ಚಿತ್ರದುರ್ಗ: ವಿಧಾನಸಭಾ ಚುನಾವಣೆಯ ಕಾಂಗ್ರೆಸ್ ಟಿಕೆಟ್ ಕೈತಪ್ಪಿದ್ದರಿಂದ ಬಂಡಾಯ ಎದ್ದಿರುವ ವಿಧಾನಪರಿಷತ್ ಮಾಜಿ ಸದಸ್ಯ ಜಿ.ರಘು ಆಚಾರ್ ಮನವೊಲಿಕೆ ಯತ್ನ ಮಾಡುವಲ್ಲಿ ಶುಕ್ರವಾರ ವಿಫಲಗೊಂಡಿತು.
ಕಾಂಗ್ರೆಸ್ ಅಭ್ಯರ್ಥಿ ಕೆ.ಸಿ.ವೀರೇಂದ್ರ ಹಾಗೂ ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಎಂ.ಕೆ.ತಾಜ್ ಪೀರ್ ನೇತೃತ್ವದ ನಿಯೋಗ ಶುಕ್ರವಾರ ಬೆಳಿಗ್ಗೆ ರಘು ಆಚಾರ್ ಮನೆಗೆ ಧಾವಿಸಿ ಅರ್ಧ ಗಂಟೆಗೂ ಹೆಚ್ಚು ಹೊತ್ತು ಮಾತುಕತೆ ನಡೆಸಿತು. ಮನವೊಲಿಕೆ ಯತ್ನ ವಿಫಲಗೊಂಡಿದ್ದರಿಂದ ಕಾಂಗ್ರೆಸ್ ನಿಯೋಗ ನಿರಾಸೆಯಿಂದ ಹಿಂದಿರುಗಿತು.
ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಜಿ.ರಘು ಆಚಾರ್, ‘ಕಾಂಗ್ರೆಸ್ ಟಿಕೆಟ್ ಸಿಗುವ ನಿರೀಕ್ಷೆ ಹುಸಿಯಾಗಿದೆ. ಆದರೂ ಚುನಾವಣೆಗೆ ಸ್ಪರ್ಧಿಸುವುದಾಗಿ ಗುರುವಾರವೇ ಘೋಷಣೆ ಮಾಡಿದ್ದೇನೆ. ಈ ನಿರ್ಧಾರ ಬದಲಿಸಲು ಸಾಧ್ಯವಿಲ್ಲ. ಏ.17ರಂದು ನಾಮಪತ್ರ ಸಲ್ಲಿಕೆಯನ್ನು ತಪ್ಪಿಸಲು ಯಾರಿಂದಲೂ ಆಗುವುದಿಲ್ಲ. ವೀರೇಂದ್ರ ಅವರು ತಡವಾಗಿ ಮನೆಗೆ ಬಂದಿದ್ದಾರೆ. ಅವರಿಗೆ ಒಳಿತಾಗಲಿ’ ಎಂದರು.