎಂದು ತಿಳಿಸಿದರು
ಜಿಲ್ಲಾ ಗ್ಯಾರಂಟಿ ಯೋಜನೆ ಪ್ರಾಧಿಕಾರದ ಅಧ್ಯಕ್ಷರಾದ ಆರ್.ಶಿವಣ್ಣ ಗಂಜಿಗಟ್ಟೆ ಮಾತನಾಡಿ, ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಾದ ಶಕ್ತಿ ಯೋಜನೆ, ಅನ್ನಭಾಗ್ಯ, ಗೃಹಲಕ್ಷ್ಮಿ, ಗೃಹಜ್ಯೋತಿ ಮತ್ತು ಯುವನಿಧಿ ಸೇರಿದಂತೆ ಪಂಚ ಗ್ಯಾರಂಟಿ ಯೋಜನೆಗಳನ್ನು ಸರ್ಕಾರ ಜಾರಿಗೊಳಿಸಿದ್ದು, ಇವು ಬಡವರ ಪಾಲಿಗೆ ವರದಾನವಾಗಿ, ಅವರ ಆರ್ಥಿಕಾಭಿವೃದ್ಧಿಗೆ ಕೈಗನ್ನಡಿಯಾಗಿವೆ ಎಂದು ಬಣ್ಣಿಸಿದರು.
ಜಿಲ್ಲಾ ವಾರ್ತಾಧಿಕಾರಿ ಬಿ.ವಿ.ತುಕಾರಾಂರಾವ್ ಮಾತನಾಡಿ, ವಾರ್ತಾ ಮತ್ತು ಸಾರ್ವಜನಿಕ ಇಲಾಖೆ ವತಿಯಿಂದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದ ಕಲ್ಯಾಣಕ್ಕಾಗಿ ಸರ್ಕಾರ ಜಾರಿ ಮಾಡಿರುವ ಯೋಜನೆಗಳು, ಪಂಚ ಗ್ಯಾರಂಟಿ ಯೋಜನೆಗಳ ಪ್ರಗತಿ ಕುರಿತು ಈ ವಿಶೇಷ ವಸ್ತು ಪ್ರದರ್ಶನದಲ್ಲಿ ಪ್ರಗತಿ ಮಾಹಿತಿಯನ್ನು ಸಾರ್ವಜನಿಕರಿಗೆ ಅರಿವು ಮೂಡಿಸುವ ಉದ್ದೇಶದಿಂದ ವಸ್ತು ಪ್ರದರ್ಶನ ಆಯೋಜಿಸಲಾಗಿದೆ. ವಸ್ತು ಪ್ರದರ್ಶನವು ಮೂರು ದಿನಗಳ ಕಾಲ ಏರ್ಪಡಿಸಿದ್ದು, ಇದೇ ಜ.22 ರವರೆಗೆ ಸಾರ್ವಜನಿಕರ ವೀಕ್ಷಣೆಗೆ ಲಭ್ಯವಿದ್ದು, ಸಾರ್ವಜನಿಕರು, ಶಾಲಾ-ಕಾಲೇಜು ವಿದ್ಯಾರ್ಥಿಗಳು ಭೇಟಿ ನೀಡಿ, ವೀಕ್ಷಿಸಬಹುದಾಗಿದೆ. ಎಂದು ಹೇಳಿದರು.
ವಸ್ತು ಪ್ರದರ್ಶನದ ಮಾಹಿತಿ:
********** ವಸ್ತು ಪ್ರದರ್ಶನವು ರಾಜ್ಯ ಸರ್ಕಾರ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಜನರಿಗಾಗಿ ರೂಪಿಸಿರುವ ಕಾರ್ಯಕ್ರಮಗಳಾದ ಬುಡಕಟ್ಟು ಕಲೆ ಮತ್ತು ಸಂಸ್ಕøತಿ, ಪರಿಶಿಷ್ಟ ಪಂಗಡ ಪೌಷ್ಟಿಕ ಆಹಾರ ಯೋಜನೆ, ಲಿಡ್ಕರ್ ಅನುಷ್ಠಾನ ಕಾರ್ಯಕ್ರಮ, ಎಸ್.ಸಿ.ಎಸ್.ಪಿ/ಟಿ.ಎಸ್.ಪಿ ವಿವಾಹಗಳಿಗೆ ಪೆÇ್ರೀತ್ಸಾಹಧನ, ಎಸ್.ಸಿ.ಎಸ್.ಪಿ/ಟಿ.ಎಸ್.ಪಿ ಆಯವ್ಯಯ, ಎಸ್.ಸಿ.ಎಸ್.ಪಿ/ಟಿ.ಎಸ್.ಪಿ ಕ್ರೈಸ್ ವಸತಿ ಶಾಲೆಗಳಿಗೆ ಪ್ರವೇಶ, ಎಸ್.ಸಿ.ಎಸ್.ಪಿ/ಟಿ.ಎಸ್.