ಬದಲಾಗುತ್ತಾ ಶಾಲಾ ಆರಂಭದ ಸಮಯ? – ಪತ್ರ ಬರೆದ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ!

WhatsApp
Telegram
Facebook
Twitter
LinkedIn

ಬೆಂಗಳೂರು : ರಾಜ್ಯದಲ್ಲಿ ಚಳಿಗಾಳಿ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಮಕ್ಕಳ ಆರೋಗ್ಯ ಮತ್ತು ಸುರಕ್ಷತೆಗೆ ಆದ್ಯತೆ ನೀಡಬೇಕು ಎಂಬ ಕೂಗು ಕೇಳಿಬಂದಿದೆ. ಈ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗವು ಶಾಲಾ ಆರಂಭದ ಸಮಯದಲ್ಲಿ ಬದಲಾವಣೆ ಮಾಡುವಂತೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಗೆ ಮನವಿ ಮಾಡಿದೆ. ಎಲ್‌ಕೆಜಿ ಮತ್ತು ಯುಕೆಜಿಯಿಂದ ಪಿಯುಸಿ ವರೆಗಿನ ಎಲ್ಲಾ ಶಾಲೆಗಳು ಚಳಿಗಾಳಿ ಮುಗಿಯುವವರೆಗೆ ಬೆಳಗ್ಗೆ 9.30ಕ್ಕೆ ಆರಂಭವಾಗುವಂತೆ ನಿರ್ದೇಶನ ನೀಡಬೇಕು ಎಂದು ಆಯೋಗ ಒತ್ತಾಯಿಸಿದೆ.

ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷ ಶಶಿಧರ್ ಕೋಸುಂಬೆ ಅವರು ಈ ಕುರಿತು ಶಿಕ್ಷಣ ಇಲಾಖೆಗೆ ಪತ್ರ ಬರೆದಿದ್ದು, ರಾಜ್ಯದ ಹಲವು ಜಿಲ್ಲೆಗಳಲ್ಲಿ ತಾಪಮಾನ ಗಣನೀಯವಾಗಿ ಕುಸಿದಿರುವುದು ಮಕ್ಕಳ ಆರೋಗ್ಯದ ಮೇಲೆ ಪರಿಣಾಮ ಬೀರುತ್ತಿದೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ. ದಿನದಿಂದ ದಿನಕ್ಕೆ ಚಳಿ ಹೆಚ್ಚಾಗುತ್ತಿದ್ದು, ಬೆಳಗ್ಗೆ ಬೇಗ ಶಾಲೆಗೆ ತೆರಳುವ ಮಕ್ಕಳಿಗೆ ಜ್ವರ, ಕೆಮ್ಮು, ಶೀತ ಮತ್ತು ಉಸಿರಾಟ ಸಂಬಂಧಿತ ಸಮಸ್ಯೆಗಳು ಎದುರಾಗುವ ಸಾಧ್ಯತೆ ಹೆಚ್ಚಿದೆ ಎಂದು ಅವರು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ರಾಜ್ಯದ 14 ಜಿಲ್ಲೆಗಳಲ್ಲಿ ಶೀತಗಾಳಿ ಕಾಣಿಸಿಕೊಳ್ಳುವ ಸಾಧ್ಯತೆ ಇದೆ. ಉತ್ತರ ಒಳನಾಡು ಹಾಗೂ ಕಲ್ಯಾಣ ಕರ್ನಾಟಕ ಭಾಗದ ಜಿಲ್ಲೆಗಳಲ್ಲಿ ತಾಪಮಾನ ತೀವ್ರವಾಗಿ ಇಳಿಕೆಯಾಗಿದ್ದು, ಬೆಳಗ್ಗೆ ದಟ್ಟ ಮಂಜು ಮತ್ತು ಚಳಿ ಆವರಿಸುತ್ತಿದೆ. ಬೀದರ್, ಬಾಗಲಕೋಟೆ, ಬಳ್ಳಾರಿ, ಬೆಳಗಾವಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಕನಿಷ್ಠ ತಾಪಮಾನ 10 ಡಿಗ್ರಿ ಸೆಲ್ಸಿಯಸ್‌ಗಿಂತ ಕಡಿಮೆಯಾಗಿದೆ. ಬೆಂಗಳೂರಿನಲ್ಲೂ ಚಳಿ ಹೆಚ್ಚಾಗುತ್ತಿದ್ದು, ಮಕ್ಕಳಿಗೆ ಬೆಳಗ್ಗೆ ಬೇಗ ಶಾಲೆಗೆ ಹೋಗುವುದು ಆರೋಗ್ಯಕ್ಕೆ ಹಾನಿಕಾರಕವಾಗಬಹುದು ಎಂದು ಆಯೋಗ ಎಚ್ಚರಿಸಿದೆ.

