ಹೃದಯದ ಆರೋಗ್ಯ ಕಾಪಾಡಲು ಪಂಚಸೂತ್ರಗಳು

ಇತ್ತೀಚಿನ ವರ್ಷಗಳಲ್ಲಿ ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುವವರು ಮತ್ತು ಸಾವನ್ನಪ್ಪುವವರ ಸಂಖ್ಯೆ ಹೆಚ್ಚಾಗುತ್ತಿದೆ. ಬದಲಾದ ಜೀವನ ಶೈಲಿ, ಒತ್ತಡ, ವ್ಯಾಯಾಮದ ಕೊರತೆ, ವಾಯು ಮಾಲಿನ್ಯ ಮುಂತಾದವು ಇದಕ್ಕೆ ಕಾರಣವಾಗಿದೆ.

ಹೃದಯದ ಆರೋಗ್ಯವನ್ನು ಕಾಪಾಡಿಕೊಳ್ಳುವುದು ಬಹುಮುಖ್ಯವಾಗಿದೆ. ಹೃದ್ರೋಗಿಗಳು ನಿತ್ಯದ ಬದುಕಿನಲ್ಲಿ ಪಂಚಸೂತ್ರ ಅಳವಡಿಸಿಕೊಳ್ಳುವ ಮೂಲಕ ಆರೋಗ್ಯವನ್ನು ಚೆನ್ನಾಗಿ ಇಟ್ಟುಕೊಳ್ಳಬಹುದು. ಕೋವಿಡ್ ನಂತಹ ಮಹಾಮಾರಿಯ ಭಯದಲ್ಲಿಯೇ ಬದುಕು ಕಟ್ಟಿಕೊಂಡಿರುವ ನಾವು, ಸಾಂಕ್ರಾಮಿಕ ರೋಗವಲ್ಲದ ಹೃದಯ ಸಂಬಂಧಿ ರೋಗದೊಂದಿಗೂ ಹೋರಾಟ ನಡೆಸಬೇಕಾದ ಅನಿವಾರ್ಯತೆ ಎದುರಾಗಿದೆ.

ಹಿಂದೆ ಮಕ್ಕಳು ತಂದೆ- ತಾಯಿಯನ್ನು ಚಿಕಿತ್ಸೆಗೆ ಕರೆ ತರುತ್ತಿದ್ದರು. ಆದರೆ ಇಂದು ತಂದೆ-ತಾಯಿಗಳು ಮಕ್ಕಳನ್ನು ಆಸ್ಪತ್ರೆಗೆ ಕರೆತರುವ ಪರಿಸ್ಥಿತಿ ಎದುರಾಗಿದೆ. ಮೂಲಗಳ ಪ್ರಕಾರ ಶೇ. 25ರಷ್ಟು ಸಾವುಗಳು ಹೃದಯ ಸಂಬಂಧಿ ಸಮಸ್ಯೆಗಳಿಂದ ಉಂಟಾಗುತ್ತವೆ. ಸುಮಾರು 30-40ರ ವಯೋಮಾನದವರಲ್ಲಿಯೂ ಹೃದಯ ಸಂಬಂಧಿ ರೋಗಗಳು ಕಾಣಿಸುತ್ತಿರುವುದು ಆತಂಕಕಾರಿ ಬೆಳವಣಿಗೆ.

Advertisement

ಹೃದಯವನ್ನು ಆರೋಗ್ಯವಾಗಿ ನೋಡಿಕೊಳ್ಳಬೇಕಾದರೆ ನಾವು ಪಂಚಸೂತ್ರ ಅನುಸರಿಸುವುದು ಬಹುಮುಖ್ಯ. ಹಾಗಾದರೆ ಆ ಪಂಚಸೂತ್ರ ಯಾವುದು ಎಂದರೆ? ರಕ್ತದಲ್ಲಿ ಸಕ್ಕರೆ ಪ್ರಮಾಣ, ಕೊಬ್ಬಿನಾಂಶ, ಶರೀರದ ತೂಕ ಮತ್ತು ಸೊಂಟದ ಸುತ್ತಳತೆ, ಅತಿಯಾಸೆ ಈ ಐದು ಅಂಶಗಳತ್ತ ನಿಗಾವಹಿಸಿದರೆ ನಾವು ನಮ್ಮ ಹೃದಯವನ್ನು ಆರೋಗ್ಯವಾಗಿಟ್ಟುಕೊಳ್ಳಲು ಸಾಧ್ಯವಿದೆ.

