ಚಿತ್ರದುರ್ಗ: ಶ್ರೀಕ್ಷೇತ್ರ ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ದೇವಾಲಯ ಹಾಗೂ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರ ಕುಟುಂಬಕ್ಕೆ ಕಳಂಕ ತರುವ ಕೆಲಸ ನಡೆಯುತ್ತಿದೆ ಎಂದು ಆರೋಪಿಸಿ ವಿವಿಧ ಹಿಂದೂ ಸಂಘಟನೆಗಳ ಮುಖಂಡರು, ಕಾರ್ಯಕರ್ತರು ಶ್ರೀ ಧರ್ಮಸ್ಥಳ ಭಕ್ತಾಭಿಮಾನಿಗಳ ವೇದಿಕೆಯ ಮೂಲಕ ಮಂಗಳವಾರ ಜಿಲ್ಲಾಧಿಕಾರಿಗಳ ಕಛೇರಿವರೆಗೆ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಿದರು. ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಅರ್ಧ ಗಂಟೆಗೂ ಹೆಚ್ಚು ಕಾಲ ಪ್ರತಿಭಟನಾ ಧರಣಿ ನಡೆಸಿ ಯಾವುದೇ ರೀತಿಯ ಸಾಕ್ಷಿ ಆಧಾರಗಳು ಇಲ್ಲದೆ ಶ್ರೀ ಕ್ಷೇತ್ರ ಧರ್ಮಸ್ಥಳ ಹಾಗೂ ವೀರೇಂದ್ರ ಹೆಗ್ಡೆ ಅವರ ವಿರುದ್ದ ಅಪಪ್ರಚಾರ ನಡೆಸುತ್ತಿರುವ ಧರ್ಮವಿರೋದಿಗಳ ವಿರುದ್ದ ಸರ್ಕಾರ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಲಾಯಿತು
ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಸಮಾಜಕ್ಕೆ ಹಾಗೂ ಬಡವರ ಉದ್ದಾರಕ್ಕೆ ಧರ್ಮಾಧಿಕಾರಿಗಳಾದ ವೀರೇಂದ್ರ ಹೆಗ್ಡೆ ಅವರು ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಜನರ ಸೇವೆ ಮಾಡುತ್ತಿದ್ದಾರೆ. ಇದನ್ನು ಸಹಿಸದ ಧರ್ಮವಿರೋದಿಗಳ ಗುಂಪು ಷಡ್ಯಂತರ ರೂಪಿಸಿ ಸಂಬಂಧ ಇಲ್ಲದ ಯಾವುದೋ ಪ್ರಕರಣಗಳನ್ನು ಕೆದಕುತ್ತಿದ್ದಾರೆ. ಅಲ್ಲದೆ ಯಾವುದೇ ರೀತಿಯ ಸಾಕ್ಷಿ ಆಧಾರಗಳು ಇಲ್ಲದೆ ಇದ್ದರು ಕೂಡ ಶ್ರೀ ಕ್ಷೇತ್ರ ಧರ್ಮಸ್ಥಳ ಹಾಗೂ ವೀರೇಂದ್ರ ಹೆಗ್ಡೆ ಅವರ ವಿರುದ್ದ ಅಪಪ್ರಚಾರ ನಡೆಸುತ್ತಿರುವ ಇದರಿಂದ ಶ್ರೀ ಕ್ಷೇತ್ರದ ಭಕ್ತರಿಗೆ ಅಪಾರವಾದ ನೋವುಉಂಟಾಗಿದೆ. ಆದ್ದರಿಂದ ಶ್ರೀ ಕ್ಷೇತ್ರ ಧರ್ಮಸ್ಥಳ ಹಾಗೂ ವೀರೇಂದ್ರ ಹೆಗ್ಡೆ ಅವರ ವಿರುದ್ದ ಅಪಪ್ರಚಾರ ನಡೆಸುತ್ತಿರುವ ಧರ್ಮವಿರೋದಿಗಳ ವಿರುದ್ದ ಸರ್ಕಾರ ಕೂಡಲೇ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಜಿಲ್ಲಾಧಿಕಾರಿಗಳ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು.
