ಕಲಬುರಗಿ :ನೀಟ್ ಪರೀಕ್ಷೆಯಲ್ಲಿ ವಿದ್ಯಾರ್ಥಿಯೊಬ್ಬನ ಜನಿವಾರ ತೆಗೆಸಿದ ಪ್ರಕರಣದಲ್ಲಿ ಕಲಬುರಗಿಯ ಇಬ್ಬರು ಪರೀಕ್ಷಾ ಸಿಬ್ಬಂದಿ ವಿರುದ್ಧ ಎಫ್ಐಆರ್ ದಾಖಲಾಗಿದೆ.
ಭಾನುವಾರ ನಡೆದ ನೀಟ್ ಪರೀಕ್ಷೆಯಲ್ಲಿ ಪರೀಕ್ಷಾ ಸಿಬ್ಬಂದಿ ಶರಣಗೌಡ ಹಾಗೂ ಗಣೇಶ್, ಪರೀಕ್ಷಾರ್ಥಿ ಶ್ರೀಪಾದ್ ಪಾಟೀಲ್ ಧರಿಸಿದ್ದ ಜನಿವಾರ ತೆಗೆಸಿದ್ದರು. ಪರೀಕ್ಷಾ ಸಿಬ್ಬಂದಿ ನಡೆಗೆ ಆಕ್ರೋಶಗೊಂಡ ಬ್ರಾಹ್ಮಣ ಸಮಾಜ ಬೃಹತ್ ಪ್ರತಿಭಟನೆ ನಡೆಸಿತ್ತು.
ಪರೀಕ್ಷಾ ಸಿಬ್ಬಂದಿ ಜನಿವಾರ ತೆಗೆಸಿ ನನ್ನ ಧಾರ್ಮಿಕ ಭಾವನೆಗೆ ಧಕ್ಕೆ ತಂದಿದ್ದಾರೆ. ಅವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಶ್ರೀಪಾದ್ ಪಾಟೀಲ್ ಸ್ಟೇಷನ್ ಬಜಾರ್ ಠಾಣೆಗೆ ದೂರು ನೀಡಿದ್ದಾರೆ. ವಿದ್ಯಾರ್ಥಿ ದೂರಿನ ಆಧಾರದಲ್ಲಿ ಪೊಲೀಸರು ಬಿಎನ್ಎಸ್ ಕಾಯ್ದೆ 298ರ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.