ಬೆಂಗಳೂರು: ರಾಜ್ಯದ ಸರ್ಕಾರಿ ಪ್ರಾಥಮಿಕ ಶಾಲಾ ಸಹ ಶಿಕ್ಷಕರಿಗೆ ಮುಖ್ಯ ಶಿಕ್ಷಕರ ಹುದ್ದೆಗೆ ಬಡ್ತಿ ನೀಡುವ ಪ್ರಕ್ರಿಯೆಗೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಚಾಲನೆ ನೀಡಿದೆ.
2026ರ ಜನವರಿ 1ರಲ್ಲಿದ್ದಂತೆ ಸಿದ್ಧಪಡಿಸಲಾದ ತಾತ್ಕಾಲಿಕ ಜೇಷ್ಠತಾ ಪಟ್ಟಿಯ ಆಧಾರದ ಮೇಲೆ ರಾಜ್ಯದ ಸರ್ಕಾರಿ ಪ್ರಾಥಮಿಕ ಶಾಲಾ ಸಹ ಶಿಕ್ಷಕರ ವೃಂದದ ಸಹ ಶಿಕ್ಷಕರಿಗೆ ಮುಖ್ಯ ಶಿಕ್ಷಕರ ಹುದ್ದೆಗೆ ಬಡ್ತಿ ನೀಡಲಾಗುವುದು.
ಅಂಗವಿಕಲ ಅಭ್ಯರ್ಥಿಗಳಿಗೆ ನಿಯಮಾನುಸಾರ ಶೇಕಡ 4ರಷ್ಟು ಮೀಸಲಾತಿ ಕಲ್ಪಿಸಲಾಗಿದ್ದು, ಅರ್ಹ ಅಭ್ಯರ್ಥಿಗಳು ಜಿಲ್ಲಾ ವೈದ್ಯಕೀಯ ಮಂಡಳಿಯಿಂದ ಪಡೆದ ಪ್ರಮಾಣ ಪತ್ರ ಅಥವಾ ಯುಡಿಐಡಿ ಕಾರ್ಡ್ ಸಲ್ಲಿಸುವುದು ಕಡ್ಡಾಯವಾಗಿದೆ. ಕೌನ್ಸೆಲಿಂಗ್ ಪ್ರಕ್ರಿಯೆಯಲ್ಲಿ ಅರ್ಹ ಅಂಗವಿಕಲ ಅಭ್ಯರ್ಥಿಗಳಿಗೆ ಜೇಷ್ಠತೆ ಆಧಾರದ ಮೇಲೆ ಮೊದಲ ಆದ್ಯತೆ ನೀಡಲಾಗುವುದು.
ಬಡ್ತಿ ಪ್ರಕ್ರಿಯೆಯಲ್ಲಿ ಯಾವುದೇ ಲೋಪಗಳಾಗದಂತೆ ಆಯಾ ಜಿಲ್ಲಾ ಉಪ ನಿರ್ದೇಶಕರು(ಆಡಳಿತ) ಎಚ್ಚರಿಕೆ ವಹಿಸುವುದು, ಯಾವುದೇ ತಪ್ಪುಗಳಾದಲ್ಲಿ ಅವರನ್ನೇ ನೇರ ಹೊಣೆಗಾರರನ್ನಾಗಿ ಮಾಡಲಾಗುವುದು. ಬಡ್ತಿ ಪಡೆಯಲು ಬಯಸದ ಅಥವಾ ಮುಂದೂಡಲು ಬಯಸುವ ಶಿಕ್ಷಕರು ಕಡ್ಡಾಯವಾಗಿ ಮುಚ್ಚಳಿಕೆ ಪತ್ರ ನೀಡಬೇಕಿದೆ. ಸುಳ್ಳು ದಾಖಲೆ ನೀಡಿ ಬಡ್ತಿ ಪಡೆದರೆ ಅಂತಹ ಶಿಕ್ಷಕರ ವಿರುದ್ಧ ಕಠಿಣ ಶಿಸ್ತು ಕ್ರಮ ಜರುಗಿಸಿ ಬಡ್ತಿ ರದ್ದು ಮಾಡಲಾಗುವುದು ಎಂದು ಶಾಲಾ ಶಿಕ್ಷಣ ಇಲಾಖೆಯ ಆಯುಕ್ತ ವಿಕಾಸ್ ಕಿಶೋರ್ ಸುರಾಳ್ಕರ್ ತಿಳಿಸಿದ್ದಾರೆ.

































