ಬೆಂಗಳೂರು : ಐಶ್ವರ್ಯಗೌಡ ವಂಚನೆ ಪ್ರಕರಣದಲ್ಲಿ ಮಾಜಿ ಸಂಸದ ಡಿ.ಕೆ.ಸುರೇಶ್ ಅವರಿಗೆ ಜಾರಿ ನಿರ್ದೇಶನಾಲಯ ಸಮನ್ಸ್ ನೀಡಿದೆ.
ಮಾಜಿ ಸಂಸದ ಡಿಕೆ ಸುರೇಶ್ ಅವರ ಸಹೋದರಿ ಅಂತ ಹೇಳಿಕೊಂಡು ಐಶ್ವರ್ಯ ಗೌಡ ಕೋಟ್ಯಾಂತರ ರೂಪಾಯಿ ಚಿನ್ನಾಭರಣ ವಂಚಿಸಿರುವ ಆರೋಪ ಕೇಳಿಬಂದಿತ್ತು. ಐಶ್ವರ್ಯ ಗೌಡ ಹೇಳಿಕೆ ಮತ್ತು ಸಾಕ್ಷಿಗಳನ್ನು ಆಧರಿಸಿ ಇಡಿ ಗುರುವಾರ (ಜೂ.19) ಬೆಳಗ್ಗೆ 11 ಗಂಟೆಗೆ ವಿಚಾರಣೆಗೆ ಡಿಕೆ ಸುರೇಶ್ ಅವರಿಗೆ ಸೂಚನೆ ನೀಡಿದೆ. ಜೂ.23ರಂದು ವಿಚಾರಣೆಗೆ ಹಾಜರಾಗುವುದಾಗಿ ಡಿ.ಕೆ.ಸುರೇಶ್ ತಿಳಿಸಿದ್ದಾರೆ.
ಇಡಿ ಸಮನ್ಸ್ ನೀಡಿರುವ ವಿಚಾರವಾಗಿ ಮಾಜಿ ಸಂಸದ ಡಿಕೆ ಸುರೇಶ್ ಮಾತನಾಡಿ, ಇಡಿ ಅಧಿಕಾರಿಗಳಿಂದ ನನಗೆ ಸಮನ್ಸ್ ಬಂದಿರುವುದು ನಿಜ. ಐಶ್ವರ್ಯಾಗೌಡ ಜೊತೆ ಯಾವುದೇ ಹಣದ ವ್ಯವಹಾರ ಮಾಡಿಲ್ಲ. ಜೂ.19ರಂದು ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಿದ್ದರು. ಆದರೆ, ಜೂ.23ರಂದು ವಿಚಾರಣೆಗೆ ಹಾಜರಾಗುವುದಾಗಿ ತಿಳಿಸಿದ್ದೇನೆ. ಎರಡು ಕಾರ್ಯಕ್ರಮಕ್ಕೆ ಆಹ್ವಾನಿಸಿದ್ದರಿಂದ ನಾನು ಭಾಗಿಯಾಗಬೇಕಾಗಿದೆ ಎಂದು ಹೇಳಿದರು.
ನನ್ನ ಹೆಸರು ದುರ್ಬಳಕೆ ಮಾಡಿಕೊಂಡಿದ್ದಾರೆಂದು ದೂರು ಕೊಟ್ಟಿದ್ದೆ. ಈ ಪ್ರಕರಣದ ಬಗ್ಗೆ ಸಮಗ್ರ ತನಿಖೆ ನಡೆಸುವಂತೆ ಬೆಂಗಳೂರು ಪೊಲೀಸ್ ಕಮಿಷನರ್ ಅವರಿಗೆ ಪತ್ರ ಬರೆದು ಮನವಿ ಮಾಡಿದ್ದೆ. ಇಡಿ ಅಧಿಕಾರಿಗಳು ಏಳೆಂಟು ದಾಖಲೆಗಳು ಬೇಕು ಎಂದಿದ್ದಾರೆ. ಇಡಿ ಅಧಿಕಾರಿಗಳು ಕೇಳುವ ಎಲ್ಲಾ ಪ್ರಶ್ನೆಗಳಿಗೂ ಉತ್ತರ ನೀಡುತ್ತೇನೆ ಎಂದರು.