ಬೆಂಗಳೂರು: ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ನ್ಯಾ.ವಿಭು ಭಕ್ರು ಇಂದು ಪ್ರಮಾಣ ವಚನ ಸ್ವೀಕಾರ ಮಾಡಿದರು.
ರಾಜಭವನದಲ್ಲಿ ನಡೆದ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮದಲ್ಲಿ, ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಮುಖ್ಯ ನ್ಯಾಯಮೂರ್ತಿಗಳಿಗೆ ಪ್ರಮಾಣ ವಚನ ಬೋಧಿಸಿದರು. ಈ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆಶಿವಕುಮಾರ್, ಸಭಾಪತಿ ಬಸವರಾಜ ಹೊರಟ್ಟಿ ಉಪಸ್ಥಿತರಿದ್ದರು.
ನ್ಯಾ. ಭಕ್ರು ಅವರು 1966ರಲ್ಲಿ ನಾಗಪುರದಲ್ಲಿ ಜನಿಸಿದರು. ದೆಹಲಿಯ ಮಥುರಾ ರಸ್ತೆಯಲ್ಲಿರುವ ದೆಹಲಿ ಪಬ್ಲಿಕ್ ಶಾಲೆಯಲ್ಲಿ ಶಿಕ್ಷಣ ಪಡೆದಿದ್ದು, 1987ರಲ್ಲಿ ದೆಹಲಿ ವಿಶ್ವವಿದ್ಯಾಲಯದಿಂದ ವಾಣಿಜ್ಯ ವಿಷಯದಲ್ಲಿ ಪದವಿ ಪಡೆದಿದ್ದಾರೆ. 1989ರಲ್ಲಿ ಚಾರ್ಟರ್ಡ್ ಅಕೌಂಟೆಂಟ್ ಆಗಿಯೂ ಅರ್ಹತೆ ಪಡೆದುಕೊಂಡಿದ್ದರು.
1990ರಲ್ಲಿ ಎಲ್ಎಲ್ಬಿ ಪದವಿ ಪಡೆದು, ಅದೇ ವರ್ಷ ದೆಹಲಿ ವಕೀಲರ ಪರಿಷತ್ನಲ್ಲಿ ವಕೀಲರಾಗಿ ನೋಂದಣಿ ಮಾಡಿಸಿದ್ದರು. ಅವರು ವಕೀಲರಾಗಿದ್ದ ಅವಧಿಯಲ್ಲಿ ಸುಪ್ರೀಂ ಕೋರ್ಟ್, ದೆಹಲಿ ಹೈಕೋರ್ಟ್, ಕಂಪನಿ ಕಾನೂನು ಮಂಡಳಿ ಮತ್ತು ಇತರೆ ನ್ಯಾಯ ಮಂಡಳಿಗಳಲ್ಲಿ ವಕೀಲಿಕೆ ಮಾಡಿದ್ದಾರೆ. 2011ರಲ್ಲಿ ಹಿರಿಯ ವಕೀಲರಾಗಿ ಅವರು ಪದೋನ್ನತಿ ಪಡೆದಿದ್ದರು. 2013ರ ಏಪ್ರಿಲ್ 17ರಂದು ದೆಹಲಿ ಹೈಕೋರ್ಟ್ ಹೆಚ್ಚುವರಿ ನ್ಯಾಯಮೂರ್ತಿಯಾಗಿ ನೇಮಕಗೊಂಡ ಅವರು 2015ರ ಮಾರ್ಚ್ 18ರಂದು ಖಾಯಂಗೊಂಡಿದ್ದರು.