ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆಯ ಗಾಣಿಗ ಸಮಾಜದ ಸಮಗ್ರ ಅಭಿವೃದ್ಧಿಗಾಗಿ ಸಹಕಾರ ಬ್ಯಾಂಕ್ ಹಾಗೂ ಸುಸಜ್ಜಿತ ಸಮುದಾಯ ಭವನವನ್ನ ನಿರ್ಮಾಣಕ್ಕೆ ಯೋಜನೆ ರೂಪಿಸಿದ್ದಲ್ಲಿ ನನ್ನ ಸ್ವಂತ ಖರ್ಚಿನಲ್ಲಿ 25 ಲಕ್ಷವನ್ನು ನೀಡಲಾಗುವುದು ಎಂದು ಮಾಜಿ ಉಪಮುಖ್ಯಮಂತ್ರಿ ಹಾಗೂ ಶಾಸಕ ಲಕ್ಷ್ಮಣ್ ಸವದಿ ಹೇಳಿದರು.
ನಗರದ ಶ್ರೀ ಜಗದ್ಗುರು ಪಂಚಾಚಾರ್ಯ ಕಲ್ಯಾಣ ಮಂಟಪದಲ್ಲಿ ಭಾನುವಾರ ಆಯೋಜಿಸಿದ್ದ ಚಿತ್ರದುರ್ಗ ತಾಲೂಕು ಅಖಿಲ ಭಾರತ ಗಾಣಿಗರ ಸಂಘದ ವತಿಯಿಂದ ಎಸ್ಎಸ್ಎಲ್ಸಿ ಮತ್ತು ಪಿಯುಸಿ ವಿದ್ಯಾರ್ಥಿಗಳ ಜಿಲ್ಲಾ ಮಟ್ಟದ ಪ್ರತಿಭಾ ಪುರಸ್ಕಾರ, ಸಮುದಾಯದ ವೈದ್ಯರ ಸನ್ಮಾನ ಹಾಗೂ 2025–26ನೇ ಸಾಲಿನ ಸರ್ವಸದಸ್ಯರ ವಾರ್ಷಿಕ ಮಹಾಸಭೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಚಿತ್ರದುರ್ಗದಲ್ಲಿ ಗಾಣಿಗ ಸಮಾಜದ ವತಿಯಿಂದ ಸಹಕಾರ ಬ್ಯಾಂಕ್ ಸ್ಥಾಪನೆಗೆ ಮುಂದಾದರೆ ತಮ್ಮ ಸಂಪೂರ್ಣ ಸಹಕಾರ ನೀಡುವುದಾಗಿ ಭರವಸೆ ನೀಡಿದರು, ಸಮಾಜದ ಕಲ್ಯಾಣ ಮಂಟಪ ಅಥವಾ ಇತರೆ ಕಟ್ಟಡ ನಿರ್ಮಾಣಕ್ಕೆ ಕೈಹಾಕಿದರೆ ತಮ್ಮ ಕಬ್ಬಿನ ಆದಾಯದಿಂದ 25 ಲಕ್ಷ ರೂಪಾಯಿ ಧನಸಹಾಯ ನೀಡುವುದಾಗಿ ಘೋಷಿಸಿದರು. ಇದರ ಜೊತೆಗೆ ಶಾಸಕ ಕೆ.ಸಿ. ವೀರೇಂದ್ರ ಪಪ್ಪಿ ಅವರೂ ಈ ಕಾರ್ಯಕ್ಕೆ ಉದಾರವಾಗಿ ನೆರವಾಗಲಿದ್ದಾರೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.
ಸಮಾಜದ ಏಳಿಗೆ ಕೇವಲ ಜಾತಿ ಆಧಾರಿತವಾಗಿರಬಾರದು. ಸ್ವಜಾತಿಯ ಬಗ್ಗೆ ಅಭಿಮಾನವಿದ್ದಂತೆ ಇತರ ಸಮುದಾಯಗಳ ಬಗ್ಗೆ ಗೌರವವೂ ಇರಬೇಕು. ಎಲ್ಲ ಸಮಾಜಗಳನ್ನು ಒಗ್ಗೂಡಿಸಿಕೊಂಡಾಗ ಮಾತ್ರ ಸಾಮಾಜಿಕ ಹಾಗೂ ರಾಜಕೀಯವಾಗಿ ಬಲಿಷ್ಠರಾಗಲು ಸಾಧ್ಯ ಎಂದು ಅವರು ತಿಳಿಸಿದರು.
ವೈದ್ಯಕೀಯ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿರುವ ಸಮಾಜದ ವೈದ್ಯರನ್ನು ಗೌರವಿಸಿರುವುದು ಶ್ಲಾಘನೀಯ ಕಾರ್ಯವಾಗಿದ್ದು, ಬಡ ರೋಗಿಗಳಿಗೆ ಕಡಿಮೆ ವೆಚ್ಚದಲ್ಲಿ ಗುಣಮಟ್ಟದ ಚಿಕಿತ್ಸೆ ನೀಡುವ ಮೂಲಕ ಸಮಾಜಸೇವೆಗೆ ಇನ್ನಷ್ಟು ಒತ್ತು ನೀಡಬೇಕು ಎಂದು ವೈದ್ಯರಿಗೆ ಕರೆ ನೀಡಿದರು.
ಶಾಸಕ ಕೆ.ಸಿ. ವೀರೇಂದ್ರ ಪಪ್ಪಿ ಮಾತನಾಡಿ, ಸಮಾಜದ ಸಬಲೀಕರಣಕ್ಕೆ ಸಂಘಟನೆ ಹಾಗೂ ಆರ್ಥಿಕ ಬಲ ಅತ್ಯಗತ್ಯವಾಗಿದೆ. ಉತ್ತರ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಗಾಣಿಗ ಭವನಗಳು, ಸಹಕಾರ ಸಂಘಗಳು ಹಾಗೂ ಬ್ಯಾಂಕುಗಳು ಯಶಸ್ವಿಯಾಗಿ ಕಾರ್ಯನಿರ್ವಹಿಸುತ್ತಿದ್ದು, ಚಿತ್ರದುರ್ಗದಲ್ಲಿಯೂ ಅಂತಹ ಸಂಸ್ಥೆಗಳು ಸ್ಥಾಪನೆ ಈಗ ಈಗಿಂದಲೇ ಕ್ರಿಯಾತ್ಮಕ ಯೋಜನೆಯನ್ನು ಸಿದ್ಧಪಡಿಸಲಾಗುವುದು ಎಂದು ತಿಳಿಸಿದರು
ಜಿಲ್ಲೆಯಲ್ಲಿ 65ಕ್ಕೂ ಹೆಚ್ಚು ಗಾಣಿಗ ಸಮುದಾಯದ ವೈದ್ಯರು ಸೇವೆ ಸಲ್ಲಿಸುತ್ತಿರುವುದು ಹೆಮ್ಮೆಯ ವಿಷಯ. ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ನೀಡುವ ಮೂಲಕ ಶಿಕ್ಷಣಕ್ಕೆ ಉತ್ತೇಜನ ನೀಡುತ್ತಿರುವ ಸಂಘದ ಕಾರ್ಯ ಶ್ಲಾಘನೀಯವಾಗಿದೆ. ವಿದ್ಯಾರ್ಥಿಗಳು ಉನ್ನತ ಸ್ಥಾನಕ್ಕೇರಿದ ಬಳಿಕ ತಮ್ಮ ಸಮಾಜ, ತಂದೆ-ತಾಯಿ ಮತ್ತು ಊರನ್ನು ಮರೆಯದೆ ಸಮಾಜದ ಅಭಿವೃದ್ಧಿಗೆ ಕೈಜೋಡಿಸಬೇಕು ಎಂದು ಸಲಹೆ ನೀಡಿದರು.
ಕಾರ್ಯಕ್ರಮದ ದಿವ್ಯ ಸಾನಿಧ್ಯ ವಹಿಸಿದ್ದ ಶ್ರೀ ಡಾ. ಶ್ರೀ ಜಯಬಸವಕುಮಾರ ಸ್ವಾಮೀಜಿ ಆಶೀರ್ವಚನ ನೀಡಿ, ಗಾಣಿಗ ಸಮುದಾಯದವರಿಗೆ 2ಎ ಮೀಸಲಾತಿ ಸೌಲಭ್ಯ ಸಮರ್ಪಕವಾಗಿ ದೊರೆಯಲು ಜಾತಿ ಪ್ರಮಾಣ ಪತ್ರಗಳಲ್ಲಿ ಅಗತ್ಯ ತಿದ್ದುಪಡಿ ಆಗಬೇಕು ಎಂದು ಒತ್ತಾಯಿಸಿದರು. ‘ಲಿಂಗಾಯತ’ ಎಂಬುದು ತತ್ವಸೂಚಕ ಪದವಾಗಿದ್ದು, ಅದರ ನೆಪದಲ್ಲಿ ಗಾಣಿಗ ಸಮುದಾಯದ ಮೀಸಲಾತಿ ಹಕ್ಕಿಗೆ ಧಕ್ಕೆಯಾಗಬಾರದು ಎಂದು ಎಚ್ಚರಿಸಿದರು.
