ಚಿತ್ರದುರ್ಗ: 2026-27ನೇ ಸಾಲಿನ ಮುಂಗಾರು ಹಂಗಾಮಿಗೆ ‘ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ'ಯಡಿ ಬೆಳೆ ವಿಮೆ ನೋಂದಣಿ ಪ್ರಕ್ರಿಯೆ ಆರಂಭವಾಗಿದ್ದು, ಜುಲೈ 31 ನೋಂದಣಿಗೆ ಕೊನೆಯ ದಿನವಾಗಿದೆ ಎಂದು ಚಿತ್ರದುರ್ಗ ಡಿ.ಸಿ.ಸಿ ಬ್ಯಾಂಕ್ ಅಧ್ಯಕ್ಷರು ಹಾಗೂ ಚಳ್ಳಕೆರೆ ಶಾಸಕರಾದ ಟಿ. ರಘುಮೂರ್ತಿ ತಿಳಿಸಿದ್ದಾರೆ.
ಪ್ರಸಕ್ತ ಮುಂಗಾರು ಹಂಗಾಮು ಕ್ಷೀಣಿಸಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ರೈತರು ಬೆಳೆ ವಿಮೆ ನೋಂದಣಿ ಮಾಡಿಸಿ ಅದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ರೈತರಿಗೆ ಮನವಿ ಮಾಡಿದ್ದಾರೆ.
ಚಿತ್ರದುರ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ವತಿಯಿಂದ ಜಿಲ್ಲೆಯ 160 ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಮೂಲಕ ರೈತರಿಗೆ ಬೆಳೆ ಸಾಲ ವಿತರಿಸಲಾಗಿದ್ದು, ಬೆಳೆ ವಿಮೆ ವ್ಯಾಪ್ತಿಗೆ ಬರುವ ಬೆಳೆಗಳಿಗೆ ಸಾಲ ಪಡೆದ ಎಲ್ಲಾ ರೈತರು ಜುಲೈ 31ರ ಒಳಗಾಗಿ ತಪ್ಪದೇ ಬೆಳೆ ವಿಮೆ ನೋಂದಾಯಿಸಿಕೊಳ್ಳಲು ಕೋರಲಾಗಿದೆ.
ಬೆಳೆ ವಿಮೆ ನೋಂದಾಯಿಸಲು ರೈತರು ತಾವು ಸಾಲ ಪಡೆದಿರುವ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಕಾರ್ಯದರ್ಶಿಗಳನ್ನು ಸಂಪರ್ಕಿಸಿ, ಜಿಲ್ಲೆಯ 22 ಡಿ.ಸಿ.ಸಿ ಬ್ಯಾಂಕ್ ಶಾಖೆಗಳಲ್ಲಿ ಬೆಳೆ ವಿಮೆ ಮೊತ್ತ ಪಾವತಿಸಬಹುದು.
ಹೆಚ್ಚಿನ ಮಾಹಿತಿಗಾಗಿ ಬ್ಯಾಂಕಿನ ಶಾಖಾ ವ್ಯವಸ್ಥಾಪಕರು ಹಾಗೂ ಮೇಲ್ವಿಚಾರಕರನ್ನು ಸಂಪರ್ಕಿಸಬಹುದು ಎಂದು ಚಿತ್ರದುರ್ಗ ಡಿಸಿಸಿ ಬ್ಯಾಂಕ್ ಅಧ್ಯಕ್ಷರು ಹಾಗೂ ಚಳ್ಳಕೆರೆ ಶಾಸಕರಾದ ಟಿ.ರಘುಮೂರ್ತಿ ತಿಳಿಸಿದ್ದಾರೆ.