ಕೇಂದ್ರ ಸರ್ಕಾರದಿಂದ ಮಂಗಳೂರಿಗೆ 100 ಹೊಸ ಇಲೆಕ್ಟ್ರಿಕ್‌ ಬಸ್‌ ಮಂಜೂರು, ಶೀಘ್ರದಲ್ಲೇ ಸಂಚಾರ ; ಸಂಸದ ಕ್ಯಾ.ಬ್ರಿಜೇಶ್‌ ಚೌಟ

WhatsApp
Telegram
Facebook
Twitter
LinkedIn

ಮಂಗಳೂರು : ಪ್ರಧಾನ ಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ಪ್ರಧಾನಮಂತ್ರಿ ಇ-ಬಸ್ ಸೇವಾ ಯೋಜನೆಯಡಿ ಮಂಗಳೂರಿಗೆ ಒಟ್ಟು 100 ಹೊಸ ಇಲೆಕ್ಟ್ರಿಕ್‌ ಬಸ್‌ಗಳನ್ನು ಮಂಜೂರು ಮಾಡಿರುವುದಾಗಿ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್‌ ಚೌಟ ತಿಳಿಸಿದ್ದಾರೆ.

ಮುಡಿಪು ಕಂಬಳಪದವಿನಲ್ಲಿ ನಿರ್ಮಾಣಗೊಂಡ ವಿದ್ಯುನ್ಮಾನ ವಾಹನ ಚಾಲನಾ ಪರೀಕ್ಷಾ ಪಥಗಳ ಕೇಂದ್ರದ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಅವರು, ದೇಶದಲ್ಲಿ ವಾಹನಗಳಿಂದಾಗುವ ವಾಯುಮಾಲಿನ್ಯ ತಡೆಗಟ್ಟುವುದಕ್ಕೆ ಕೇಂದ್ರ ಸರ್ಕಾರವು ದೇಶದೆಲ್ಲೆಡೆ ಇಲೆಕ್ಟ್ರಿಕ್‌ ಬಸ್‌ಗಳ ಬಳಕೆಯನ್ನು ಹೆಚ್ಚು ಜನಪ್ರಿಯಗೊಳಿಸುತ್ತಿದೆ. ಅದರಂತೆ ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯದಿಂದ ಕರ್ನಾಟಕಕ್ಕೆ ಒಟ್ಟು 750 ಎಲೆಕ್ಟ್ರಿಕಲ್‌ ಬಸ್‌ಗಳು ಮಂಜೂರಾಗಿದ್ದು, ಆ ಪೈಕಿ ಮಂಗಳೂರು ನಗರಕ್ಕೆ 100 ಬಸ್‌ಗಳನ್ನು ಮಂಜೂರುಗೊಳಿಸಲಾಗಿದೆ. ಬೆಳಗಾವಿ, ಹುಬ್ಬಳ್ಳಿ-ಧಾರವಾಡ, ಕಲಬುರ್ಗಿ, ಮೈಸೂರು, ಶಿವಮೊಗ್ಗ ಸೇರಿದಂತೆ ಒಟ್ಟು 10 ನಗರಗಳಿಗೆ ತಲಾ 100 ಎಲೆಕ್ಟ್ರಿಕ್ ಬಸ್‌ಗಳನ್ನು ಮಂಜೂರು ಮಾಡಲಾಗಿದೆ. ಪರಿಸರ ಸ್ನೇಹಿಯಾದ ಈ ಬಸ್‌ಗಳು ಶೀಘ್ರದಲ್ಲೇ ಮಂಗಳೂರು ನಗರದ ವಿವಿಧ ರೂಟ್‌ಗಳಲ್ಲಿ ರಸ್ತೆಗಿಳಿಯಲಿದೆ ಎಂದು ಕ್ಯಾ. ಚೌಟ ಹೇಳಿದ್ದಾರೆ.

