ಮಂಗಳೂರು : ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್ ಸಂತೋಷ್ ವಿರುದ್ಧ ಅವಹೇಳನ ಆರೋಪ ಸೇರಿದಂತೆ ಹಲವು ಪ್ರಕರಣಗಳಲ್ಲಿ ವಿಚಾರಣೆ ಎದುರಿಸುತ್ತಿರುವ ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬ್ರಹ್ಮಾವರ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್.ಸಂತೋಷ್ ವಿರುದ್ಧ ಅವಹೇಳನಕಾರಿ ಭಾಷಣ ಮಾಡಿರುವ ಆರೋಪಕ್ಕೆ ಸಂಬಂಧಿಸಿ ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧ ಉಡುಪಿಯ ಬ್ರಹ್ಮಾವರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಈ ಬಗ್ಗೆ ಬುಧವಾರ ವಿಚಾರಣೆಗೆ ಹಾಜರಾಗುವಂತೆ ತಿಮರೋಡಿಗೆ ಪೊಲೀಸರು ನೋಟಿಸ್ ನೀಡಿದ್ದರು. ಆದರೆ ಅವರು ವಿಚಾರಣೆಗೆ ಹಾಜರಾಗಿರಲಿಲ್ಲ. ಈ ಹಿನ್ನೆಲೆಯಲ್ಲಿ ಗುರುವಾರ ಬೆಳಗ್ಗೆ ಬ್ರಹ್ಮಾವರ ಠಾಣಾ ಪೊಲೀಸರು ಉಜಿರೆ ತಿಮರೋಡಿಯಲ್ಲಿರುವ ಮಹೇಶ್ ಶೆಟ್ಟಿಯ ಮನೆಗೆ ಆಗಮಿಸಿದ್ದು, ಅವರನ್ನು ವಶಕ್ಕೆ ಪಡೆಯಲು ಮುಂದಾಗಿದ್ದರು. ವಿಷಯ ತಿಳಿದ ಅವರ ಬೆಂಬಲಿಗ ಯುವಕರ ತಂಡ ಮನೆಯ ಎದುರು ಜಮಾಯಿಸಿತ್ತು.
ಸ್ಥಳದಲ್ಲಿ ಗೊಂದಲದ ವಾತಾವರಣ ಸೃಷ್ಟಿಯಾಗಿತ್ತು. ಬಳಿಕ ತಿಮರೋಡಿ ಪರ ವಕೀಲರು ಪೊಲೀಸರ ಜೊತೆ ಮಾತನಾಡಿ, ತಿಮರೋಡಿ ಸ್ವತಃ ಠಾಣೆಗೆ ಹಾಜರಾಗುವುದಾಗಿ ಹೇಳಿದರು. ಅದರಂತೆ ತಿಮರೋಡಿ ಖಾಸಗಿ ಕಾರಿನಲ್ಲಿ ಉಡುಪಿ ಪೊಲೀಸರ ಜೊತೆ ತೆರಳಿದ್ದಾರೆ. ಸೌಜನ್ಯಪರ ಹೋರಾಟಗಾರರಾದ ಗಿರೀಶ್ ಮಟ್ಟಣ್ಣನವರ್, ಜಯಂತ್ ಟಿ. ಕೂಡಾ ಕಾರಿನಲ್ಲಿ ತೆರಳಿದ್ದಾರೆ