ಜಮ್ಮು/ಜೈಪುರ : ಉಧಂಪುರ ವಾಯುನೆಲೆಯಲ್ಲಿ ಪಾಕಿಸ್ತಾನದ ಡ್ರೋನ್ನ ಅವಶೇಷ ತಗುಲಿ ಯೋಧರೊಬ್ಬರು ಹುತಾತ್ಮರಾಗಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಪಾಕಿಸ್ತಾನದ ಡ್ರೋನ್ ದಾಳಿಗೆ ಒಳಗಾದ ಜಮ್ಮು ಮತ್ತು ಕಾಶ್ಮೀರದ ಉಧಂಪುರ ವಾಯುನೆಲೆಯಲ್ಲಿ ಕರ್ತವ್ಯದಲ್ಲಿದ್ದ ಯೋಧ ಸುರೇಂದ್ರ ಸಿಂಗ್ ಮೋಗಾ ಹುತಾತ್ಮರಾಗಿದ್ದಾರೆ.
ಭಾರತ ಮತ್ತು ಪಾಕಿಸ್ತಾನ ಕದನ ವಿರಾಮ ಘೋಷಿಸುವ ಮೊದಲು ಈ ಘಟನೆ ನಡೆದಿದೆ. ಜಮ್ಮು ಮತ್ತು ಕಾಶ್ಮೀರದ ಉಧಂಪುರ ಜಿಲ್ಲೆಯ ವಾಯುನೆಲೆಯಲ್ಲಿ ಪಾಕಿಸ್ತಾನದ ಡ್ರೋನ್ ಅನ್ನು ಭಾರತೀಯ ಸೇನೆಯ ವಾಯು ರಕ್ಷಣಾ ಪಡೆ ಹೊಡೆದುರುಳಿಸಿತು. ಈ ವೇಳೆ ಡ್ರೋನ್ ಅವಶೇಷ ತಗುಲಿ ಸುರೇಂದ್ರ ಸಿಂಗ್ ಗಂಭೀರವಾಗಿ ಗಾಯಗೊಂಡಿದ್ದ ಅವರು ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಈ ಕುರಿತು ಎಕ್ಸ್ನಲ್ಲಿ ಪೋಸ್ಟ್ ಮಾಡಿರುವ ರಾಜಸ್ಥಾನ ಮುಖ್ಯಮಂತ್ರಿ ಭಜನ್ಲಾಲ್ ಶರ್ಮಾ ಅವರು, ‘ಭಾರತೀಯ ಸೇನೆಯ ಸೈನಿಕ ಮತ್ತು ರಾಜಸ್ಥಾನದ ಪುತ್ರ ಸುರೇಂದ್ರ ಸಿಂಗ್ ಮೋಗಾ ಅವರು ಉಧಂಪುರ ವಾಯುನೆಲೆಯಲ್ಲಿ ರಾಷ್ಟ್ರೀಯ ಭದ್ರತೆಯ ಕರ್ತವ್ಯ ನಿರ್ವಹಿಸುವಾಗ ಹುತಾತ್ಮರಾಗಿದ್ದಾರೆ. ಅವರು ಹುತಾತ್ಮರಾದ ಸುದ್ದಿ ತಿಳಿದು ತೀವ್ರ ದುಃಖವಾಗಿದೆ. ಭಗವಾನ್ ಶ್ರೀ ರಾಮ ಅವರ ಆತ್ಮಕ್ಕೆ ಶಾಂತಿ ನೀಡಲಿ ಮತ್ತು ಅವರ ಕುಟುಂಬಕ್ಕೆ ಈ ಅಪಾರ ದುಃಖವನ್ನು ಭರಿಸುವ ಶಕ್ತಿಯನ್ನು ನೀಡಲಿ’ ಎಂದು ಸಂತಾಪ ಸೂಚಿಸಿದ್ದಾರೆ.