ಹೆಚ್ಚುತ್ತಿರುವ ಡೆಂಗ್ಯೂ ಪ್ರಕರಣ: ಸ್ವಯಂ ಪ್ರೇರಿತ ಪಿಐಎಲ್‌ ದಾಖಲಿಸಿಕೊಂಡ ಹೈಕೋರ್ಟ್

ಬೆಂಗಳೂರು: ಬೆಂಗಳೂರು ಮಹಾನಗರವೂ ಸೇರಿದಂತೆ ರಾಜ್ಯದ ಗ್ರಾಮೀಣ ಭಾಗಗಳಲ್ಲಿ ಡೆಂಗ್ಯೂ ಜ್ವರ ಪ್ರಕರಣಗಳ ಹೆಚ್ಚಳವನ್ನು ಗಂಭೀರವಾಗಿ ಪರಿಗಣಿಸಿರುವ ಹೈಕೋರ್ಟ್ ಸ್ವಯಂ ಪ್ರೇರಿತ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್) ದಾಖಲಿಸಿಕೊಂಡಿದೆ.

ಬುಧವಾರ ಬೆಳಗಿನ ಕಲಾಪ ಆರಂಭವಾಗುತ್ತಿದ್ದಂತೆಯೇ ಮುಖ್ಯ ನ್ಯಾಯಮೂರ್ತಿ ಎನ್.ವಿ.ಅಂಜಾರಿಯಾ ನೇತೃತ್ವದ ವಿಭಾಗೀಯ ನ್ಯಾಯಪೀಠವು ಮುಕ್ತ ಕಲಾಪದಲ್ಲಿ ಈ ವಿಷಯವನ್ನು ಪ್ರಸ್ತಾಪಿಸಿತು.

ರಾಯಚೂರು ನಿವಾಸಿ ಎಚ್.ಕೆ. ವಿಜಯಕುಮಾರ್ ಅವರು ವಾಚಕರವಾಣಿಗೆ ಬರೆದ ಪತ್ರವನ್ನು ಆಧರಿಸಿ ಈ ಸ್ವಯಂಪ್ರೇರಿತ ಪಿಐಎಲ್ ದಾಖಲಿಸಲು ಆದೇಶಿಸಲಾಗುತ್ತಿದೆ ಎಂದು ಮುಖ್ಯ ನ್ಯಾಯಮೂರ್ತಿಗಳು ತಿಳಿಸಿದರು.

Advertisement

ರಾಜ್ಯದ ಮುಖ್ಯ ಕಾರ್ಯದರ್ಶಿ ಹಾಗೂ ಆರೋಗ್ಯ ಇಲಾಖೆಯ ಕಾರ್ಯದರ್ಶಿಗೆ ತುರ್ತು ನೋಟಿಸ್ ಜಾರಿಗೊಳಿಸಲು ಆದೇಶಿಸಿದರು.ಪ್ರತಿವಾದಿಗಳಾದ ಸಂಬಂಧಿತ ಪ್ರಾಧಿಕಾರಗಳಿಗೆ ಅರ್ಜಿ ರವಾನೆಯಾಗುವವರೆಗೆ ಕಾಯಬಾರದು. ತಕ್ಷಣವೇ ಕಾರ್ಯ ಪ್ರವೃತ್ತರಾಗಿ ಇಂದೇ ನೋಟಿಸ್ ತಲುಪುವಂತೆ ನೋಡಿಕೊಳ್ಳಬೇಕು ಎಂದು ಹೈಕೋರ್ಟ್ ರಿಜಿಸ್ಟ್ರಾರ್ ಜನರಲ್ ಅವರಿಗೆ ಸೂಚಿಸಿದರು.

ಸರ್ಕಾರದ ಪರವಾಗಿ ನೋಟಿಸ್ ಪಡೆಯುವುದಾಗಿ ಸರ್ಕಾರಿ ವಕೀ ಲ ಎಸ್.ಎಸ್. ಮಹೇಂ ದ್ರ ನ್ಯಾಯಪೀಠಕ್ಕೆ ತಿಳಿಸಿದರು. ಇದೇ ವೇಳೆ ವಿಡಿಯೊ ಕಾನ್ಫರೆನ್ಸ್ ಮೂಲಕ
ಹಾಜರಾಗಿದ್ದ ಅಡ್ವೊಕೇಟ್ ಜನರಲ್ ಕೆ. ಶಶಿಕಿರಣ ಶೆಟ್ಟಿ ಅವರು, ನ್ಯಾಯಾಲಯದ ಆದೇಶವನ್ನು ತಕ್ಷಣವೇ ಮುಖ್ಯ ಕಾರ್ಯದರ್ಶಿ ಮತ್ತು ಸಂಬಂಧಿಸಿದ ಅಧಿಕಾರಿಗಳ ಗಮನಕ್ಕೆ ತಂದು ಮುಂದಿನ ವಿಚಾರಣೆ ವೇಳೆಗೆ ಅನುಪಾಲನಾ ವರದಿ ಸಲ್ಲಿಸಲಾಗುವುದು ಎಂದು ತಿಳಿಸಿದರು.

ಇದನ್ನು ದಾಖಲಿಸಿಕೊಂಡ ನ್ಯಾಯಪೀಠ, ಡೆಂಗ್ಯೂ ನಿಯಂತ್ರಣಕ್ಕೆ ಕೈಗೊಂಡಿರುವ ಕ್ರಮಗಳ ಕುರಿತು ಇದೇ 23ರೊಳಗೆ ಪ್ರತಿಕ್ರಿಯೆ ಸಲ್ಲಿಸಿ ಎಂದು ನಿರ್ದೇಶಿಸಿ ವಿಚಾರಣೆಯನ್ನು ಇದೇ 23ಕ್ಕೆ ಮುಂದೂಡಿದೆ.

 

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement