ಹರಿಹರ: ಪ್ರಕೃತಿ ಸಹಜ ಜೀವನಶೈಲಿ ಅಳವಡಿಸಿಕೊಳ್ಳುವ ಮೂಲಕ ಉತ್ತಮ ಆರೋಗ್ಯ ಕಾಪಾಡಿಕೊಳ್ಳುವುದು ಅಗತ್ಯ ಎಂದು ನಂದಿಗುಡಿ ವೃಷಭಪುರ ಸಂಸ್ಥಾನ ಮಠದ ಶ್ರೀ ಸಿದ್ದೇಶ್ವರ ಶಿವಾಚಾರ್ಯ ಸ್ವಾಮೀಜಿ ಕರೆ ನೀಡಿದರು.
ತಾಲೂಕಿನ ಉಕ್ಕಡಗಾತ್ರಿಯಲ್ಲಿ ಶ್ರೀ ಕರಿಬಸವೇಶ್ವರಸ್ವಾಮಿ ಗದ್ದಿಗೆ ಟ್ರಸ್ಟ್ ಹಾಗೂ ಹರಪನಹಳ್ಳಿಯ ಜನನಿ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಆಸ್ಪತ್ರೆ ಹಾಗೂ ಸಂಶೋಧನಾ ಕೇಂದ್ರವು ಶ್ರೀಕ್ಷೇತ್ರ ಉಕ್ಕಡಗಾತ್ರಿಯಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಉಚಿತ ಪ್ರಕೃತಿ ಚಿಕಿತ್ಸಾ ಶಿಬಿರದ ಸಾನ್ನಿಧ್ಯ ವಹಿಸಿ ಅವರು ಆಶೀರ್ವಚನ ನೀಡಿದರು.
ಪಾಶ್ಚಾತ್ಯ ಜೀವನಶೈಲಿಗೆ ಸಮಾಜ ಮಾರುಹೋದ ಪರಿಣಾಮ ಇಂದು ಅನೇಕ ಜೀವನಶೈಲಿ ರೋಗಗಳು ನಮ್ಮನ್ನು ಬಾಧಿಸುತ್ತಿವೆ. ನಮ್ಮ ಹಿರಿಯರು ತಲೆಮಾರುಗಳಿಂದ ಬಾಳಿ ಬದುಕಿನ ಸಹಜ ಜೀವನಶೈಲಿ ನಮ್ಮ ಆರೋಗ್ಯಕ್ಕೆ ಪೂರಕ. ಈ ಬಗ್ಗೆ ಸಮಾಜದಲ್ಲಿ ಅರಿವು ಮೂಡಿಸುವ ಅಗತ್ಯವಿದೆ. ಈ ನಿಟ್ಟಿನಲ್ಲಿ ಜನನಿ ಸಂಸ್ಥೆ ಈ ಶಿಬಿರ ಹಮ್ಮಿಕೊಂಡಿರುವುದು ಔಚಿತ್ಯಪೂರ್ಣ ಎಂದು ಅಭಿಪ್ರಾಯಪಪಟ್ಟರು.
ಟ್ರಸ್ಟ್ ಕಾರ್ಯದರ್ಶಿ ಸುರೇಶ್ ವೈದ್ಯಕೀಯ ಶಿಬಿರ ಉದ್ಘಾಟಿಸಿದರು. “ಯೋಗದಿಂದ ರೋಗ ದೂರವಾಗುತ್ತದೆ; ಅಂತೆಯೇ ನಮ್ಮ ಆರೋಗ್ಯ ಕಾಪಾಡಿಕೊಳ್ಳಲು ಪ್ರಕೃತಿ ನಮಗೆ ನೀಡಿದ ಅನೇಕ ಅಂಶಗಳನ್ನು ನಾವಿಂದು ಮರೆತಿದ್ದೇವೆ. ಔಷಧ ರಹಿತವಾಗಿ ನಮ್ಮ ಜೀವನಶೈಲಿ ಮಾರ್ಪಡಿಸಿಕೊಳ್ಳುವ ಮೂಲಕ ಮರೆತ ಅಂಶಗಳನ್ನು ನಮಗೆ ಪ್ರಕೃತಿ ಚಿಕಿತ್ಸಾ ಪದ್ಧತಿ ನೆನಪಿಸುತ್ತಿದೆ. ಈ ಬಗ್ಗೆ ಸಮಾಜದಲ್ಲಿ ಹೆಚ್ಚಿನ ಜಾಗೃತಿ ಮೂಡಿದಾಗ ಮಾತ್ರ ಆರೋಗ್ಯವಂತ ಸಮಾಜ ನಿರ್ಮಾಣ ಸಾಧ್ಯ” ಎಂದು ಹೇಳಿದರು.
ನಮ್ಮ ಸಮೀಪದಲ್ಲೇ ಸುಸಜ್ಜಿತ ಪ್ರಕೃತಿ ಚಿಕಿತ್ಸಾ ಆಸ್ಪತ್ರೆ ನಿರ್ಮಾಣವಾಗಿದ್ದು, ಜನರು ಇದರ ಸದುಪಯೋಗ ಪಡೆದುಕೊಂಡು ಉತ್ತಮ ಆರೋಗ್ಯ ಕಾಪಾಡಿಕೊಳ್ಳಬೇಕು ಎಂದು ಅವರು ಸಲಹೆ ಮಾಡಿದರು.
ಆಸ್ಪತ್ರೆಯ ನಿರ್ದೇಶಕ ಮತ್ತು ಮುಖ್ಯ ವೈದ್ಯಾಧಿಕಾರಿ ಡಾ.ರಾಜೇಶ್ ಪಾದೇಕಲ್ ಅಧ್ಯಕ್ಷೀಯ ಭಾಷಣದಲ್ಲಿ, ಒಮ್ಮೆ ಆರೋಗ್ಯ ಹದಗೆಟ್ಟರೆ ಸರಿಪಡಿಸಿಕೊಳ್ಳುವುದು ಕಷ್ಟಸಾಧ್ಯ. ಆರೋಗ್ಯಸೇವೆ ದುಬಾರಿಯಾಗುತ್ತಿರುವ ಇಂದಿನ ದಿನಗಳಲ್ಲಿ ರೋಗ ಬಾರದಂತೆ ಮುನ್ನೆಚ್ಚರಿಕೆ ವಹಿಸುವುದೇ ಜಾಣತನ. ಯೋಗ ಮತ್ತು ಪ್ರಕೃತಿ ಚಿಕಿತ್ಸೆಯ ಪ್ರಯೋಜನ ಪಡೆದುಕೊಳ್ಳುವ ಜತೆಗೆ ಆರೋಗ್ಯಕರ ಜೀವನಶೈಲಿ ಅಳವಡಿಸಿಕೊಳ್ಳೋಣ ಎಂದು ಹೇಳಿದರು.
ಪತ್ರಕರ್ತ ರಮೇಶ್, ಯೋಗ ಪ್ರಾಧ್ಯಾಪಕ ಬಿ.ಜಯರಾಂ, ವೈದ್ಯರಾದ ಡಾ.ನಿಶ್ಚಿತ್, ಡಾ.ದೀಪಾ, ಡಾ.ಮಾನಸ, ಡಾ.ಯಶಸ್ವಿನಿ, ವ್ಯವಸ್ಥಾಪಕ ಅನೀಶ್ ಮತ್ತಿತರರು ಉಪಸ್ಥಿತರಿದ್ದರು.

































