ನವದೆಹಲಿ : ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯಲ್ಲಿ ಸಂಭವಿಸಿದ ಮೇಘಸ್ಫೋಟದಿಂದಾಗಿ 10 ಕ್ಕೂ ಹೆಚ್ಚು ಮನೆಗಳಿಗೆ ಹಾನಿಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಇತ್ತೀಚಿಗಷ್ಟೇ ಹವಾಮಾನ ಇಲಾಖೆಯು ಕಥುವಾ, ಸಾಂಬಾ, ದೋಡಾ, ಜಮ್ಮು, ರಾಂಬನ್ ಮತ್ತು ಕಿಶ್ತ್ವಾರ್ ಜಿಲ್ಲೆಗಳು ಸೇರಿದಂತೆ ಜಮ್ಮುವಿನ ಹಲವು ಭಾಗಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಎಚ್ಚರಿಕೆ ನೀಡಿತ್ತು. ಅದರ ಬೆನ್ನಲ್ಲೇ ಮೇಘಸ್ಫೋಟ ಸಂಭವಿಸಿದೆ. ಮೇಘಸ್ಫೋಟದಲ್ಲಿ 10ಕ್ಕೂ ಅಧಿಕ ಮನೆಗಳು ಹಾನಿಯಾಗಿದ್ದು, ಈವರೆಗೆ ಯಾವುದೇ ಸಾವುನೋವುಗಳು ವರದಿಯಾಗಿಲ್ಲ.
ಈ ಕುರಿತು ಅಧಿಕಾರಿ ಮಾತನಾಡಿ, ಪ್ರತಿಕೂಲ ಹವಾಮಾನದ ಹಿನ್ನೆಲೆ ಜಮ್ಮುವಿನಾದ್ಯಂತ ಸರ್ಕಾರಿ ಹಾಗೂ ಖಾಸಗಿ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಜೊತೆಗೆ ಜಮ್ಮುವಿನಲ್ಲಿ ಪ್ರವಾಹದ ಎಚ್ಚರಿಕೆ ನೀಡಲಾಗಿದ್ದು, ಜನರು ಭೂಕುಸಿತ ಪೀಡಿತ ಪ್ರದೇಶಗಳಿಂದ ದೂರವಿರಲು ಸೂಚಿಸಲಾಗಿದೆ. ತಾವಿ ನದಿ ಸೇರಿದಂತೆ ಅನೇಕ ನದಿಗಳು ಮತ್ತು ಹೊಳೆಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿವೆ. ರಾತ್ರಿ ವೇಳೆ ನೀರಿನ ಪ್ರಮಾಣದಲ್ಲಿ ಗಮನಾರ್ಹ ಏರಿಕೆಯಾಗುವ ನಿರೀಕ್ಷೆಯಿದೆ ಎಂದು ತಿಳಿಸಿದ್ದಾರೆ.
ಆ.27ರವರೆಗೆ ಎತ್ತರದ ಪ್ರದೇಶಗಳಲ್ಲಿ ಮೇಘಸ್ಫೋಟ, ಹಠಾತ್ ಪ್ರವಾಹ ಮತ್ತು ಭೂಕುಸಿತ ಸಂಭವಿಸುವ ಸಾಧ್ಯತೆ ಇದೆ. ದುರ್ಬಲ ಪ್ರದೇಶಗಳಲ್ಲಿ ರಕ್ಷಣಾ ತಂಡಕ್ಕೆ ಕಟ್ಟೆಚ್ಚರ ವಹಿಸುವಂತೆ ಸೂಚನೆ ನೀಡಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.