ಶ್ರೀನಗರ : ಪಾಕಿಸ್ತಾನದಲ್ಲಿರುವ ಪರಮಾಣು ಶಸ್ತ್ರಾಸ್ತ್ರಗಳನ್ನು ಅಂತರರಾಷ್ಟ್ರೀಯ ಪರಮಾಣು ಶಕ್ತಿ ಸಂಸ್ಥೆಯ (IAEA) ಮೇಲ್ವಿಚಾರಣೆಗೆ ಒಳಪಡಿಸಬೇಕು ಎಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಗುರುವಾರ (ಮೇ 15) ಹೇಳಿದ್ದಾರೆ.
ಜಮ್ಮು ಮತ್ತು ಕಾಶ್ಮೀರದ ಶ್ರೀನಗರದ ಹೊರವಲಯದಲ್ಲಿರುವ ಬಾದಾಮಿ ಬಾಗ್ ಕಂಟೋನ್ಮೆಂಟ್ನಲ್ಲಿ ಭಾರತೀಯ ಸಶಸ್ತ್ರ ಪಡೆಗಳ ಸೈನಿಕರೊಂದಿಗೆ ಸಂವಾದ ನಡೆಸಿದರು. ಬಳಿಕ ಬಾದಾಮಿ ಬಾಗ್ ಕಂಟೋನ್ಮೆಂಟ್ನಲ್ಲಿ ಯೋಧರನ್ನು ಉದ್ದೇಶಿಸಿ ಮಾತನಾಡಿದ ಅವರು, ಆಪರೇಷನ್ ಸಿಂಧೂರ್ನ ಯಶಸ್ಸಿನಲ್ಲಿ ಭಾರತೀಯ ಸಶಸ್ತ್ರ ಪಡೆಗಳ ಸೈನಿಕರ ಪಾತ್ರಕ್ಕಾಗಿ ಕೃತಜ್ಞತೆಯನ್ನು ವ್ಯಕ್ತಪಡಿಸಿದರು.
ಭಯೋತ್ಪಾದನೆ ವಿರುದ್ಧ ಹೋರಾಡಿ ಪ್ರಾಣ ತ್ಯಾಗ ಮಾಡಿದ ಧೈರ್ಯಶಾಲಿ ಸೈನಿಕರಿಗೆ ಹಾಗೂ ಪಹಲ್ಗಾಮ್ ದಾಳಿಯಲ್ಲಿ ಪ್ರಾಣ ಕಳೆದುಕೊಂಡ ಮುಗ್ಧ ನಾಗರಿಕರಿಗೆ ಗೌರವ ಸಲ್ಲಿಸಿದರು. “ಮೊದಲನೆಯದಾಗಿ, ಭಯೋತ್ಪಾದನೆ ಮತ್ತು ಭಯೋತ್ಪಾದಕರ ವಿರುದ್ಧ ಹೋರಾಡಿದ ವೀರ ಯೋಧರ ಅತ್ಯುನ್ನತ ತ್ಯಾಗಕ್ಕೆ ನಾನು ನಮಸ್ಕರಿಸುತ್ತೇನೆ. ಪಹಲ್ಗಾಮ್ನಲ್ಲಿ ಕೊಲ್ಲಲ್ಪಟ್ಟ ಮುಗ್ಧ ನಾಗರಿಕರಿಗೂ ನಾನು ಗೌರವ ಸಲ್ಲಿಸುತ್ತೇನೆ. ಗಾಯಗೊಂಡ ಸೈನಿಕರ ಶೌರ್ಯಕ್ಕೂ ನಾನು ನಮಸ್ಕರಿಸುತ್ತೇನೆ ಮತ್ತು ಅವರು ಆದಷ್ಟು ಬೇಗ ಚೇತರಿಸಿಕೊಳ್ಳಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ ಎಂದು ಸಿಂಗ್ ಹೇಳಿದರು.
ಪಹಲ್ಗಾಮ್ ದಾಳಿಯ ನಂತರ, ಜಮ್ಮು ಮತ್ತು ಕಾಶ್ಮೀರದ ಜನರು ಪಾಕಿಸ್ತಾನ ಮತ್ತು ಭಯೋತ್ಪಾದಕರ ವಿರುದ್ಧ ತಮ್ಮ ಕೋಪವನ್ನು ವ್ಯಕ್ತಪಡಿಸಿದ ರೀತಿಗೆ ನಾನು ಜಮ್ಮು ಮತ್ತು ಕಾಶ್ಮೀರದ ಜನರಿಗೆ ನಮಸ್ಕರಿಸುತ್ತೇನೆ. ಶತ್ರುಗಳನ್ನು ನಾಶಪಡಿಸಿದ ಆ ಶಕ್ತಿಯನ್ನು ಅನುಭವಿಸಲು ನಾನು ಇಲ್ಲಿದ್ದೇನೆ. ನೀವು ಗಡಿಯುದ್ದಕ್ಕೂ ಪಾಕಿಸ್ತಾನಿ ಚೌಕಿಗಳನ್ನು ಮತ್ತು ಬಂಕರ್ಗಳನ್ನು ನಾಶಪಡಿಸಿದ ರೀತಿಯನ್ನು ಶತ್ರುಗಳು ಎಂದಿಗೂ ಮರೆಯಲು ಸಾಧ್ಯವಿಲ್ಲ ಎಂದು ನಾನು ಭಾವಿಸುತ್ತೇನೆ ಎಂದು ರಾಜನಾಥ್ ಸಿಂಗ್ ಹೇಳಿದರು.