ಹೃದ್ರೋಗ ಹೆಚ್ಚಾಗಲು ಕಾರಣವೇನು? ಗ್ರಾಮೀಣ ಪ್ರದೇಶದಲ್ಲಿ ಹೃದಯಾಘಾತ ಪ್ರಮಾಣ ಶೇ. 6ರಷ್ಟು ನಗರ ಪ್ರದೇಶದಲ್ಲಿ ಶೇ. 8 ರಿಂದ ಶೇ.10 ರಷ್ಟು ಹೆಚ್ಚಳವಾಗುತ್ತಿದೆ. ಹಿಂದೆಲ್ಲಾ ಹೆಂಗಸರಲ್ಲಿ 50 ವರ್ಷದೊಳಗೆ ಹೃದಯಾಘಾತ ಇತ್ತು. ಆದರೆ ಇತ್ತೀಚಿನ ವರ್ಷಗಳಲ್ಲಿ ಅದು ಹೆಚ್ಚಾಗುತ್ತಿದೆ. ಸಂಸಾರದ ಒತ್ತಡ, ವೃತ್ತಿಯ ಒತ್ತಡ, ಮಕ್ಕಳನ್ನು ನೋಡಿಕೊಳ್ಳುವ ಒತ್ತಡ, ಹಾರ್ಮೋನ್ ಅಸಮತೋಲನದಿಂದ ಒತ್ತಡ ಹೆಚ್ಚುತ್ತಿದೆ. ಇದು ಹೃದಯ ಸಂಬಂಧಿ ರೋಗವನ್ನು ತರುತ್ತಿದೆ. ಹೃದಯದ ರೋಗಗಳಿಗೆ ದೇಹ ಮತ್ತು ರಕ್ತದಲ್ಲಿ ಶೇಖರಣೆಯಾಗುವ ಕೊಬ್ಬು, ಕೊಲೆಸ್ಟ್ರಾಲ್, ಅತಿರಕ್ತದೊತ್ತಡ, ಅತಿತೂಕ, ಸೇವಿಸುವ ಆಹಾರದಲ್ಲಿರುವ ಕೆಲವು ಪದಾರ್ಥಗಳು ಕೂಡ ಕಾರಣ ಎಂಬುದಾಗಿ ವೈದ್ಯರು ಹೇಳುತ್ತಾರೆ.

