ದಾವಣಗೆರೆ : ಮಾಯಕೊಂಡ ಕ್ಷೇತ್ರದ ಮತದಾರರ ಆಶೀರ್ವಾದ ಹಾಗೂ ಪಕ್ಷದ ವರಿಷ್ಠರ ಬೆಂಬಲದಿಂದ ನನಗೆ ಸಚಿವ ಸ್ಥಾನ ದೊರೆತಿದ್ದು, ಸಂಪೂರ್ಣ ಗ್ರಾಮೀಣ ಭಾಗವನ್ನೊಳಗೊಂಡಿರುವ ಮಾಯಕೊಂಡ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಮೊದಲ ಆದ್ಯತೆ ನೀಡಲಾಗುವುದು ಎಂದು ನೂತನ ಸಚಿವ ಕೆ.ಎಸ್. ಬಸವಂತಪ್ಪ ಅವರು ತಿಳಿಸಿದರು.
ಅವರು ಶುಕ್ರವಾರ ಮಾಯಕೊಂಡ ಶಾಲಾ ಆವರಣದಲ್ಲಿ ಏರ್ಪಡಿಸಲಾಗಿದ್ದ ಅಭಿನಂದನಾ ಸಮಾರಂಭವನ್ನು ಉದ್ದೇಶಿಸಿ ಮಾತನಾಡಿದರು. ನನಗೆ ಸಿಕ್ಕಿರುವ ಈ ಅಧಿಕಾರ ಮತ್ತು ಸ್ಥಾನಮಾನಕ್ಕೆ ಮಾಯಕೊಂಡ ಕ್ಷೇತ್ರದ ಮತದಾರರೇ ಕಾರಣ. ಅವರ ಋಣವನ್ನು ನಾನು ಎಂದಿಗೂ ಮರೆಯುವುದಿಲ್ಲ ಎಂದು ಭಾವನಾತ್ಮಕವಾಗಿ ಕೃತಜ್ಞತೆ ಸಲ್ಲಿಸಿದರು.
ಪಕ್ಷದ ಎಲ್ಲಾ ನಾಯಕರಿಗೂ ಈ ಸಂದರ್ಭದಲ್ಲಿ ಧನ್ಯವಾದಗಳನ್ನು ಅರ್ಪಿಸಿದರು.
ಮಾಯಕೊಂಡ ಕ್ಷೇತ್ರವು ಸಂಪೂರ್ಣ ಗ್ರಾಮೀಣ ಪ್ರದೇಶವಾಗಿದೆ. ಆದರೆ ಮೂಲಸೌಕರ್ಯಗಳ ಕೊರತೆಯಿಂದ ಕ್ಷೇತ್ರವು ಅಭಿವೃದ್ಧಿಯಲ್ಲಿ ಹಿಂದೆ ಬಿದ್ದಿದ್ದು, ಈ ಕೊರತೆಯನ್ನು ನೀಗಿಸಲು ಮುಂದಿನ 3-4 ತಿಂಗಳಲ್ಲಿ ವಿಶೇಷ ಅನುದಾನ ತಂದು ಅಭಿವೃದ್ಧಿ ಕಾಮಗಾರಿಗಳನ್ನು ಘೋಷಿಸಲಾಗುವುದು. ಈ ಕುರಿತು ಮಾನ್ಯ ಮುಖ್ಯಮಂತ್ರಿಗಳಲ್ಲಿ ಮನವಿ ಮಾಡಲಾಗುವುದು ಎಂದು ಹೇಳಿದರು.
ಒಬ್ಬ ಸಾಮಾನ್ಯ ಕಾರ್ಯಕರ್ತನಾಗಿ ಪಕ್ಷದ ಬ್ಯಾನರ್, ಪೋಸ್ಟರ್ ಹಚ್ಚುವ ಹಂತದಿಂದ ಬೆಳೆದು ಬಂದ ನನಗೆ ಇಂದು ಸಚಿವ ಸ್ಥಾನ ಸಿಕ್ಕಿರುವುದು ಪಕ್ಷದ ಸಿದ್ಧಾಂತಕ್ಕೆ ಸಿಕ್ಕ ಜಯ. ಪಕ್ಷಕ್ಕಾಗಿ ಪ್ರಾಮಾಣಿಕವಾಗಿ ಶ್ರಮಿಸುವ ಪ್ರತಿಯೊಬ್ಬ ಕಾರ್ಯಕರ್ತನಿಗೂ ಸೂಕ್ತ ನ್ಯಾಯ ಸಿಗುತ್ತದೆ ಎಂಬುದಕ್ಕೆ ನಾನೇ ಉದಾಹರಣೆ ಎಂದರು.
ಸಚಿವನಾಗಿದ್ದರೂ ನಾನು ನಿಮ್ಮ ಮನೆಯ ಮಗ, ಬಸವಂತಪ್ಪನಾಗಿಯೇ ಇರುತ್ತೇನೆ. ನನ್ನ ಬಾಗಿಲು ಸದಾ ಜನಸಾಮಾನ್ಯರಿಗೆ ತೆರೆದಿರುತ್ತದೆ. ಯಾವುದೇ ಕಷ್ಟ-ಸುಖಗಳಿದ್ದರೂ ನನ್ನನ್ನು ನೇರವಾಗಿ ಸಂಪರ್ಕಿಸಬಹುದು ಎಂದು ಸಾರ್ವಜನಿಕರಿಗೆ ಅಭಯ ನೀಡಿದರು.
ತಾಲೂಕಿನ 22 ಕೆರೆಗಳಿಗೆ ನೀರು ತುಂಬಿಸುವ ಯೋಜನೆ ಯನ್ನು ಶೀಘ್ರವಾಗಿ ಅನುಷ್ಠಾನಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದರು.
ಹೊನ್ನಾಳಿ ಶಾಸಕ ಡಿ.ಜಿ.ಶಾಂತನಗೌಡ , ಜನಪ್ರತಿನಿಧಿಗಳು, ಪಕ್ಷದ ಪ್ರಮುಖ ನಾಯಕರು ಹಾಗೂ ಸಾರ್ವಜನಿಕರು, ಕಾರ್ಯಕರ್ತರು ಉಪಸ್ಥಿತರಿದ್ದರು.