ಬೆಂಗಳೂರು : ಕರ್ನಾಟಕದಲ್ಲಿ ಆದಷ್ಟು ಬೇಗ ರೋಹಿತ್ ವೇಮುಲಾ ಕಾಯ್ದೆಯನ್ನು ಜಾರಿಗೆ ತರುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಈ ಸಂಬಂಧ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ರಾಹುಲ್ ಗಾಂಧಿ ಏಪ್ರಿಲ್ 16ರಂದು ಪತ್ರ ಬರೆದಿದ್ದಾರೆ.
ಬಿ.ಆರ್. ಅಂಬೇಡ್ಕರ್ ತಮ್ಮ ಜೀವಿತಾವಧಿಯಲ್ಲಿ ಎದುರಿಸಿದ್ದ ತಾರತಮ್ಯಕ್ಕೆ ಸಂಬಂಧಿಸಿದ ಹಲವು ಘಟನೆಗಳನ್ನು ರಾಹುಲ್ ಗಾಂಧಿ ಪತ್ರದಲ್ಲಿ ವಿವರಿಸಿದ್ದು, ಈ ಪತ್ರವನ್ನು ಅವರು ‘ಎಕ್ಸ್’ನಲ್ಲಿ ಹಂಚಿಕೊಂಡಿದ್ದಾರೆ.
ರಾಹುಲ್ ಗಾಂಧಿ ಅವರು ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದು, ‘ಸಂಸದ ರಾಹುಲ್ ಗಾಂಧಿಯವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬರೆದ ಪತ್ರದಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಅವರು ತಮ್ಮ ಜೀವನದಲ್ಲಿ ಎದುರಿಸಿದ ತಾರತಮ್ಯದ ಬಗ್ಗೆ ಉಲ್ಲೇಖಿಸಿದ್ದಾರೆ. ಹಿಂದೆ, ನಮ್ಮಲ್ಲಿ ಸಾಕಷ್ಟು ಆಹಾರ ಧಾನ್ಯಗಳಿದ್ದವು. ಹೀಗಿದ್ದರೂ ನಮ್ಮಲ್ಲಿ ಕೆಲವರು ಹಸಿವಿನಿಂದ ಬಳಲುತ್ತಿದ್ದರು. ಊಟ ಮಾಡದೇ ಮಲಗಿದ ದಿನಗಳೆಷ್ಟೋ. ನೀರು ಲಭ್ಯತೆಯೂ ಕಷ್ಟವಾಗಿತ್ತು. ಅಸ್ಪೃಶ್ಯರು ಎಂಬ ಒಂದೇ ಕಾರಣಕ್ಕೆ ಇವೆಲ್ಲವನ್ನೂ ಸಹಿಸಿಕೊಂಡು ಬದುಕಬೇಕಾಗಿತ್ತು” ಎಂಬ ಸಂಗತಿಯನ್ನು ಪತ್ರದಲ್ಲಿ ಬರೆದಿದ್ದಾರೆ.
ಏನಿದು ವೇಮುಲ ಕಾಯ್ದೆ?
ಎಸ್ಸಿ, ಎಸ್ಟಿ ಮತ್ತು ಒಬಿಸಿಗಳಿಗೆ ಶೈಕ್ಷಣಿಕ ಸಂಸ್ಥೆಗಳು ತಾರತಮ್ಯ ಮಾಡಿದರೆ ಕಠಿಣ ಶಿಕ್ಷೆ ಮತ್ತು ದಂಡ ವಿಧಿಸುವ ಅಂಶವನ್ನು ಈ ಕಾಯ್ದೆ ಒಳಗೊಂಡಿರಲಿದೆ. ಎಲ್ಲ ಶೈಕ್ಷಣಿಕ ಸಂಸ್ಥೆಗಳು ಈ ಸಮುದಾಯದ ವಿದ್ಯಾರ್ಥಿಗಳಿಗೆ ನೆರವು ನೀಡುವ ವ್ಯವಸ್ಥೆ ಹೊಂದುವುದು, ವಿವಿಗಳು ವಿದ್ಯಾರ್ಥಿಗಳ ಕುಂದುಕೊರತೆ ಪರಿಹರಿಸುವ ಸ್ವತಂತ್ರ ಸಮಿತಿ ರಚಿಸುವುದು ಕಡ್ಡಾಯವಾಗಲಿದೆ. ಶಿಕ್ಷಣ ಸಂಸ್ಥೆಯಲ್ಲಿ ಜಾತಿ ತಾರತಮ್ಯ ನಡೆದರೆ ಅದಕ್ಕೆ ಸಂಸ್ಥೆಯ ಅಧಿಕಾರಿಗಳೇ ಹೊಣೆ ಆಗಲಿದ್ದಾರೆ.