ಶ್ರೀ ಧರ್ಮಸ್ಥಳ ಅಭಿಮಾನಿ ವೇದಿಕೆಯ ಕಾರ್ಯಾಧ್ಯಕ್ಷರಾದ ನಾಗರಾಜ್ ಸಂಗಮ್ ಮಾತನಾಡಿ, ಹಿಂದುಗಳ ಶ್ರದ್ಧಾ ಕೇಂದ್ರ ಧರ್ಮಸ್ಥಳದಲ್ಲಿ ತನಿಖೆಯ ಹೆಸರಲ್ಲಿ ನಡೆಯುತ್ತಿರುವ ಧರ್ಮ ದ್ರೋಹಿ ಚಟುವಟಿಕೆಗಳು ಕೂಡಲೇ ಸ್ಥಗಿತಗೊಳ್ಳಬೇಕು ಎಸ್ಐಟಿ ನಡೆಸುತ್ತಿರುವ ತನಿಖೆ ಧರ್ಮಸ್ಥಳ ಕ್ಷೇತ್ರದ ಧಾರ್ಮಿಕ ಶ್ರದ್ಧೆಗೆ ಅಪಚಾರ ಎತ್ತಾಗುವಂತಿದೆ. ಅಸಮರ್ಪಕವಾದ ತನಿಕೆಯನ್ನು ಕೂಡಲೇ ಸ್ಥಗಿತಗೊಳಿಸಿ ಇಲ್ಲಿಯವರೆಗೆ ನಡೆಸಿರುವ ತನಿಖೆಯ ಕುರಿತು ಮಧ್ಯಂತರ ತನಿಖಾ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಬೇಕು ಎಂದು ಒತ್ತಾಯಿಸಿದರು.
ಪಿಎಫ್ಐ ಸೇರಿದಂತೆ ಮತಾಂತರ ಶಕ್ತಿಗಳು ಧರ್ಮಸ್ಥಳದ ವಿರುದ್ಧ ವ್ಯವಸ್ಥಿತ ಅಪಪ್ರಚಾರದಲ್ಲಿ ತೊಡಗಿದ್ದು ಸದ್ಯ ನಡೆಯುತ್ತಿರುವ ತನಿಖೆ ಕೂಡ ಅದಕ್ಕೆ ಪುಷ್ಟಿ ಕೊಡುವಂತಿದೆ. ಅನಾಮಿಕ ದೂರುದಾರನ ಹೆಸರಲ್ಲಿ ಕಳೆದ 15 ದಿನಗಳಿಂದ ನಿರಂತರವಾಗಿ ಶ್ರೀ ಕ್ಷೇತ್ರ ಧರ್ಮಸ್ಥಳದ ತೇಜೋವದೆ ಮಾಡಲಾಗುತ್ತಿದೆ. ಸರ್ಕಾರದ ಇಂತಹ ವ್ಯವಸ್ಥೆ ಧರ್ಮಸ್ಥಳದ ಅಸಂಖ್ಯಾತ ಭಕ್ತರು ಹಾಗೂ ಹಿಂದುಗಳಿಗೆ ನೋವು ತರಿಸಿದೆ ಎಂದು ಬೇಸರ ವ್ಯಕ್ತಪಡಿಸಿದರು.
