ಮಂಗಳೂರು: ಗೋಕಳ್ಳತನ ಮತ್ತು ಗೋಹತ್ಯೆ ಪ್ರಕರಣಗಳಲ್ಲಿ ಪದೇ ಪದೇ ಭಾಗಿಯಾಗುತ್ತಿದ್ದ ಆರೋಪಿಯೊಬ್ಬನ ಮನೆ ಮತ್ತು ಅಕ್ರಮ ಕಸಾಯಿಖಾನೆಯನ್ನು ಬಂಟ್ವಾಳ ಗ್ರಾಮಾಂತರ ಪೊಲೀಸರು ಜಪ್ತಿ ಮಾಡಿದ್ದಾರೆ. ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ಅಧಿನಿಯಮ 2020ರ ಕಲಂ ಅಡಿಯಲ್ಲಿ ದಕ್ಷಿಣ ಕನ್ನಡ (ದ.ಕ.) ಜಿಲ್ಲೆಯಲ್ಲಿ ಇಂತಹ ಪ್ರಕರಣದಲ್ಲಿ ಮನೆ ಅಥವಾ ಅಕ್ರಮ ಕಸಾಯಿಖಾನೆಯನ್ನು ಮುಟ್ಟುಗೋಲು ಹಾಕಿರುವುದು ಇದೇ ಮೊದಲನೆಯದು ಎಂದು ಜಿಲ್ಲಾ ಪೊಲೀಸರು ತಿಳಿಸಿದ್ದಾರೆ.
ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ಪುದು ಗ್ರಾಮದ ಮಾರಿಪಳ್ಳ ನಿವಾಸಿಯಾದ ಹಸನಬ್ಬ ಗೋಕಳವು, ಗೋವಧೆಯಂತಹ ಪ್ರಕರಣಗಳಲ್ಲಿ ಭಾಗಿಯಾಗಿರುವ ಆರೋಪಿಯಾಗಿದ್ದಾನೆ.
ಸದ್ಯ ಈತನ ಮೇಲೆ ಗೋಸಂರಕ್ಷಣಾ ಕಾಯಿದೆ ಮತ್ತು ಗೋಹತ್ಯೆ ನಿಷೇಧ ಕಾಯಿದೆಯ ವಿವಿಧ ಕಲಂಗಳಡಿ ಪ್ರಕರಣ ದಾಖಲಾಗಿ ದಸ್ತಗಿರಿ ಮಾಡಲಾಗಿದೆ.
ಈತನ ವಿರುದ್ಧ ಈ ಹಿಂದೆಯೂ 2017 ಮತ್ತು 2018 ನೇ ಸಾಲಿನಲ್ಲಿ ಗೋಕಳ್ಳತನ ಮತ್ತು ಗೋಹತ್ಯೆ ನಿಷೇಧ ಕಾಯಿದೆಗಳಡಿಯಲ್ಲಿ ಪ್ರಕರಣಗಳು ದಾಖಲಾಗಿತ್ತು.
ಹಸನಬ್ಬನು ಗೋ ಕಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿ ಕಳವು ಮಾಡಿದ ಜಾನುವಾರುಗಳನ್ನು ಯಾವುದೇ ಪರವಾನಿಗೆ ಇಲ್ಲದೆ, ತನ್ನ ಮನೆಯಲ್ಲಿಯೇ ಅಕ್ರಮ ಕಸಾಯಿಖಾನೆ ನಿರ್ಮಿಸಿಕೊಂಡು ವಧೆ ಮಾಡಿ ಮಾಂಸ ಮಾಡುತ್ತಿದ್ದನು ಎಂದು ಪೊಲೀಸರು ತಿಳಿಸಿದ್ದಾರೆ.
ಆರೋಪಿಯನ್ನು ನಿಯಂತ್ರಿಸುವ ದೃಷ್ಟಿಯಿಂದ, ಆತನು ಅಕ್ರಮವಾಗಿ ನಿರ್ಮಾಣ ಮಾಡಿರುವ ಈ ಕಸಾಯಿಖಾನೆಯನ್ನು ಮುಟ್ಟುಗೋಲು ಹಾಕಿಕೊಳ್ಳುವಂತೆ ಬಂಟ್ವಾಳ ಗ್ರಾಮಾಂತರ ಪೊಲೀಸರು, ಸಹಾಯಕ ಆಯುಕ್ತರು ಹಾಗೂ ಉಪವಿಭಾಗೀಯ ದಂಡಾಧಿಕಾರಿ, ಮಂಗಳೂರು ಉಪವಿಭಾಗರವರಿಗೆ ವರದಿಯನ್ನು ಸಲ್ಲಿಸಿದ್ದರು.
ವರದಿಯ ಅನ್ವಯ, ಸಹಾಯಕ ಆಯುಕ್ತರು ಮತ್ತು ಉಪವಿಭಾಗೀಯ ದಂಡಾಧಿಕಾರಿಯವರು ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ಅಧಿನಿಯಮ 2020ರ ಕಲಂ 8(4) ಮತ್ತು 8(5)ರಡಿಯಲ್ಲಿ ಕ್ರಮ ಕೈಗೊಂಡಿದ್ದಾರೆ.
ಸೆ. 25ರಂದು ಆರೋಪಿ ಹಸನಬ್ಬನ ವಶದಲ್ಲಿರುವ ಪುದು ಗ್ರಾಮ ಪಂಚಾಯತ್ ವ್ಯಾಪ್ತಿಯ ಮಾರಿಪಳ್ಳ ಪಾಡಿಯ ಮನೆ ಸಂಖ್ಯೆ 6-54 ಹಾಗೂ 6-54(1)ರ ಮನೆಯನ್ನು/ಅಕ್ರಮ ಕಸಾಯಿಖಾನೆಯನ್ನು ಜಪ್ತಿ ಮಾಡಿ ಸರಕಾರದ ವಶಕ್ಕೆ ಪಡೆಯಲಾಗಿದೆ.