ಹೈಕಮಾಂಡ್ ಎಚ್ಚರಿಕೆಯ ಬಳಿಕ ಎಲ್ಲವೂ ತಣ್ಣಗಾಗಿದ್ದ ರಾಜ್ಯ ಕಾಂಗ್ರೆಸ್ ರಾಜಕೀಯ ಇದೀಗ, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ದೆಹಲಿ ಭೇಟಿಯ ಬೆನ್ನಲ್ಲೇ ಮತ್ತೆ ಚುರುಕಾಗಿದೆ.
ಕೇಂದ್ರ ಸಚಿವರ ಭೇಟಿಯ ನೆಪದಲ್ಲಿ ಸಿಎಂ ಮತ್ತು ಉಪ ಮುಖ್ಯಮಂತ್ರಿಗಳು ದೆಹಲಿ ಪ್ರವಾಸ ಕೈಗೊಂಡಿದ್ದರೂ, ರಾಜ್ಯದಲ್ಲಿರುವ ಗೊಂದಲಗಳಿಗೆ ಸಂಬಂಧಿಸಿದಂತೆ ಹೈಕಮಾಂಡ್ ಜತೆ ಚರ್ಚೆ ನಡೆಸಲಿದ್ದಾರೆ ಎನ್ನಲಾಗಿದೆ.ಆದರೆ ರಣದೀಪ್ ಸುರ್ಜೇವಾಲ ಅವರು ಬೆಂಗಳೂರಿನಲ್ಲಿ ಶಾಸಕ ರೊಂದಿಗೆ ಪ್ರತ್ಯೇಕ ಸಭೆ ನಡೆಸುವ ಸಮಯದಲ್ಲಿಯೇ ಸಿಎಂ, ಡಿಸಿಎಂ ದೆಹಲಿ ಭೇಟಿ ತೀವ್ರ ಕುತೂಹಲಕ್ಕೆ ಕಾರಣವಾಗಿದೆ.
ನಾಡಹಬ್ಬ ದಸರಾ ವೇಳೆ ವೈಮಾನಿಕ ಪ್ರದರ್ಶನಕ್ಕೆ ಅನುಮತಿ ನೀಡಬೇಕು ಎಂದು ಮನವಿ ಸಲ್ಲಿಸಲು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಭೇಟಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬುಧವಾರ ಬೆಳಗ್ಗೆ ದೆಹಲಿ ಪ್ರವಾಸ ಕೈಗೊಳ್ಳುತ್ತಿದ್ದಾರೆ. ಆದರೆ ಅದಕ್ಕೂ ಮೊದಲೇ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಕೇಂದ್ರ ಜಲಶಕ್ತಿ ಸಚಿವ ಸಿ.ಆರ್. ಪಾಟೀಲ್ ಭೇಟಿಗೆ ಮಂಗಳವಾರ ಬೆಳಗ್ಗೆಯೇ ತೆರಳಲಿದ್ದು, ಮಂಗಳವಾರ ದೆಹಲಿಯಲ್ಲಿಯೇ ವಾಸ್ತವ್ಯ ಹೂಡಲಿದ್ದು ಬೆಂಗಳೂರಿಗೆ ಯಾವಾಗ ವಾಪಸಾಗಲಿದ್ದಾರೆ ಎನ್ನುವ ಗುಟ್ಟನ್ನು ಬಿಟ್ಟುಕೊಟ್ಟಿಲ್ಲ.
ದೆಹಲಿಯ ಭೇಟಿಯ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜನಾಥ್ ಸಿಂಗ್ ಅವರ ಭೇಟಿಯ ಬಳಿಕ ಪಕ್ಷದ ದ ಹೈಕಮಾಂಡ್ ಅನ್ನು ಭೇಟಿಯಾಗುವ ಸಾಧ್ಯತೆಯಿದೆ.
ಡಿಕೆಶಿ ಭೇಟಿ ಕುತೂಹಲ!
ಸಿದ್ದರಾಮಯ್ಯ ಅವರು ಹೈಕಮಾಂಡ್ ಜತೆ ಒಬಿಸಿ ಸಲಹಾ ಸಮಿತಿಗೆ ಸಂಬಂಧ ಚರ್ಚಿಸುವ ಸಾಧ್ಯತೆಯಿದೆ. ಆದರೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಯಾರನ್ನು ಭೇಟಿಯಾಗಲಿದ್ದಾರೆ? ಯಾವೆಲ್ಲ ವಿಷಯಗಳು ಚರ್ಚೆಗೆ ಬರಲಿವೆ? ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಹೈಕಮಾಂಡ್ ಭೇಟಿಯಾಗುವರೋ ಅಥವಾ ಪ್ರತ್ಯೇಕವಾಗಿ ಭೇಟಿಯಾಗಲಿದ್ದಾರೋ ಎನ್ನುವ ಕುತೂಹಲ ಮೂಡಿಸಿದೆ.