ಎದೆನೋವು ನಿರ್ಲಕ್ಷ್ಯ ಮಾಡಬೇಡಿ ಇನ್ನು ಎದೆ ನೋವು ಕಾಣಿಸಿದಾಕ್ಷಣ ಅದನ್ನು ಹೃದಯಸಂಬಂಧಿ ಬೇನೆ ಎಂದು ಹೇಳಲಾಗುವುದಿಲ್ಲ. ಕೆಲವೊಮ್ಮೆ ಗ್ಯಾಸ್ಟ್ರಿಕ್ ಸಮಸ್ಯೆಗೂ ಬರಬಹುದು. ಹಾಗೆಂದು ನಿರ್ಲಕ್ಷ್ಯ ವಹಿಸಿದೆ ವೈದ್ಯರ ಬಳಿಗೆ ತೆರಳಿ ತಪಾಸಣೆ ಮಾಡುವುದು ಅಗತ್ಯವಾಗಿದೆ. ಹೃದಯಘಾತವಾದಾಗ ಸಾಮಾನ್ಯವಾಗಿ ಎದೆಯ ಎಡಭಾಗ, ಮಧ್ಯಭಾಗದಲ್ಲಿ ನೋವು, ಉರಿ ಕಾಣಿಸಿಕೊಳುತ್ತದೆ. ಶೇ. 30ರಿಂದ 40ರಷ್ಟು ಮಂದಿಗೆ ಹೃದಯಘಾತವಾದಾಗ ಎದೆಭಾಗದಲ್ಲಿ ನೋವು ಕಾಣಿಸಿಕೊಳುವುದಿಲ್ಲ. ಬದಲಿಗೆ ಗಂಟಲು, ದವಡೆ ನೋವು ಕಾಣಿಸಿಕೊಳ್ಳಬಹುದು, ಬೆನ್ನಿನ ಮೇಲ್ಭಾಗ, ಹೊಟ್ಟೆಯ ಮೇಲ್ಭಾಗದಲ್ಲಿ ನೋವು ಕಾಣಿಸಿಕೊಂಡು ವಾಂತಿಯಾಗಬಹುದು, ಅತಿಯಾಗಿ ಬೆವರು ಬರಬಹುದು, ಹಾಗಾಗಿ ಗ್ಯಾಸ್ಟ್ರಿಕ್ ಸಮಸ್ಯೆ ಎಂದು ನಿರ್ಲಕ್ಷಿಸಿದರೆ ಸಾವಿನ ಅಪಾಯವಿರುತ್ತದೆ.

ಎರಡು ವರ್ಷಕೊಮ್ಮೆ ಪರೀಕ್ಷೆ ಮಾಡಿಸಿಕೊಳ್ಳಿ ಹೃದಯಘಾತವಾದ ತಕ್ಷಣ ರೋಗಿಯನ್ನು ಸಮೀಪದ ಆಸ್ಪತ್ರೆಗೆ ಕರೆದೊಯ್ಯಬೇಕು. ಇದಕ್ಕೆ ಎರಡು ರೀತಿಯ ಚಿಕಿತ್ಸೆ ಇದೆ. ರಕ್ತನಾಳದಲ್ಲಿ ಹೆಪ್ಪುಗಟ್ಟಿದ ರಕ್ತವನ್ನು ಕರಗಿಸಲು ಮೆಡಿಸಿನ್ ನೀಡಬೇಕು. ನಂತರ ಆ್ಯಂಜಿಯೋಪ್ಲಾಸ್ಟಿ ಚಿಕಿತ್ಸೆ ನೀಡಬೇಕಾಗುತ್ತದೆ. ಹೃದಯಸಂಬಂಧಿ ರೋಗ ಯಾರಲ್ಲೂ ಬೇಕಾದರೂ ಇರಬಹುದು. ಹೀಗಾಗಿ 40 ವರ್ಷ ಮೀರಿದ ಬಳಿಕ ಗಂಡಸರು 45ವರ್ಷ ಮೀರಿದ ಬಳಿಕ ಮಹಿಳೆಯರು ನಿಯಮಿತವಾಗಿ ರಕ್ತದಲ್ಲಿ ಸಕ್ಕರೆ ಪ್ರಮಾಣ, ಕೊಬ್ಬಿನಾಂಶ ಪರೀಕ್ಷೆ, ಥ್ರೆಡ್‍ಮಿಲ್ ಇಸಿಜಿ ಪರೀಕ್ಷೆಗಳನ್ನು ಮಾಡಿಸಿಕೊಳ್ಳುವುದು ಉತ್ತಮ, ಪ್ರತಿ ಬಾರಿ ಸಾಮಾನ್ಯ ಸ್ಥಿತಿಯಲ್ಲಿದ್ದರೆ 2 ವರ್ಷಕೊಮ್ಮೆ ಪರೀಕ್ಷೆ ಮಾಡಿಸಿಕೊಳ್ಳಬಹುದು.

