ಪ್ರಜ್ವಲ್‌ ರೇವಣ್ಣ ಪ್ರಕರಣದ ಬಗ್ಗೆ ಮೊದಲ ಬಾರಿ ಮಾತನಾಡಿದ ಮೋದಿ : ಈ ಬಗ್ಗೆ ಏನಂದ್ರು..!?

ನವದೆಹಲಿ : ಪ್ರಜ್ವಲ್​ ರೇವಣ್ಣ ಅವರ ವಿರುದ್ಧ ಅಶ್ಲೀಲ ವಿಡಿಯೋ ಪ್ರಕರಣದ ಕುರಿತು ಖುದ್ದು ಪ್ರಧಾನಿ ನರೇಂದ್ರ ಮೋದಿ ಮೊದಲ ಬಾರಿಗೆ ಮಾತನಾಡಿದ್ದಾರೆ.

ಪ್ರಜ್ವಲ್‌ ರೇವಣ್ಣ ಅವರಂತಹ ವ್ಯಕ್ತಿಗಳ ವಿರುದ್ಧ ನಾವು ಶೂನ್ಯ ಸಹಿಷ್ಣುರಾಗಿದ್ದೇವೆ. ಅಂತಹ ವ್ಯಕ್ತಿಗಳ ವಿರುದ್ಧ ಸಹನೆ ತೋರಬೇಕಾದ ಅಗತ್ಯ ಇಲ್ಲ. ನಿರ್ದಾಕ್ಷಿಣ್ಯವಾಗಿ ಕ್ರಮ ತೆಗೆದುಕೊಳ್ಳುತ್ತೇವೆ. ಆದ್ರೆ, ಕರ್ನಾಟಕದ ಕಾಂಗ್ರೆಸ್‌ ಸರ್ಕಾರವೇ ಜೆಡಿಎಸ್‌ ಸಂಸದ ಪ್ರಜ್ವಲ್ ರೇವಣ್ಣ ಅವರನ್ನ ದೇಶದಿಂದ ಹೊರಗೆ ಹೋಗಲು ಅವಕಾಶ ಮಾಡಿಕೊಟ್ಟಿದೆ ಎಂದು ಕಿಡಿಕಾರಿದ್ದಾರೆ. ಈ ಮೂಲಕ ಪ್ರಜ್ವಲ್​ ಪ್ರಕರಣದ ಬಗ್ಗೆ ಮೋದಿ ತಮ್ಮ ನಿಲುವು ಸ್ಪಷ್ಟಪಡಿಸಿದ್ದಾರೆ.

ಖಾಸಗಿ ವಾಹಿನಿಗೆ ನೀಡಿದ ಸಂದರ್ಶನದಲ್ಲಿ ಪ್ರಜ್ವಲ್ ರೇವಣ್ಣ ಪ್ರಕರಣದ ಬಗ್ಗೆ ಮಾತನಾಡಿರುವ ಮೋದಿ, ಇದು ಕಾನೂನು ಮತ್ತು ಸುವ್ಯವಸ್ಥೆಗೆ ಸಂಬಂಧಿಸಿದ ವಿಷಯವಾಗಿರುವ ಕಾರಣ ಕ್ರಮ ಜರುಗಿಸುವ ಜವಾಬ್ದಾರಿ ರಾಜ್ಯ ಸರ್ಕಾರದ ಮೇಲೆ ಇದೆ. ಸಹಸ್ರಾರು ವೀಡಿಯೋಗಳ ಇವೆ ಎಂದಾದರೆ ಅವು ಜೆಡಿಎಸ್ ಪಕ್ಷವು ಕಾಂಗ್ರೆಸ್​ನೊಂದಿಗೆ ಮೈತ್ರಿ ಮಾಡಿಕೊಂಡಿದ್ದ ಅವಧಿಯದ್ದಾಗಿವೆ ಎನ್ನುವುದು ತಿಳಿದುಬಂದಿದೆ. ಅವರು ಅಧಿಕಾರದಲ್ಲಿ ಇದ್ದಾಗ ಆ ವೀಡಿಯೋಗಳನ್ನು ಒಟ್ಟುಗೂಡಿಸಿಕೊಂಡು, ಈಗ ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಒಕ್ಕಲಿಗರು ಪ್ರಾಬಲ್ಯವಿರುವ ಕ್ಷೇತ್ರದಲ್ಲಿ ಆ ವೀಡಿಯೋಗಳನ್ನು ಬಿಡುಗಡೆ ಮಾಡಿದ್ದಾರೆ ಎಂದು ಮೋದಿ ಆರೋಪಿಸಿದ್ದಾರೆ.

