ಚಿತ್ರದುರ್ಗ : ಹಸುಗಳಿಗೆ ಹಸಿರು ಮೇವು ಹಾಕಿ ಹಾಲಿನ ಉತ್ಪನ್ನ ಹೆಚ್ಚಿಸಿಕೊಳ್ಳುವಂತೆ ಶಿಮುಲ್ ನಿರ್ದೇಶಕ ಜಿ.ಬಿ.ಶೇಖರ್ ತಿಳಿಸಿದರು. ಹೊಳಲ್ಕೆರೆ ತಾಲ್ಲೂಕಿನ ಸಿಂಗೇನಹಳ್ಳಿಯ ಸಹಕಾರ ಸಂಘದಲ್ಲಿ ಇತ್ತೀಚೆಗೆ ನಡೆದ ಹಾಲು ಕರೆಯುವ ಸ್ಪರ್ಧೆ ಉದ್ಘಾಟಿಸಿ ಮಾತನಾಡಿದರು.
ಹಸುಗಳಿಗೆ ಇಂಡಿ, ಬೂಸಾ ಜೊತೆಗೆ ಹಸಿರು ಮೇವು ನೀಡಿ ಸಕಾಲಕ್ಕೆ ಚಿಕಿತ್ಸೆ ಕೊಡಿಸಿ ಯಾವುದೇ ರೋಗಕ್ಕೆ ತುತ್ತಾಗದಂತೆ ಜಾನುವಾರುಗಳನ್ನು ಜೋಪಾನ ಮಾಡಿಕೊಳ್ಳಬೇಕು. ಕೃಷಿಯ ಜೊತೆ ರೈತರು ಹೈನುಗಾರಿಕೆ ಮೂಲಕ ಜೀವನ ಮಟ್ಟವನ್ನು ಸುಧಾರಿಸಿಕೊಳ್ಳಬೇಕಲ್ಲದೆ ಬರಡು ರಾಸುಗಳ ಚಿಕಿತ್ಸಾ ಶಿಬಿರದ ಪ್ರಯೋಜನ ಪಡೆದುಕೊಳ್ಳುವಂತೆ ಮನವಿ ಮಾಡಿದರು.
ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ಎಸ್.ಆರ್.ಪ್ರಸನ್ನ, ಹೊಳಲ್ಕೆರೆ ಪಶುಪಾಲನಾ ಇಲಾಖೆ ಸಹಾಯಕ ನಿರ್ದೇಶಕ ಡಾ.ರಂಗಸ್ವಾಮಿ, ಕೃಷಿಕ ಸಮಾಜದ ಅಧ್ಯಕ್ಷ ಮಹೇಶ್ವರಪ್ಪ, ಪಶು ವೈದ್ಯಾಧಿಕಾರಿಗಳು ಹಾಗೂ ಒಕ್ಕೂಟದ ಅಧಿಕಾರಿಗಳು ಮತ್ತು ಸಿಬ್ಬಂದಿಯವರು ಸ್ಪರ್ಧೆಯಲ್ಲಿ ಹಾಜರಿದ್ದರು.































