ಬೆಳಗಾವಿ: ಕಂಡಕ್ಟರ್ ಮೇಲೆ ದಾಖಲಾಗಿರುವ ಪೋಕ್ಸೋ ಕೇಸ್ ಬಗ್ಗೆ ತನಿಖೆ ನಡೆಸುತ್ತೇವೆ. ಈ ಪ್ರಕರಣ ಬಗ್ಗೆ ಗೃಹ ಸಚಿವರು ಮತ್ತು ಡಿಜಿ ಅವರ ಜೊತೆಗೂ ಮಾತನಾಡಿದ್ದೇನೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದ್ದಾರೆ.
ಬೆಳಗಾವಿ ತಮ್ಮ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನ್ನ ಮತ್ತು ಯಾರ ಗಮನಕ್ಕೂ ಅವರು ಬಂದಿಲ್ಲ. ನಾನು ಮತ್ತು ಸಹೋದರ ಚನ್ನರಾಜ ಅವರು ಪೊಲೀಸ್ ಕಮಿಷನರ್ ಜೊತೆಗೆ ಅವತ್ತು ರಾತ್ರಿ 11 ಗಂಟೆವರೆಗೆ ಸಂಪರ್ಕದಲ್ಲಿ ಇದ್ದೆವು. ತ್ವರಿತವಾಗಿ ಕ್ರಮ ತೆಗೆದುಕೊಳ್ಳದೇ ಕೂಲಂಕಷವಾಗಿ ಚರ್ಚಿಸಿ ನಿರ್ಧಾರ ತೆಗೆದುಕೊಳ್ಳಬೇಕು. ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ಆಗಬೇಕು ಅಂತಾನೇ ಹೇಳಿದ್ದೆವು. ಹೀಗೆ ಹೇಳಿದಾಗಲೂ ರಾತ್ರೋ ರಾತ್ರಿ 12 ಗಂಟೆಗೆ ಪೋಕ್ಸೋ ಕೇಸ್ ಹಾಕಿದ್ದಾರೆ ಎಂದು ಮಾಹಿತಿ ನೀಡಿದರು.
ಕಂಡಕ್ಟರ್ ಮೇಲಿನ ಹಲ್ಲೆಯನ್ನು ಖಂಡಿಸುತ್ತೇನೆ. ನಾವೆಲ್ಲರೂ ಸಹೋದರತ್ವದಿಂದ ಚೆನ್ನಾಗಿದ್ದೇವೆ. ಘಟನೆ ತಿಳಿದ ಐದೇ ನಿಮಿಷಕ್ಕೆ ನಾನು ಪೊಲೀಸ್ ಕಮಿಷನರ್ ಯಡಾ ಮಾರ್ಟಿನ್ ಮಾರ್ಬನ್ಯಾಂಗ್ ಅವರಿಗೆ ಕರೆ ಮಾಡಿದ್ದೆ. ಆಗ ಅವರು ಬೆಂಗಳೂರಿನಲ್ಲಿದ್ದರು. ಡಿಸಿಪಿ ರೋಹನ್ ಜಗದೀಶ ಅವರಿಂದ ಮಾಹಿತಿ ಪಡೆದುಕೊಂಡಿದ್ದೆ. ಅಲ್ಲದೇ ಯಾರು ಸರ್ಕಾರಿ ನೌಕರನ ಮೇಲೆ ಕೈ ಮಾಡಿದ್ದಾರೆ ಅವರನ್ನು ತಕ್ಷಣ ಬಂಧಿಸುವಂತೆ ನಿರ್ದೇಶಿಸಿದ್ದೆ. ಕಂಡಕ್ಟರ್ ಮೇಲೆ ಪೋಕ್ಸೋ ಕೇಸ್ ವಿಚಾರದಲ್ಲಿ ಮಾರಿಹಾಳ ಪೊಲೀಸ್ ಠಾಣೆ ಸಿಪಿಐ ತಮ್ಮ ಕರ್ತವ್ಯ ನಿಭಾಯಿಸುವುದರಲ್ಲಿ ವಿಫಲರಾಗಿದ್ದಾರೆ. ಅವರು ಯಾರ ಒತ್ತಡಕ್ಕೆ ಮಣಿದರು ಅಂತಾ ಅವರನ್ನೇ ಕೇಳಿ ಎಂದಿದ್ದಾರೆ.
ಕರ್ನಾಟಕ ಸುವರ್ಣ ಮಹೋತ್ಸವ ಆಚರಿಸುವ ಈ ಸಂದರ್ಭದಲ್ಲಿ 10 ಜನ ಪುಂಡರು ಬಂದು ಭಾಷಾ ವಿವಾದವನ್ನು ಎಳೆದು ತಂದು, ತಮ್ಮ ರಾಜಕೀಯ ಬೇಳೆ ಬೇಯಿಸಿಕೊಳ್ಳುವುದನ್ನು ನಾನು ಖಂಡಿಸುತ್ತೇನೆ. ಬೆಳಗಾವಿಯಲ್ಲಿ ಎಲ್ಲರೂ ಗೌರವ ಮತ್ತು ಭ್ರಾತೃತ್ವದಿಂದ ಬಾಳುತ್ತಿದ್ದೇವೆ. ನನ್ನ ಕ್ಷೇತ್ರದಲ್ಲಿ ಇಡೀ ಮರಾಠಿಗರು ಮತ ಹಾಕಿ ಗೆಲ್ಲಿಸುತ್ತಾರೆ. ಯಾಕೆಂದರೆ ಭಾಷಾ ವಿವಾದವನ್ನು ನಾವು ಬೇರು ಸಮೇತ ಇಲ್ಲಿ ಕಿತ್ತು ಹಾಕಿದ್ದೇವೆ. ಹಬ್ಬ ಹರಿದಿನ ಸೇರಿ ರಜಾ ದಿನಗಳನ್ನು ಬಿಟ್ಟು ನಮಗಾಗಿ ಸಾರಿಗೆ ಸಿಬ್ಬಂದಿ ಸೇವೆ ಸಲ್ಲಿಸುತ್ತಾರೆ. ಇಂಥ ಸಂದರ್ಭದಲ್ಲಿ ಅವರ ಮೇಲೆ ಕೈ ಮಾಡಿದ್ದು, ಅಕ್ಷಮ್ಯ ಅಪರಾಧ. ತಪ್ಪಿತಸ್ಥ ಕಿಡಿಗೇಡಿಗಳಿಗೆ ಶಿಕ್ಷೆ ಆಗುವ ನಿಟ್ಟಿನಲ್ಲಿ ನಾವೆಲ್ಲಾ ನೋಡಿಕೊಳ್ಳುತ್ತೇವೆ ಎಂದು ಭರವಸೆ ನೀಡಿದರು.