Advertisement

ಆತ ದೇಶದಿಂದ ಹೊರಹೋದ ಬೆನ್ನಲ್ಲಿಯೇ ಈ ವೀಡಿಯೋಗಳನ್ನು ಬಿಡುಗಡೆ ಮಾಡಲಾಗಿದ್ದು, ಇಡೀ ಬೆಳವಣಿಗೆ ಬಹಳ ಅನುಮಾನಾಸ್ಪದವಾಗಿದೆ. ರಾಜ್ಯ ಸರಕಾರಕ್ಕೆ ಮಾಹಿತಿ ಇದ್ದಿದ್ದರೆ ನಿಗಾ ಇಡಬೇಕಿತ್ತು. ವಿಮಾನ ನಿಲ್ದಾಣದಲ್ಲಿ ಹೆಚ್ಚಿನ ಪೊಲೀಸರನ್ನು ನಿಯೋಜಿಸಬೇಕಿತ್ತು ಎಂದು ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.

ನೀವು (ಕಾಂಗ್ರೆಸ್‌ ಸರ್ಕಾರ) ಏನನ್ನೂ ಮಾಡಲಿಲ್ಲ. ಕನಿಷ್ಠ ಪಕ್ಷ ಕೇಂದ್ರ ಸರ್ಕಾರಕ್ಕೂ ಇದರ ಬಗ್ಗೆ ಮಾಹಿತಿಯೂ ಸಹ ನೀಡಲಿಲ್ಲ. ಅಂದರೆ ಇದು ಪೊಲಿಟಿಕಲ್ ಗೇಮ್ ಆಗಿತ್ತು. ಅವರೊಂದಿಗೆ ಮೈತ್ರಿ ಇದ್ದ ಕಾಲದಿಂದಲೂ ಈ ವೀಡಿಯೋಗಳನ್ನು ಸಂಗ್ರಹಿಸಿ ಇಡಲಾಗಿತ್ತು. ಹಾಗಂತ ನಮ್ಮ ವಿಚಾರ ಇದಲ್ಲ. ಯಾವುದೇ ಅಪರಾಧಿಗಳನ್ನು ಬಿಡಬಾರದು ಎನ್ನುವುದಷ್ಟೇ ನಮ್ಮ ಉದ್ದೇಶ. ನಮ್ಮ ದೇಶದಲ್ಲಿ ಇಂತಹ ರಾಜಕೀಯ ಆಟಗಳನ್ನು ನಿಲ್ಲಿಸಬೇಕಾದ ಅನಿವಾರ್ಯತೆ ಇದೆ ಎಂದು ವಾಗ್ದಾಳಿ ನಡೆಸಿದರು.

ಮೋದಿಯವರಿಗೆ ಸಂಬಂಧಿಸಿದಂತೆ, ಬಿಜೆಪಿಗೆ ಸಂಬಂಧಿಸಿದಂತೆ, ನಮ್ಮ ಸಂವಿಧಾನಕ್ಕೆ ಸಂಬಂಧಿಸಿದಂತೆ, ಅಂತವರ ವಿರುದ್ಧ ಶೂನ್ಯ ಸಹಿಷ್ಣುತೆ ಇರಬೇಕೆಂದು ನನ್ನ ಸ್ಪಷ್ಟ ಅಭಿಪ್ರಾಯ. ಲಭ್ಯವಿರುವ ಕಾನೂನು ಆಯ್ಕೆಗಳಲ್ಲಿ ಇಂತವರಿಗೆ ಕಠಿಣ ಶಿಕ್ಷೆ ಆಗಬೇಕು. ನಾವು ಆತನನ್ನು ವಾಪಾಸ್‌ ಕರೆತರಬೇಕು. ಕಠಿಣ ಕ್ರಮ ಕೈಗೊಳ್ಳಬೇಕು. ಇದರಲ್ಲಿ ಯಾವುದೇ ಅನುಮಾನಗಳೂ ಇರಕೂಡದು ಎಂದು ಸ್ಪಷ್ಟಪಡಿಸಿದ್ದಾರೆ. ಈ ಮೂಲಕ ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ತಮ್ಮ ಸ್ಪಷ್ಟ ನಿಲುವು ತಿಳಿಸಿದ್ದಾರೆ.

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement