ಕಳೆದ 20 ದಿನಗಳ ಅವಧಿಯಲ್ಲಿ ಕರ್ನಾಟಕದಲ್ಲಿ ಕೋವಿಡ್ -19 ಪ್ರಕರಣಗಳ ಸಂಖ್ಯೆಯಲ್ಲಿ ಕೊಂಚ ಏರಿಕೆಯನ್ನು ಗಮನಿಸಲಾಗಿದ್ದು, 2025ನೇ ಸಾಲಿನಲ್ಲಿ ಇಲ್ಲಿಯವರೆಗೆ ಒಟ್ಟು 35 ಸಕ್ರಿಯ ಪ್ರಕರಣಗಳಿದ್ದು, ಅವುಗಳ ಪೈಕಿ 32 ಪ್ರಕರಣಗಳು ಬೆಂಗಳೂರು ನಗರದಲ್ಲಿ ವರದಿಯಾಗಿವೆ. 2025ನೇ ಸಾಲಿನಲ್ಲಿ ಈವರೆಗೆ ಯಾವುದೇ ಕೋವಿಡ್ ಮರಣಗಳು ವರದಿಯಾಗಿರುವುದಿಲ್ಲ. ಪ್ರಸ್ತುತ, ಕೋವಿಡ್-19 ಪರಿಸ್ಥಿತಿಯು ಹತೋಟಿಯಲ್ಲಿದ್ದು ಸಾರ್ವಜನಿಕರು ಅನಗತ್ಯ ಭಯಪಡುವ ಅಗತ್ಯವಿಲ್ಲ, ಆದರೆ ಎಚ್ಚರಿಕೆಯನ್ನು ವಹಿಸುವುದು ಅಗತ್ಯವಾಗಿದೆ ಎಂದು ರಾಜ್ಯ ಸರ್ಕಾರ ತಿಳಿಸಿದೆ.
ಆದಾಗ್ಯೂ, ಸಾರ್ವಜನಿಕರು ಅದರಲ್ಲೂ ವಿಶೇಷವಾಗಿ ಗರ್ಭಿಣಿಯರು, ಮಕ್ಕಳು ಹಾಗೂ ಇತರ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿರುವವರು ಮುಂಜಾಗ್ರತಾ ಕ್ರಮವಾಗಿ ಜನನಿಬಿಡ ಪ್ರದೇಶಗಳಿಗೆ ತೆರಳುವಾಗ ಮಾಸ್ಕ್ ಧರಿಸುವುದು ಸೂಕ್ತವಾಗಿದೆ. ಹಾಗೂ ಕೋವಿಡ್ (Covid Appropriate Behaviour-CAB) ಸ್ವಚ್ಛತೆ, ಹ್ಯಾಂಡ್ ಸ್ಯಾನಿಟೈಸರ್ ನ ಬಳಕೆ ಇತ್ಯಾದಿಗಳನ್ನು ಪಾಲಿಸುವುದು ಅಗತ್ಯವಾಗಿದೆ.
Severe Acute Respiratory Illness (SARI) ಲಕ್ಷಣಗಳನ್ನು ಹೊಂದಿರುವವರು, ಆದ್ಯತೆಯ ಮೇಲೆ ಕೋವಿಡ್ – 19 ಪರೀಕ್ಷೆಗೆ ಒಳಪಡುವುದರಿಂದ, ಸೂಕ್ತ ಚಿಕಿತ್ಸೆ ಪಡೆಯುವುದರೊಂದಿಗೆ ಕೋವಿಡ್ ಪ್ರಸರಣವನ್ನು ನಿಯಂತ್ರಿಸಬಹುದಾಗಿದೆ.