ಚಿತ್ರದುರ್ಗ : ಕನ್ನಡ ರಾಜ್ಯೋತ್ಸವ ನವೆಂಬರ್ ತಿಂಗಳಿಗಷ್ಟೆ ಸೀಮಿತವಾಗಬಾರದು. ಜೀವನದ ಪ್ರತಿ ಕ್ಷಣದಲ್ಲಿಯೂ ಕನ್ನಡ ನಾಡು, ನುಡಿ, ನೆಲ, ಜಲದ ಬಗ್ಗೆ ಮಕ್ಕಳಲ್ಲಿ ಅಭಿಮಾನ ಮೂಡಿಸುವ ಕೆಲಸವಾಗಬೇಕೆಂದು ಡಾ.ಯಶಸ್ವಿನಿ ರೆಡ್ಡಿ ಕೆ.ಬಿ. ತಿಳಿಸಿದರು.
ರಾಷ್ಟ್ರೀಯ ಹೆದ್ದಾರಿ-13 ಪಿಳ್ಳೆಕೆರನಹಳ್ಳಿಯಲ್ಲಿರುವ ಬಾಪೂಜಿ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ಏರ್ಪಡಿಸಲಾಗಿದ್ದ ಕನ್ನಡ ರಾಜ್ಯೋತ್ಸವ ಕನ್ನಡ ಕಲರವ ಉದ್ಗಾಟಿಸಿ ಮಾತನಾಡಿದರು.
ಶಾಲೆಯಲ್ಲಿ ಮಕ್ಕಳು ಹಾಗೂ ಶಿಕ್ಷಕರ ಒಡನಾಟ ಅನ್ಯೋನ್ಯವಾಗಿರಬೇಕು. ಮಕ್ಕಳನ್ನು ಪಠ್ಯಕ್ಕಷ್ಟೆ ಸೀಮಿತಗೊಳಿಸುವ ಬದಲು ಇಂತಹ ಸಾಂಸ್ಕøತಿಕ ಕಾರ್ಯಕ್ರಮಗಳಲ್ಲಿ ತೊಡಗಿಸುವ ಜವಾಬ್ದಾರಿ ಶಿಕ್ಷಕರು ಹಾಗೂ ಪೋಷಕರುಗಳ ಮೇಲಿದೆ ಎಂದು ಹೇಳಿದರು.
ಮಕ್ಕಳ ಸಾಹಿತಿ ಪರಮೇಶ್ವರಪ್ಪ ಕುದುರಿ ಮಾತನಾಡಿ ಮಕ್ಕಳ ದಿನಾಚರಣೆ ಹಾಗೂ ಕನ್ನಡ ರಾಜ್ಯೋತ್ಸವದ ಮಹತ್ವ ಕುರಿತು ಮಕ್ಕಳಲ್ಲಿ ಜಾಗೃತಿ ಮೂಡಿಸಿದರು.
ಬಾಪೂಜಿ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಡಾ.ಕೆ.ಎಂ.ವೀರೇಶ್ ಅಧ್ಯಕ್ಷತೆ ವಹಿಸಿ ಮಾತನಾಡುತ್ತ ಮಕ್ಕಳ ಸರ್ವತೋಮುಖ ಬೆಳವಣಿಗೆಯಲ್ಲಿ ಸಾಹಿತ್ಯ ಅತ್ಯಂತ ಪ್ರಮುಖವಾದುದು ಎಂದರು.
ಸಂಸ್ಥೆಯ ನಿರ್ದೇಶಕ ಕೆ.ಎಂ.ಚೇತನ್ ಮಾತನಾಡುತ್ತ ಮಕ್ಕಳಲ್ಲಿ ಸಮಯ ಪ್ರಜ್ಞೆ ಹಾಗೂ ಕಲಿಕೆಯಲ್ಲಿ ಸಾಧಿಸುವ ಛಲವಿರಬೇಕು. ಕನ್ನಡ ನಾಡು ನುಡಿ ನೆಲ ಜಲ ಭಾಷೆಯ ಬಗ್ಗೆ ಕನ್ನಡ ರಾಜ್ಯೋತ್ಸವದ ಮೂಲಕ ಪರಿಚಯಿಸಬೇಕೆಂದು ತಿಳಿಸಿದರು.
ಬಾಪೂಜಿ ಶಿಕ್ಷಣ ಸಂಸ್ಥೆಯ ನಿರ್ದೇಶಕಿ ಮೇಘನಾ ಚೇತನ್, ಎಲ್ಲಾ ಮುಖ್ಯಸ್ಥರು, ಸಿಬ್ಬಂದಿ ವರ್ಗದವರು ಕಾರ್ಯಕ್ರಮದಲ್ಲಿ ಹಾಜರಿದ್ದರು. ಮಕ್ಕಳಿಂದ ವಿವಿಧ ಸಾಂಸ್ಕøತಿಕ ಕಾರ್ಯಕ್ರಮಗಳು ನಡೆಯಿತು.































