ದಾವಣಗೆರೆ: ಭವಿಷ್ಯದಲ್ಲಿ ನಿಮಗೆ ಅವಕಾಶ ನೀಡುತ್ತೇವೆ. ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನಿಮಗೆ ಟಿಕೆಟ್ ಕೈ ತಪ್ಪಿದೆ. ಹೈಕಮಾಂಡ್ ನಿರ್ಧಾರಕ್ಕೆ ನಾವೆಲ್ಲರೂ ಬದ್ಧರಿರಬೇಕು. ಉನ್ನತ ಸ್ಥಾನಮಾನ ಹೈಕಮಾಂಡ್ ಕೊಡಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಖಿಲ ಭಾರತ ರಾಷ್ಟ್ರೀಯ ಯುವ ಕಾಂಗ್ರೆಸ್ ಕಾರ್ಯದರ್ಶಿ ಸೈಯದ್ ಖಾಲಿದ್ ಅಹ್ಮದ್ ಅವರಿಗೆ ಭರವಸೆ ನೀಡಿದರು.
ನಗರದ ಎಂಬಿಎ ಗ್ರೌಂಡ್ ಗೆ ಹೆಲಿಕಾಪ್ಟರ್ ಮೂಲಕ ಆಗಮಿಸಿದ ಸಿದ್ದರಾಮಯ್ಯ ಅವರನ್ನು ಬರಮಾಡಿಕೊಳ್ಳುವ ವೇಳೆ ಭೇಟಿಯಾದ ಸೈಯದ್ ಖಾಲಿದ್ ಅಹ್ಮದ್ ಅವರಿಗೆ ಈ ಭರವಸೆ ಕೊಟ್ಟಿದ್ದಾರೆ. ದಾವಣಗೆರೆ ದಕ್ಷಿಣ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಶಾಮನೂರು ಗೆಲುವಿಗೆ ಶ್ರಮಿಸಿ. ಮುಂದಿನ ದಿನಗಳಲ್ಲಿ ಉಜ್ವಲ ಅವಕಾಶ ನಿಮಗೆ ಸಿಗಲಿದೆ. ಹೈಕಮಾಂಡ್ ಸಹ ಇದನ್ನೇ ಹೇಳಿದೆ ಎಂದು ಹೇಳಿದರು.
ಈ ವೇಳೆ ಮಾತನಾಡಿದ ಸೈಯದ್ ಖಾಲಿದ್ ಅಹ್ಮದ್ ಅವರು, ನಾನು ಈ ಬಾರಿ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದೆ. ಆದರೆ, ಹೈಕಮಾಂಡ್ ಸಮರ್ಥ್ ಶಾಮನೂರು ಅವರಿಗೆ ಟಿಕೆಟ್ ಘೋಷಿಸಿ ಬಿ ಫಾರಂ ನೀಡಿದೆ. ಪಕ್ಷದ ಆದೇಶ ಪಾಲಿಸುತ್ತೇನೆ. ಪಕ್ಷ ವಹಿಸಿದ ಜವಾಬ್ದಾರಿ ನಿಭಾಯಿಸುತ್ತೇನೆ. ನಾನು ಶಿಸ್ತಿನ ಸಿಪಾಯಿ. ಪಕ್ಷ ತೆಗೆದುಕೊಂಡ ನಿರ್ಧಾರ ಸ್ವಾಗತಿಸುತ್ತೇನೆ. ಮುಂಬರುವ ದಿನಗಳಲ್ಲಿ ಸೂಕ್ತಮಾನ ಸಿಗುವ ಭರವಸೆ ನೀಡಿದೆ. ಸಿಎಂ ಸಿದ್ದರಾಮಯ್ಯರು ಇದೇ ಭರವಸೆ ನೀಡಿದ್ದಾರೆ. ಹಾಗಾಗಿ, ಮುಖ್ಯಮಂತ್ರಿಗಳು, ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಮತ್ತು ಹೈಕಮಾಂಡ್ ನಾಯಕರು ಭರವಸೆ ಈಡೇರಿಸುವ ವಿಶ್ವಾಸ ಹೊಂದಿದ್ದೇನೆ ಎಂದು ಹೇಳಿದರು.
ಈ ಬಾರಿ ಟಿಕೆಟ್ ಸಿಗುವ ವಿಶ್ವಾಸ ಇತ್ತು. ಹೈಕಮಾಂಡ್ ಕೂಡ ಭರವಸೆ ನೀಡಿತ್ತು. ಅಂತಿಮವಾಗಿ ಸಮರ್ಥ್ ಶಾಮನೂರು ಅವರಿಗೆ ಟಿಕೆಟ್ ನೀಡಿದ್ದು, ಗೆಲುವಿಗೆ ಶ್ರಮಿಸುತ್ತೇನೆ. ಪಕ್ಷ ವಿರೋಧಿ ಚಟುವಟಿಕೆ ಮಾಡುವುದಿಲ್ಲ. ಪಕ್ಷದ ಅಭ್ಯರ್ಥಿ ಗೆಲುವಿಗೆ ಕೆಲಸ ಮಾಡುತ್ತೇನೆ ಎಂದು ತಿಳಿಸಿದರು.
ಸೈಯದ್ ಖಾಲಿದ್ ಅಹ್ಮದ್ ಅವರು ದಾವಣಗೆರೆ ದಕ್ಷಿಣ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದರು. ಸಮರ್ಥ್ ಶಾಮನೂರು ಮತ್ತು ಸೈಯದ್ ಖಾಲಿದ್ ಅಹ್ಮದ್ ಅವರ ಹೆಸರನ್ನು ಹೈಕಮಾಂಡ್ ಗೆ ಕಳುಹಿಸಲಾಗಿತ್ತು. ಆದರೆ ಅಂತಿಮವಾಗಿ ಸಚಿವ ಮತ್ತು ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ್ ಪುತ್ರ ಸಮರ್ಥ್ ಶಾಮನೂರು ಅವರಿಗೆ ಟಿಕೆಟ್ ನೀಡಿತು.

