ಪ್ರಸ್ತುತ ರಾಜ್ಯದ ಅನೇಕ ಶಾಲೆಗಳು ಬೆಳಗ್ಗೆ 8 ಅಥವಾ 8.30ಕ್ಕೆ ಆರಂಭವಾಗುತ್ತಿದ್ದು, ಚಳಿಗಾಳಿಯ ಸಂದರ್ಭದಲ್ಲಿ ಇದು ಮಕ್ಕಳ ಆರೋಗ್ಯಕ್ಕೆ ಅಪಾಯಕಾರಿಯಾಗಬಹುದು ಎಂದು ಆಯೋಗ ಅಭಿಪ್ರಾಯಪಟ್ಟಿದೆ. ಈ ಹಿನ್ನೆಲೆಯಲ್ಲಿ ಚಳಿಗಾಳಿ ಮುಗಿಯುವವರೆಗೆ ಶಾಲಾ ಆರಂಭದ ಸಮಯವನ್ನು ಬೆಳಗ್ಗೆ 9.30ಕ್ಕೆ ಬದಲಾಯಿಸುವುದು ಅತ್ಯಗತ್ಯ ಕ್ರಮವಾಗಲಿದೆ ಎಂದು ಶಶಿಧರ್ ಕೋಸುಂಬೆ ಅವರು ತಿಳಿಸಿದ್ದಾರೆ.

ಈ ಮನವಿಯನ್ನು ಪೋಷಕರು ಹಾಗೂ ಶಿಕ್ಷಣ ತಜ್ಞರು ಸ್ವಾಗತಿಸಿದ್ದು, ಚಳಿಗಾಳಿಯಲ್ಲಿ ಮಕ್ಕಳನ್ನು ಬೆಳಗ್ಗೆ ಬೇಗ ಶಾಲೆಗೆ ಕಳುಹಿಸುವುದು ಸೂಕ್ತವಲ್ಲ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಶಿಕ್ಷಣ ಇಲಾಖೆ ಈ ಮನವಿಯನ್ನು ಗಂಭೀರವಾಗಿ ಪರಿಗಣಿಸಿ ತ್ವರಿತ ನಿರ್ಧಾರ ಕೈಗೊಳ್ಳಬೇಕೆಂದು ಸಾರ್ವಜನಿಕ ವಲಯದಲ್ಲಿ ಒತ್ತಾಯ ಕೇಳಿಬಂದಿದೆ. ಮಕ್ಕಳ ಆರೋಗ್ಯ ರಕ್ಷಣೆಯ ದೃಷ್ಟಿಯಿಂದ ಈ ಕ್ರಮ ಅಗತ್ಯವಾಗಿದ್ದು, ಆಯೋಗದ ಈ ಮನವಿ ಮಕ್ಕಳ ಹಕ್ಕುಗಳ ರಕ್ಷಣೆಯತ್ತ ಅದರ ಬದ್ಧತೆಯನ್ನು ತೋರಿಸುತ್ತದೆ.

BC Suddi   About Us
BC Suddi Bcsuddi is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World. Read More
For Feedback - [email protected]

Related News

LATEST Post

WhatsApp

Don’t Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.

Powered By KhushiHost

WhatsApp Icon Telegram Icon