ಬೆಂಗಳೂರು : ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದ ಹೊರಗೆ ಆರ್ಸಿಬಿ ಸಂಭ್ರಮಾಚರಣೆ ವೇಳೆ ಸಂಭವಿಸಿದ ಕಾಲ್ತುಳಿತದಲ್ಲಿ 11 ಜನರು ಮೃತಪಟ್ಟಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ನ ವಿಭಾಗೀಯ ಪೀಠ ಆರ್ಸಿಬಿ, ಕೆಎಸ್ಸಿಎ, ಡಿಎನ್ಎ ಸಂಸ್ಥೆಗಳಿಗೆ ನೋಟಿಸ್ ಜಾರಿ ಮಾಡಿದೆ.
ಕಾಲ್ತುಳಿತ ಘಟನೆಗೆ ಸಂಬಂಧಿಸಿದಂತೆ ದಾಖಲಿಸಿಕೊಂಡಿದ್ದ ಸ್ವಯಂಪ್ರೇರಿತ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆಯನ್ನು ವಿಭಾಗೀಯ ಪೀಠ ಇಂದು ನಡೆಸಿತು. ರಾಜ್ಯ ಸರ್ಕಾರ ಘಟನೆಗೆ ಸಂಬಂಧಿಸಿದಂತೆ ಈವರೆಗೂ ಕೈಗೊಂಡ ಕ್ರಮದ ವರದಿಯನ್ನು ಮುಚ್ಚಿದ ಲಕೋಟೆಯಲ್ಲಿ ಹೈಕೋರ್ಟ್ಗೆ ಸಲ್ಲಿಸಿತು.
ಈ ವೇಳೆ ಮುಚ್ಚಿದ ಲಕೋಟೆಯಲ್ಲಿ ಏಕೆ ವರದಿ ಸಲ್ಲಿಸುತ್ತಿದ್ದೀರಿ ಎಂದು ಹೈಕೋರ್ಟ್ ಪ್ರಶ್ನಿಸಿದೆ. ಹೈಕೋರ್ಟ್ ಪ್ರಶ್ನೆಗೆ ಉತ್ತರಿಸಿದ ಸರ್ಕಾರದ ಪರ ವಕೀಲರು, ತನಿಖೆ ಇನ್ನೂ ಬಾಕಿಯಿರುವುದರಿಂದ ಪೂರ್ವಾಗ್ರಹವಿರಬಾರದು, ಮೂರನೇ ವ್ಯಕ್ತಿಗಳ ವಿರುದ್ಧ ಅಭಿಪ್ರಾಯವೆಂದು ಭಾವಿಸಬಾರದು. ಹೀಗಾಗಿ ಮುಚ್ಚಿದ ಲಕೋಟೆಯಲ್ಲಿ ವರದಿ ಸಲ್ಲಿಸಲಾಗಿದೆ. ದಾಖಲೆಗಳನ್ನು ಹಂಚಿಕೊಳ್ಳುವುದಕ್ಕೆ ಸರ್ಕಾರದ ಆಕ್ಷೇಪವಿಲ್ಲ. ಆದರೆ. ನ್ಯಾಯಾಂಗ ತನಿಖೆ ಬಾಕಿಯಿರುವುದರಿಂದ ವರದಿ ಬಹಿರಂಗ ಬೇಡ ಎಂದು ಉತ್ತರಿಸಿದ್ದಾರೆ.
ಇನ್ನು ಈ ಪ್ರಕರಣದಲ್ಲಿ ಅಮೈಕಸ್ ಕ್ಯೂರಿ ಅಗತ್ಯವಿದೆ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ. ಮುಚ್ಚಿದ ಲಗೋಟೆಯಲ್ಲಿ ಸರ್ಕಾರ ಸಲ್ಲಿಸಿರುವ ವರದಿಯನ್ನು ಬಹಿರಂಗಗೊಳಿಸಬೇಕು. ಸರ್ಕಾರ ಪಾರದರ್ಶಕ, ಪ್ರಜಾಸತ್ತಾತ್ಮಕ ಪ್ರಕ್ರಿಯೆ ಅನುಸರಿಸಬೇಕು. ಮಾಹಿತಿಯ ಹಕ್ಕನ್ನು ಸರ್ಕಾರ ಗೌರವಿಸಬೇಕು. ಸರ್ಕಾರ ಯಾವುದೇ ಮಾಹಿತಿಯನ್ನೂ ಮುಚ್ಚಿಡಬಾರದು. ಸರ್ಕಾರ ಸಂಪೂರ್ಣ ತಪ್ಪು ವರದಿ ನೀಡಿದರೂ ತಿಳಿಯುವುದಿಲ್ಲ. ಸಾರ್ವಜನಿಕರ ಹಿತದೃಷ್ಟಿಯಿಂದ ವರದಿಯಲ್ಲಿನ ಅಂಶ ಬಹಿರಂಗವಾಗಬೇಕು. ಇಲಿ, ಬೆಕ್ಕಿನ ಆಟ ಸರಿಯಲ್ಲ ಎಂದು ಅರ್ಜಿದಾರರು ವಾದಿಸಿದ್ದಾರೆ.
ಹೈಕೋರ್ಟ್ ಸರ್ಕಾರದ ವಾದ ಕೇಳಿದ ಬಳಿಕ ಮುಚ್ಚಿದ ಲಕೋಟೆ ಬಗ್ಗೆ ತೀರ್ಮಾನ ಮಾಡಲಾಗುವುದು ಎಂದು ವಿಚಾರಣೆಯನ್ನು ಜೂನ್ 23ಕ್ಕೆ ಮುಂದೂಡಿದೆ.