ವಿದ್ಯುತ್‌ ಚಾಲಿತ ಈ ಎಲೆಕ್ಟ್ರಿಕ್‌ ಬಸ್‌ಗಳಿಗೆ ಸೂಕ್ತ ಚಾರ್ಜಿಂಗ್‌ ಸ್ಟೇಷನ್‌, ಬಸ್‌ ಡಿಪೋಗಳು ಹಾಗೂ ವಾಹನಗಳ ನಿರ್ವಹಣಾ ವ್ಯವಸ್ಥೆ ಸೇರಿದಂತೆ ಅಗತ್ಯ ಮೂಲಸೌಕರ್ಯದ ಅಗತ್ಯವಿದೆ. ಹೀಗಿರುವಾಗ, ಕೆಎಸ್‌ಆರ್‌ಟಿಸಿ ಕೂಡಲೇ ಈ 100 ಎಲೆಕ್ಟ್ರಿಕಲ್‌ ಬಸ್‌ಗಳ ನಿರ್ವಹಣೆಗೆ ಮಂಗಳೂರಿನಲ್ಲಿ ಸೂಕ್ತ ಜಾಗ ಗುರುತಿಸಬೇಕಿದೆ. ಇತ್ತೀಚೆಗೆ ನಡೆದಿರುವ ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ (ದಿಶಾ) ಸಭೆಯಲ್ಲಿಯೂ ಈ ಬಗ್ಗೆ ಪ್ರಸ್ತಾಪಿಸಿದ್ದು, ಮಂಗಳೂರಿನಲ್ಲಿ ಎಲೆಕ್ಟ್ರಿಕ್‌ ಬಸ್‌ಗಳ ನಿರ್ವಹಣೆಗೆ ಜಾಗ ಸೇರಿದಂತೆ ಸೂಕ್ತ ಮೂಲಸೌಕರ್ಯ ಒದಗಿಸಲು ಕ್ರಮ ಕೈಗೊಳ್ಳುವಂತೆ ಜಿಲ್ಲಾಡಳಿತಕ್ಕೂ ಸೂಚಿಸಿದ್ದೇನೆ. ಅಲ್ಲದೆ, ಈ ನಿಟ್ಟಿನಲ್ಲಿ ರಾಜ್ಯ ಸಾರಿಗೆ ಇಲಾಖೆಯು ಹೆಚ್ಚಿನ ಮುತುವರ್ಜಿ ವಹಿಸಿ ಅಗತ್ಯ ಮೂಲಸೌಕರ್ಯ ಒದಗಿಸುವಲ್ಲಿ ಸೂಕ್ತ ಕ್ರಮ ಜರುಗಿಸಬೇಕೆಂದು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಸಚಿವ ರಾಮಲಿಂಗಾ ರೆಡ್ಡಿ ಅವರಿಗೂ ಇದೇ ಸಂದರ್ಭದಲ್ಲಿ ಕ್ಯಾ. ಚೌಟ ಅವರು ಮನವಿ ಮಾಡಿದ್ದು, ಇದಕ್ಕೆ ಸಚಿವರು ಸಕಾರಾತ್ಮಕವಾಗಿ ಸ್ಪಂದಿಸಿದರು.

ಕೇಂದ್ರ ಸರ್ಕಾರಕ್ಕೆ ಧನ್ಯವಾದ

ಮಂಗಳೂರಿಗೆ ಕೇಂದ್ರ ಸರ್ಕಾರವು 100 ಬಸ್‌ಗಳನ್ನು ಮಂಜೂರು ಮಾಡಿರುವುದಕ್ಕೆ ಕ್ಯಾ. ಚೌಟ ಅವರು ವಸತಿ ಹಾಗೂ ನಗರಾಭಿವೃದ್ಧಿ ಸಚಿವಾಲಯದ ಸಚಿವರಾದ ಮನೋಹರ್‌ ಲಾಲ್‌ ಖಟ್ಟರ್‌, ಇಲಾಖೆ ಅಧಿಕಾರಿಗಳು ಹಾಗೂ ಪರಿಸರ ಸ್ನೇಹಿ ಬಸ್‌ಗಳ ಸಂಚಾರಕ್ಕೆ ಒತ್ತು ನೀಡುತ್ತಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೂ ಕ್ಯಾ. ಚೌಟ ಅವರು ಜಿಲ್ಲೆಯ ಜನರ ಪರವಾಗಿ ಕೃತಜ್ಞತೆ ಸಲ್ಲಿಸಿದ್ದಾರೆ.

BC Suddi   About Us
BC Suddi Bcsuddi is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World. Read More
For Feedback - [email protected]

Related News

LATEST Post

WhatsApp

Don’t Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.

Powered By KhushiHost

WhatsApp Icon Telegram Icon