ಸಮಾಜದ ಮಕ್ಕಳ ಉನ್ನತ ಶಿಕ್ಷಣಕ್ಕಾಗಿ ಸಹಕಾರ ಬ್ಯಾಂಕ್, ವಿದ್ಯಾರ್ಥಿನಿಲಯ ಹಾಗೂ ಸಮುದಾಯ ಭವನಗಳ ನಿರ್ಮಾಣಕ್ಕೆ ಎಲ್ಲರೂ ಒಗ್ಗಟ್ಟಿನಿಂದ ಶ್ರಮಿಸಬೇಕು ಎಂದು ಕರೆ ನೀಡಿದರು.
ಇದೇ ಸಂದರ್ಭದಲ್ಲಿ ಉಪನ್ಯಾಸಕಿ ಡಾ. ಮೇಘನಾ ಜಿ. ರಚಿಸಿದ “ಎಣ್ಣೆ ಗಾಣಗಳು – ಪ್ರಕರಣ ಅಧ್ಯಯನ” ಕೃತಿಯನ್ನು ಅಖಿಲ ಭಾರತ ಗಾಣಿಗರ ಸಂಘದ ರಾಜ್ಯಾಧ್ಯಕ್ಷ ಸುರೇಶ್ ಸಜ್ಜನ್ ಬಿಡುಗಡೆ ಮಾಡಿದರು.
ವಿಜಯಪುರದ ಸಮಾಜದ ಮುಖಂಡ ಮಲ್ಲಿಕಾರ್ಜುನ ಎಸ್. ಲೋಣಿ ಸಮಾಜದ ಶೈಕ್ಷಣಿಕ ಪ್ರಗತಿ ಕುರಿತು ಉಪನ್ಯಾಸ ನೀಡಿದರು.
ಸಮಾರಂಭದಲ್ಲಿ ಎಸ್ಎಸ್ಎಲ್ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಸಾಧನೆ ಮಾಡಿದ 35ಕ್ಕೂ ಹೆಚ್ಚು ವಿದ್ಯಾರ್ಥಿಗಳು ಹಾಗೂ ಸಮಾಜದ 60ಕ್ಕೂ ಹೆಚ್ಚು ವೈದ್ಯರನ್ನು ಸನ್ಮಾನಿಸಲಾಯಿತು.
ಕಾರ್ಯಕ್ರಮದಲ್ಲಿ ಅಖಿಲ ಕರ್ನಾಟಕ ಗಾಣಿಗ ಸಮೂಹ ಸಂಘದ ರಾಜ್ಯಾಧ್ಯಕ್ಷ ಮಹಾಂತೇಶ ವಿ. ಚೋಳಚಗುಡ್ಡ, ಜಿಲ್ಲಾ ಗಾಣಿಗ ಸಂಘದ ಅಧ್ಯಕ್ಷ ಡಿ.ಎಸ್. ಸುರೇಶ್ಬಾಬು (ಸೈಟ್ ಬಾಬಣ್ಣ), ಚಿತ್ರದುರ್ಗ ತಾಲೂಕು ಗಾಣಿಗರ ಸಂಘದ ಅಧ್ಯಕ್ಷ ಎ.ಆರ್. ತಿಪ್ಪೇಸ್ವಾಮಿ, ತಾಲೂಕು ಗಾಣಿಗ ಸಂಘದ ಮಹಿಳಾ ವಿಭಾಗದ ಗೌರವ ಅಧ್ಯಕ್ಷರಾದ ಕೆ.ಸಿ. ವೀಣಾ, ಸೇರಿದಂತೆ ಸಮಾಜದ ಮುಖಂಡರು ಹಾಗೂ ಗಣ್ಯರು ಉಪಸ್ಥಿತರಿದ್ದರು.