ಪಿ ಶೈಕ್ಷಣಿಕ ಉತ್ತೇಜನ ಕಾರ್ಯಕ್ರಮ, ಎಸ್.ಸಿ.ಎಸ್.ಪಿ/ಟಿ.ಎಸ್.ಪಿ ಪ್ರತಿಭಾವಂತರಿಗೆ ಪೆÇ್ರೀತ್ಸಾಹಧನ, ಎಸ್.ಸಿ.ಎಸ್.ಪಿ/ಟಿ.ಎಸ್.ಪಿ ವಿದ್ಯಾರ್ಥಿ ವೇತನ ಸೇರಿದಂತೆ ಸಮಾಜ ಕಲ್ಯಾಣ ಇಲಾಖೆ ಹಾಗೂ ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಗಳ ನಿಗಮ-ಮಂಡಳಿಗಳು, 2011 ರ ಜನಗಣತಿಯಂತೆ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿರುವ ಪ.ಜಾತಿ/ಪ.ಪಂಗಡದ ಜನಸಂಖ್ಯೆ ಶೇಕಡವಾರು ಮಾಹಿತಿ ಫಲಕ ಮತ್ತು ರಾಜ್ಯ ಸರ್ಕಾರ ಅನುμÁ್ಠನಗೊಳಿಸಿದ ಪಂಚ ಗ್ಯಾರಂಟಿ ಯೋಜನೆಗಳ ಪ್ರಗತಿಯ ಮಾಹಿತಿ ಫಲಕ ಹಾಗೂ ಸರ್ಕಾರದ ವಿವಿಧ ಯೋಜನೆಗಳ ಸಾಧನೆಯ ಮಾಹಿತಿ ಫಲಕಗಳು ಒಳಗೊಂಡಿದೆ.
ಜನರ ಗಮನಸೆಳೆದ ಛಾಯಾಚಿತ್ರಗಳು:
**********ಚಳ್ಳಕೆರೆ ಕೆಎಸ್ಆರ್ಟಿಸಿ ಬಸ್ ನಿಲ್ದಾಣದಲ್ಲಿ ಆಯೋಜಿಸಲಾಗಿದ್ದ ವಿಶೇಷ ಛಾಯಾಚಿತ್ರಗಳ ಪ್ರದರ್ಶನ ಸಾರ್ವಜನಿಕರ ಗಮನ ಸೆಳೆಯಿತು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪ್ರತಿಮೆಯ ಎದುರು ಹಾಗೂ ವಿವಿಧ ಛಾಯಾಚಿತ್ರಗಳು ಮುಂದೆ ನಿಂತು ಜನಪ್ರತಿನಿಧಗಳಿಂದ ಮೊದಲುಗೊಂಡು, ಸಾರ್ವಜನಿಕರು ಕೂಡ ಸೆಲ್ಫಿ ಕ್ಲಿಕ್ಕಿಸಿಕೊಂಡರು.
ಕಾರ್ಯಕ್ರಮದಲ್ಲಿ ಜಿಲ್ಲಾ ಗ್ಯಾರಂಟಿ ಯೋಜನೆ ಪ್ರಾಧಿಕಾರದ ಅಧ್ಯಕ್ಷರಾದ ಆರ್.ಶಿವಣ್ಣ ಗಂಜಿಗಟ್ಟೆ ಉಪಾಧ್ಯಕ್ಷ ಡಿ.ಎನ್.ಮೈಲಾರಪ್ಪ, ಚಳ್ಳಕೆರೆ ತಾಲ್ಲೂಕು ಅಧ್ಯಕ್ಷ ಗದ್ದಿಗೆ ತಿಪ್ಪೇಸ್ವಾಮಿ, ಸದಸ್ಯರಾದ ಗುಜ್ಜಾರಪ್ಪ, ಕವಿತಾ ದಳವಾಯಿ, ಕೆಡಿಪಿ ಸದಸ್ಯ ಸುರೇಶ್, ಮುಖಂಡರಾದ ಪುರುಷೋತ್ತಮ, ಚೌಳೂರು ಪ್ರಕಾಶ್, ಮಲ್ಲಿಕಾರ್ಜುನ್, ಅಂಜಿನಪ್ಪ, ಆಂಜನೇಯ, ಜನಾರ್ಧನ್, ಆರ್.ತಿಪ್ಪೇರುದ್ರಪ್ಪ, ಹನುಮಂತರೆಡ್ಡಿ, ತಿಪ್ಪೇಸ್ವಾಮಿ, ವೀರಭದ್ರಪ್ಪ, ಶಶಿಧರ್, ಕೆಎಸ್ಆರ್ಟಿಸಿ ಚಿತ್ರದುರ್ಗ ವಿಭಾಗದ ಡಿಟಿಒ ಕೆ.ಬಸವರಾಜ್ ಸೇರಿದಂತೆ ಸಾರ್ವಜನಿಕರು ಇದ್ದರು.

































