ಬೆಂಗಳೂರು ಸೇರಿದಂತೆ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಸೋಮವಾರ ಭಾರಿ ಮಳೆ ಸುರಿದಿದ್ದು, ಅನೇಕ ಅವಾಂತರಗಳು ಸಂಭವಿಸಿವೆ. ಮಳೆ ಸಂಬಂಧಿತ ಅವಘಡಗಳಲ್ಲಿ ರಾಜ್ಯದಾದ್ಯಂತ ನಾಲ್ವರು ಮೃತಪಟ್ಟಿದ್ದಾರೆ. ಬೆಂಗಳೂರಿನಲ್ಲೇ ಮೂರು ಸಾವುಗಳು ಸಂಭವಿಸಿವೆ.
ಸೋಮವಾರ ಬೆಳಗ್ಗೆಯಷ್ಟೇ ಬೆಂಗಳೂರಿನಲ್ಲಿ ಉದ್ಯೋಗಿಯೊಬ್ಬರನ್ನು ಬಲಿ ಪಡೆದಿದ್ದ ಮಳೆ, ರಾತ್ರಿ ಹೊತ್ತಿಗೆ ಮತ್ತಿಬ್ಬರನ್ನು ಬಲಿ ಪಡೆದಿದೆ. ಬಿಟಿಎಂ ಲೇಔಟ್ನ 2ನೇ ಹಂತದ ಎನ್ಎಸ್ ಪಾಳ್ಯದ ಮಧುವನ ಅಪಾರ್ಟ್ಮೆಂಟ್ ಬೇಸ್ಮೆಂಟ್ನಲ್ಲಿ ದುರ್ಘಟನೆ ಸಂಭವಿಸಿದೆ. ಮಳೆಯಿಂದ ಬೇಸ್ಮೆಂಟ್ ಜಲಾವೃತವಾಗಿತ್ತು. ಮೋಟಾರ್ ಮೂಲಕ ನೀರು ಹೊರಹಾಕಲು ಯತ್ನಿಸುತ್ತಿದ್ದಾಗ ಕರೆಂಟ್ ಶಾಕ್ ತಗುಲಿ ಅಪಾರ್ಟ್ಮೆಂಟ್ ನಿವಾಸಿ ಮನೋಹರ ಕಾಮತ್ ಮತ್ತು ನೇಪಾಳ ಮೂಲದ 9 ವರ್ಷದ ಬಾಲಕ ದಿನೇಶ್ ಮೃತಪಟ್ಟಿದ್ದಾರೆ.
ಬೆಂಗಳೂರಿನಲ್ಲಿ 2 ಕಡೆ ಮಳೆ ಹಾನಿ ಪ್ರದೇಶಕ್ಕೆ ಭೇಟಿ ನೀಡಿ ಡಿಸಿಎಂ ಡಿಕೆ ಶಿವಕುಮಾರ್ ಪರಿಶೀಲನೆ ಮಾಡಿದ್ದಾರೆ. ಹಾನಿಯ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದಿದ್ದಾರೆ. ಬಳಿಕ ಮಾತನಾಡಿದ ಅವರು, ಯಾರಿಗೆ ಪರಿಹಾರ ಕೊಡಬೇಕೋ ಅವರಿಗೆ ಕೊಡುತ್ತೇವೆ. ಉಳಿದುಕೊಳ್ಳಲು ಜಾಗದ ವ್ಯವಸ್ಥೆ ಮಾಡುತ್ತೇವೆ ಎಂದು ಭರವಸೆ ನೀಡಿದ್ದಾರೆ.