ರಾಜ್ಯ ಸರಕಾರ ಜಾತಿ ಗಣತಿ ಸಮೀಕ್ಷೆ ಮುಗಿಯದ ಕಾರಣ ಅವಧಿ ವಿಸ್ತರಣೆಯನ್ನು ಮಾಡಲಾಗಿದೆ. ಹೀಗಾಗಿ ಕರ್ನಾಟಕದಾದ್ಯಂತ ಸರಕಾರಿ ಮತ್ತು ಅನುದಾನಿತ ಶಾಲೆಗಳ ಸಮಯ ಬದಲಾವಣೆ ಮಾಡಿ ಶಾಲಾ ಶಿಕ್ಷಣ ಇಲಾಖೆ ಸೋಮವಾರ ಮಹತ್ವದ ಆದೇಶ ಹೊರಡಿಸಿದೆ.
ಸೆ.22 ರಿಂದ ಜಾತಿ ಸಮೀಕ್ಷೆ ಆರಂಭಗೊಂಡಿದ್ದು, ಈ ಗಣತಿಗೆ ಸರಕಾರ ಡೆಡ್ಲೈನ್ ನೀಡಿತ್ತು. ಅಕ್ಟೋಬರ್ 7 ಕ್ಕೆ ಮುಗಿಸುವಂತೆ ಹೇಳಿತ್ತು. ಆದರೆ ಅಂದುಕೊಂಡ ರೀತಿಯಲ್ಲಿ ಸಮೀಕ್ಷೆ ಮುಕ್ತಾಯಗೊಳ್ಳದ ಕಾರಣ ಬೆಂಗಳೂರು ಹೊರತುಪಡಿಸಿ ರಾಜ್ಯದಲ್ಲಿ ಅ.12 ರವರೆಗೆ ಸಮೀಕ್ಷೆ ದಿನಾಂಕ ವಿಸ್ತರಣೆ ಮಾಡಲಾಗಿದೆ. ಹೀಗಾಗಿ ಅಕ್ಟೋಬರ್ 8 ರಿಂದ ಶಾಲಾ ಸಮಯವನ್ನು ಪರಿಷ್ಕರಣೆ ಮಾಡಲಾಗಿದೆ.
ರಾಜ್ಯ ಸರಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ಅ.08 ರಿಂದ 12 ರವರೆಗೆ ಶಾಲಾ ತರಗತಿಗಳನ್ನು ಬೆಳಿಗ್ಗೆ 8 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ನಿರ್ವಹಿಸಿ, ನಂತರದ ಅವಧಿಯಲ್ಲಿ ಶಿಕ್ಷಕರು ಸಮೀಕ್ಷಾ ಕಾರ್ಯದಲ್ಲಿ ಭಾಗಿಯಾಗಬೇಕು. ರಜಾ ದಿನಗಳಲ್ಲಿ ಕೂಡಾ ಸಮೀಕ್ಷೆ ಕೈಗೊಳ್ಳಲು ಆದೇಶ ನೀಡಲಾಗಿದೆ.
ಗ್ರೇಟರ್ ಬೆಂಗಳೂರು ವ್ಯಾಪ್ತಿಯಲ್ಲಿ ಸರಕಾರಿ ಮತ್ತು ಶಾಲಾ ಅನುದಾನಿತ ಶಾಲೆಗಳಲ್ಲಿ ಅ.08 ರಿಂದ 24 ರವರೆಗೆ ತರಗತಿಗಳನ್ನು ಬೆಳಿಗ್ಗೆ 8 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ನಿರ್ವಹಿಸಿ, ನಂತರ ಸಮೀಕ್ಷೆ ಕಾರ್ಯಕ್ಕೆ ನಿಯೋಜನೆ ಮಾಡಿರುವ ಶಿಕ್ಷಕರು ಸಮೀಕ್ಷಾ ಕಾರ್ಯ ಮಾಡಲು ಹೇಳಲಾಗಿದೆ. ಅ.24 ರವರೆಗೆ ಸಮೀಕ್ಷೆ ಕಾರ್ಯಕ್ಕೆ ಗ್ರೇಟರ್ ಬೆಂಗಳೂರು ವ್ಯಾಪ್ತಿಯಲ್ಲಿ ಶಿಕ್ಷಕರಿಗೆ ಅವಧಿ ವಿಸ್ತರಣೆ ಮಾಡಲಾಗಿದೆ.
ಅ.12 ರ ಒಳಗೆ ಕರ್ನಾಟದಾದ್ಯಂತ ಸಮೀಕ್ಷೆ ಪೂರ್ಣಗೊಳಿಸಲು ಆದೇಶಿಸಲಾಗಿದೆ. ಅ.24 ರೊಳಗೆ ಗ್ರೇಟರ್ ಬೆಂಗಳೂರಿನಲ್ಲಿ ಸಮೀಕ್ಷೆ ಪೂರ್ಣಗೊಳಿಸಬೇಕು ಎಂದು ಶಾಲಾ ಶಿಕ್ಷಣ ಇಲಾಖೆ ಶಿಕ್ಷಕರಿಗೆ ಗಡುವು ನೀಡಿದೆ.