ಬೆಂಗಳೂರು : ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಸಂಭವಿಸಿದ್ದ ಕಾಲ್ತುಳಿದ ಪ್ರಕರಣದಲ್ಲಿ ಕರ್ತವ್ಯ ಲೋಪ ಹಿನ್ನೆಲೆಯಲ್ಲಿ ನಾಲ್ವರ ಅಮಾನತು ಆದೇಶವನ್ನು ರಾಜ್ಯ ಸರ್ಕಾರ ಹಿಂಪಡೆದುಕೊಂಡಿದೆ. ಇದೀಗ ಇದರ ಬೆನ್ನಲ್ಲೇ ಅಮಾನತು ರದ್ದಾದ ಐಪಿಎಸ್ ಅಧಿಕಾರಿಗಳಿಗೆ ಸ್ಥಳ ನಿಯೋಜನೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.
ಕರ್ತವ್ಯ ಲೋಪ ಹಿನ್ನೆಲೆಯಲ್ಲಿ ಬೆಂಗಳೂರು ಪೊಲೀಸ್ ಕಮಿಷನರ್ ಬಿ.ದಯಾನಂದ್, ಡಿಸಿಪಿ ಶೇಖರ್ ಎಚ್.ಟಿ., ಕಬ್ಬನ್ ಪಾರ್ಕ್ ಪೊಲೀಸ್ ಠಾಣೆ ಎಎಸ್ಐ ಬಾಲಕೃಷ್ಣ ಹಾಗೂ ಇನ್ಸ್ಪೆಕ್ಟರ್ ಗಿರೀಶ್ ಅವರನ್ನು ಅಮಾನತು ಮಾಡಲಾಗಿತ್ತು. ಆದರೆ ರಾಜ್ಯ ಸರ್ಕಾರ ಏಕಾಏಕಿ ಯೂಟರ್ನ್ ಹೊಡೆದಿದ್ದು, ಪೊಲೀಸ್ ಅಧಿಕಾರಿಗಳ ಅಮಾನತು ಆದೇಶ ಹಿಂಪಡೆದು ಕೊಂಡಿತ್ತು. ಇದೀಗ ಆದೇಶ ಹಿಂಪಡೆದು ಬೆನ್ನಲ್ಲೇ ಅವರಿಗೆ ಸ್ಥಳ ನಿಯೋಜನೆ ಮಾಡಲಾಗಿದೆ.
ಈ ಹಿಂದೆ ಬೆಂಗಳೂರು ನಗರ ಪೊಲೀಸ್ ಆಯುಕ್ತರಾಗಿದ್ದ ಬಿ.ದಯಾನಂದ್ ಅವರನ್ನ ಕಾರಾಗೃಹ ಮತ್ತು ಸುಧಾರಣಾ ಇಲಾಖೆ ಎಡಿಜಿಪಿಯಾಗಿ ಸ್ಥಳ ನಿಯೋಜನೆ ಮಾಡಲಾಗಿದೆ. ಇನ್ನೋರ್ವ ಐಪಿಎಸ್ ಶೇಖರ್.ಹೆಚ್.ಟಿ ಅವರನ್ನು ಗುಪ್ತಚರ ಇಲಾಖೆಯ ಎಸ್ಪಿ ಹುದ್ದೆ ನೀಡಲಾಗಿದೆ.