ಶ್ರೀ ಕ್ಷೇತ್ರ ಧರ್ಮಸ್ಥಳದ ಮೇಲೆ ಹಾಗೂ ಕಾರ್ಮಿಕ ಕೇಂದ್ರಗಳ ಮೇಲೆ ನಡೆಯುತ್ತಿರುವ ವ್ಯವಸ್ಥಿತ ಅಪಪ್ರಚಾರವನ್ನು ಸಹಿಸಲು ಸಾಧ್ಯವಿಲ್ಲ. ತಕ್ಷಣ ಸರ್ಕಾರ ಧರ್ಮಸ್ಥಳ ಕ್ಷೇತ್ರದ ಗೌರವ ಸಂರಕ್ಷಣೆ ಮಾಡುವ ಕೆಲಸಕ್ಕೆ ಮುಂದಾಗಬೇಕು ಎಂದು ಒತ್ತಾಯಿಸಿ ಇಂದಿನ ಹೋರಾಟ ಬರೀ ಶ್ಯಾಂಪಲ್ ಅಷ್ಟೇ. ರಾಜ್ಯಾದ್ಯಂತ ಒಂದು ಕೋಟಿಗೂ ಹೆಚ್ಚುಜನ ಸೇರಿ ಪ್ರತೀ ತಾಲ್ಲೂಕಿನಲ್ಲೂ ಅಪಪ್ರಚಾರದ ವಿರುದ್ಧ ಹೋರಾಟ ಮಾಡುತ್ತೇವೆ. ಹಿಂದೂಗಳು ತಿರುಗಿನಿಂತರೆ ಪರಿಣಾಮ ಬೇರೆಯೇ ಆಗುತ್ತದೆ. ಧರ್ಮಸ್ಥಳವನ್ನು ಉಳಿಸಿಕೊಳ್ಳುವುದು ನಮಗೆ ಗೊತ್ತಿದೆ ಎಂದು ಎಚ್ಚರಿಕೆ ನೀಡಿದರು
ಶ್ರೀ ಧರ್ಮಸ್ಥಳ ಅಭಿಮಾನಿ ವೇದಿಕೆಯ ಅದ್ಯಕ್ಷರಾದ ರೂಪಾ ಜನರ್ಧನ್ ಮಾತನಾಡಿ ಎಲ್ಲರಿಗೂ ಒಳಿತನ್ನು ಬಯಸುವ ವೀರೇಂದ್ರ ಹೆಗ್ಗಡೆಯವರ ಕುಟುಂಬಕ್ಕೆ ಅನಾಮಿಕನ ಹೆಸರಿನಲ್ಲಿ ಮಾನಸಿಕ ತೊಂದರೆಯನ್ನು ಕೊಡುತ್ತಿರುವ ಧರ್ಮಸ್ಥಳದ ಬಗ್ಗೆ ಅಪಪ್ರಚಾರ ಮಾಡುತ್ತಿರುವ ಎಲ್ಲಾ ದುಷ್ಟಶಕ್ತಿಗಳಿಗೂ ತಕ್ಕ ಉತ್ತರ ಹಿಂದೂಗಳು ನೀಡುತ್ತಾರೆ ಧಾರ್ಮಿಕ ಕೇಂದ್ರಗಳ ಶಕ್ತಿ ಕುಗ್ಗಿಸುವ ಕೆಲಸ ಎಲ್ಲಿ ನಡೆಯುತ್ತಿದೆಯೋ ಅಲ್ಲಿ ಜಾಗೃತಿ ಸಮಾವೇಶ ಹಮ್ಮಿಕೊಂಡು, ಹಿಂದೂ ಧಾರ್ಮಿಕ ಕ್ಷೇತ್ರಗಳ ಸಂರಕ್ಷಣೆ ಮಾಡಲು ಪ್ರಾರಂಭಿಸಿದೆ ಎಂದರು.
ಶ್ರೀ ಧರ್ಮಸ್ಥಳ ಅಭಿಮಾನಿ ವೇದಿಕೆಯ ಕಾರ್ಯಾಧ್ಯಕ್ಷರಾದ ಸಿ.ಬಿ.ನಾಗರಾಜ್ ದೇವರಾಜು ಅರಸು ವಿದ್ಯಾ ಸಂಸ್ಥೆಯ ಆಡಳಿತಾಧಿಕಾರಿ ರಘು ಚಂದನ್, ವೀರಶೈವ ಮುಖಂಡರಾದ ಕೆಇಬಿ ಷಣ್ಮುಖಪ್ಪ, ಜೀತೇಂದ್ರ ಹುಲಿಕುಂಟೆ, ಲೀಲಾಧರ್ ಠಾಕೂರ್, ತಿಮ್ಮಣ್ಣ ಸೇರಿದಂತೆ ಅಪಾರ ಭಕ್ತ ವೃಂದಾ ಭಾಗವಹಿಸಿದ್ದರು. ನಗರದ ಹಳೇ ಮಾಧ್ಯಮಿಕ ಶಾಲೆಯ ಬಳಿಯಿಂದ ಹೊರಟ ಜಾಥ ಜಿಲ್ಲಾಧಿಕಾರಿಗಳ ಕಛೇರಿಗೆ ತಲುಪಿ ಸರಕಾರಕ್ಕೆ ಮನವಿ ಸಲ್ಲಿಸಿತು.