ಜಮ್ಮು : ಜನರ ಬೆಂಬಲವಿಲ್ಲದೆ ಜಮ್ಮು ಮತ್ತು ಕಾಶ್ಮೀರದಲ್ಲಿ ಭಯೋತ್ಪಾದನೆಯನ್ನು ಕೊನೆಗೊಳಿಸಲು ಸಾಧ್ಯವಿಲ್ಲ ಎಂದು ಸಿಎಂ ಒಮರ್ ಅಬ್ದುಲ್ಲಾ ಹೇಳಿದ್ದಾರೆ.
ವಿಧಾನಸಭೆ ಆರಂಭಕ್ಕೂ ಮುನ್ನ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕೇಂದ್ರಾಡಳಿತ ಪ್ರದೇಶದಲ್ಲಿ ಶಾಂತಿ ನೆಲೆಸುವಂತೆ ಕ್ರಮಕೈಗೊಳ್ಳಲು ಕೇಂದ್ರ ಸರ್ಕಾರಕ್ಕೆ ಬೆಂಬಲ ನೀಡುತ್ತಿದ್ದೇವೆ. ಆದರೆ ಜನರ ಬೆಂಬಲವಿಲ್ಲದೆ ಜಮ್ಮು ಮತ್ತು ಕಾಶ್ಮೀರದಲ್ಲಿ ಭಯೋತ್ಪಾದನೆ ನಿರ್ಮೂಲನೆ ಅಸಾಧ್ಯ ಎಂದು ತಿಳಿಸಿದ್ದಾರೆ.
ಹಿರಾನಗರ್ ವಲಯದಲ್ಲಿ ಅಂತರರಾಷ್ಟ್ರೀಯ ಗಡಿಯ ಸಮೀಪ ಸನ್ಯಾಲ್ ಗ್ರಾಮದಲ್ಲಿ ಭಯೋತ್ಪಾದಕರ ವಿರುದ್ಧ ಭದ್ರತಾ ಪಡೆಗಳು ನಡೆಸುತ್ತಿರುವ ಶೋಧ ಕಾರ್ಯಾಚರಣೆ ಕುರಿತ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಒಮರ್, ಹಿಂದೆಯೂ ಇಂತಹ ಘಟನೆಗಳು ನಡೆದಿವೆ. ಗುಪ್ತಚರ ಇಲಾಖೆಗೆ ಸಿಕ್ಕ ಮಾಹಿತಿ ಅನುಸಾರ ಶೋಧ ಕಾರ್ಯಾಚರಣೆ ನಡೆಸಲಾಗುತ್ತಿದೆ. ಪರಿಸ್ಥಿತಿ ಬಗ್ಗೆ ಮಾಹಿತಿ ಪಡೆದುಕೊಳ್ಳಲಾಗುತ್ತಿದೆ. ಈ ಬಗ್ಗೆ ಈಗಲೇ ಹೇಳಿಕೆ ನೀಡುವುದು ಸರಿಯಲ್ಲ, ಪರಿಸ್ಥಿತಿ ಬಗ್ಗೆ ಮಾಹಿತಿ ಪಡೆದುಕೊಳ್ಳಲಾಗುತ್ತಿದೆ ಎಂದಿದ್ದಾರೆ.