ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಸಿಹಿ ಸುದ್ದಿ ಸಿಕ್ಕಿದೆ.
ಅಗತ್ಯ ವಿಷಯಗಳಲ್ಲಿ ಪದವಿ ಹೊಂದಿದ್ದು, ಒಂದರಿಂದ ಐದನೇ ತರಗತಿವರೆಗಿನ ವಿದ್ಯಾರ್ಥಿಗಳಿಗೆ ಬೋಧನೆ ಮಾಡುತ್ತಿರುವ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಟಿಇಟಿ ಪ್ರಮಾಣ ಪತ್ರ ಅಗತ್ಯವಿಲ್ಲ ಎಂದು ಹೇಳಲಾಗಿದೆ.
ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಕುರಿತಾಗಿ ಅಧಿಕೃತ ನಿರ್ಣಯ ಕೈಗೊಳ್ಳಲಾಗಿದೆ. ಪದವಿ ಪೂರೈಸಿದ ಪ್ರಾಥಮಿಕ ಶಿಕ್ಷಕರಿಗೆ ಟಿಇಟಿ ಕಡ್ಡಾಯ ಷರತ್ತಿನಿಂದ ವಿನಾಯಿತಿ ನೀಡಲಾಗಿದೆ.
ಸಂಪುಟ ಸಭೆಯ ಬಳಿಕ ಕಾನೂನು ಸಚಿವ ಹೆಚ್.ಕೆ. ಪಾಟೀಲ್ ಈ ಬಗ್ಗೆ ಮಾಹಿತಿ ನೀಡಿದ್ದು, ಒಂದರಿಂದ ಐದನೇ ತರಗತಿವರೆಗೆ ಬೋಧಿಸುತ್ತಿರುವ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಟಿಇಟಿ ಪ್ರಮಾಣ ಪತ್ರ ಅಗತ್ಯವಿಲ್ಲ. 6 ಮತ್ತು 7ನೇ ತರಗತಿ ಹಾಗೂ ಮುಂದುವರೆದ ತರಗತಿಗಳಿಗೆ ಟಿಇಟಿ ಅಗತ್ಯವೆಂದು ತೀರ್ಮಾನಿಸಲಾಗಿದೆ ಎಂದು ಹೇಳಿದ್ದಾರೆ.

































