ಕಾರವಾರ: ಮುಂಗಾರು ಮಳೆ ಮತ್ತು ಮೀನುಗಳ ಸಂತಾನೋತ್ಪತ್ತಿಯ ಸಮಯ ಹಿನ್ನೆಲೆಯಲ್ಲಿ ಉತ್ತರ ಕನ್ನಡ ಜಿಲ್ಲೆ ಸೇರಿದಂತೆ ಕರಾವಳಿ ಭಾಗದಲ್ಲಿ ಜೂನ್ 1ರಿಂದ ಜುಲೈ 31ರವರೆಗೆ ಒಟ್ಟು 61 ದಿನಗಳ ಕಾಲ ಯಾಂತ್ರೀಕೃತ ದೋಣಿಗಳ ಮೀನುಗಾರಿಕೆಯನ್ನು ಸಂಪೂರ್ಣವಾಗಿ ನಿಷೇಧಿಸಿ ಮೀನುಗಾರಿಕೆ ಇಲಾಖೆ ಆದೇಶ ಹೊರಡಿಸಿದೆ.
ದೇಶದ ಕರಾವಳಿ ಪ್ರದೇಶದಲ್ಲಿ ಮಳೆಗಾಲದ ಅವಧಿಯನ್ನು ಮೀನುಗಳ ಸಂತಾನೋತ್ಪತ್ತಿಯ ಪ್ರಮುಖ ಕಾಲವೆಂದು ಪರಿಗಣಿಸುವ ಹಿನ್ನೆಲೆಯಲ್ಲಿ ಜಲಚರಗಳ ರಕ್ಷಣೆಗಾಗಿ ಪ್ರತಿ ವರ್ಷದಂತೆ ಈ ವರ್ಷವೂ ಮೀನುಗಾರಿಕೆಗೆ ನಿರ್ಬಂಧ ಹೇರಲಾಗಿದೆ.
ಯಾಂತ್ರಿಕೃತ ದೋಣಿಗಳು, 10 ಹೆಚ್.ಪಿ.ಗಿಂತ ಅಧಿಕ ಸಾಮರ್ಥ್ಯದ ಯಂತ್ರಗಳನ್ನು ಅಳವಡಿಸಿರುವ ಮೀನುಗಾರಿಕಾ ದೋಣಿಗಳ ಬಳಕೆ ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಇಂತಹ ದೋಣಿಗಳಲ್ಲಿ ಯಾವುದೇ ರೀತಿಯ ಬಲೆ ಅಥವಾ ಮೀನು ಹಿಡಿಯುವ ಸಾಧನ ಬಳಸಿ ಮೀನುಗಾರಿಕೆ ನಡೆಸುವಂತಿಲ್ಲ ಎಂದು ಹೇಳಲಾಗಿದೆ.
ನಿಷೇಧಿತ ಅವಧಿಯಲ್ಲಿ 10 ಹೆಚ್.ಪಿ.ಗಿಂತ ಕಡಿಮೆ ಸಾಮರ್ಥ್ಯದ ಮೋಟಾರಿಕೃತ ದೋಣಿಗಳು, ಸಾಂಪ್ರದಾಯಿಕ ನಾಡ ದೋಣಿಗಳಿಗೆ ಮಾತ್ರ ಮೀನುಗಾರಿಕೆ ನಡೆಸಲು ಅವಕಾಶ ಕಲ್ಪಿಸಲಾಗಿದ್ದು, ಈ ದೋಣಿಗಳ ಮೂಲಕ ತೆರಳುವ ಮೀನುಗಾರರು ಕಡ್ಡಾಯವಾಗಿ ಜೀವ ರಕ್ಷಕ ಸಾಧನ ಸೇರಿದಂತೆ ಅಗತ್ಯ ಸುರಕ್ಷತಾ ಕ್ರಮಗಳನ್ನು ಅಳವಡಿಸಿಕೊಂಡು ಮೀನುಗಾರಿಕೆ ನಡೆಸಲು ಅನುಮತಿ ಇದೆ.
ಈ ಆದೇಶವನ್ನು ಕಡ್ಡಾಯವಾಗಿ ಪಾಲಿಸಬೇಕು. ನಿಯಮ ಉಲ್ಲಂಘಿಸಿ ಮೀನುಗಾರಿಕೆ ನಡೆಸಿದರೆ ಕಾನೂನು ಕ್ರಮ ಜರುಗಿಸಲಾಗುವುದು. ಸರ್ಕಾರದಿಂದ ನೀಡಲಾಗುವ ಸಹಾಯಧನ ಸೌಲಭ್ಯ ರದ್ದುಗೊಳಿಸಲಾಗುವುದು ಎಂದು ಎಚ್ಚರಿಕೆ ನೀಡಲಾಗಿದೆ.






