ಕೆಲವು ಆಹಾರ ಪದಾರ್ಥಗಳನ್ನು ಸೇವಿಸಬೇಡಿ ಹೃದ್ರೋಗದಿಂದ ಬಳಲುವವರು ಯಾವ ಆಹಾರ ಸೇವಿಸಬೇಕು ಮತ್ತು ಸೇವಿಸಬಾರದು ಎಂಬುದನ್ನು ಸದಾ ಗಮನದಲ್ಲಿಟ್ಟುಕೊಳ್ಳಬೇಕು. ತುಪ್ಪ, ವನಸ್ಪತಿ, ಕೊಬ್ಬರಿ ಎಣ್ಣೆ, ಬೆಣ್ಣೆ, ಹಾಲಿನ ಉತ್ಪನ್ನಗಳಾದ ಖೋವಾ, ಪನ್ನೀರು, ಐಸ್‍ಕ್ರೀಮ್, ಗಿಣ್ಣು, ಮೊಟ್ಟೆಯ ಹಳದಿ ಭಾಗ, ಚರ್ಬಿ ಮಾಂಸ, ಕೋಳಿಯ ಚರ್ಮ, ಹಂದಿ ಮಾಂಸ, ದನಮಾಂಸ ಸೇವಿಸಬಾರದು. ಉಪ್ಪನ್ನು ಆದಷ್ಟು ಕಡಿಮೆ ಮಾಡಬೇಕು. ಚಿಪ್ಸ್, ಸಾಸ್, ಉಪ್ಪಿನಕಾಯಿ ಉಪ್ಪು ಮಿಶ್ರಿತ ಬಿಸ್ಕೆಟ್, ಸಂಡಿಗೆ ಮೊದಲಾದವುಗಳಿಂದ ದೂರವಿರಬೇಕು. ಧೂಮಪಾನ, ಮದ್ಯಪಾನ ನಿಲ್ಲಿಸಬೇಕು. ಬೊಜ್ಜು ಬಾರದಂತೆ ನೋಡಿಕೊಳ್ಳಬೇಕು. ಒತ್ತಡದ ಬದುಕಿನಿಂದ ಹೊರಬರಬೇಕು. ಕಾಫಿ, ಟೀ ಸೇರಿದಂತೆ ಕೆಲವು ಪಾನೀಯಗಳನ್ನು ಹೆಚ್ಚು ಸೇವಿಸಬಾರದು.

ವಿಟಮಿನ್ ಸಿ ಯುಕ್ತ ಹಣ್ಣುಗಳನ್ನು ಸೇವಿಸಿ ಇನ್ನು ಸೇವಿಸಬಹುದಾದ ಆಹಾರಗಳೆಂದರೆ ನಾರಿನ ಅಂಶದ ಆಹಾರಗಳು, ಕಾಳುಗಳು, ಮೊಳಕೆಕಾಳುಗಳು, ಸೊಪ್ಪು, ಹಣ್ಣು ಹಂಪಲುಗಳು, ರಾಗಿ, ಗೋಧಿ, ಜೋಳ, ಅಕ್ಕಿಯನ್ನು ಮಧ್ಯಮ ಪ್ರಮಾಣದಲ್ಲಿ ಸೇವಿಸಬೇಕು. ಎಣ್ಣೆಬೀಜ ಮತ್ತು ಒಣ ಹಣ್ಣುಗಳನ್ನು ಕಡಿಮೆ ಪ್ರಮಾಣದಲ್ಲಿ ಸೇವಿಸಬೇಕು. ವಿಟಮಿನ್ ‘ಸಿ’ ಯುಕ್ತ ಹಣ್ಣುಗಳಾದ ದ್ರಾಕ್ಷಿ, ಸೀಬೆ, ಕಿತ್ತಲೆ, ಮೂಸಂಬಿ, ನೆಲ್ಲಿಕಾಯಿ ಮಾವಿನ ಹಣ್ಣನ್ನು ಹೆಚ್ಚಿನ ಪ್ರಮಾಣದಲ್ಲಿ ಸೇವಿಸಬೇಕು. ಬೆಳ್ಳುಳ್ಳಿ, ಹಸಿ ಈರುಳ್ಳಿ ಸೇವನೆ ಒಳ್ಳೆಯದು.

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement