ಬೆಂಗಳೂರು: ಆಧಾರ್ ಮತ್ತು ವೋಟರ್ ಐಡಿ ಲಿಂಕ್ ಆಗಿದ್ದರೆ ಮಾತ್ರ ಗೃಹಲಕ್ಷ್ಮಿ ಯೋಜನೆ ಫಲಾನುಭವಿಗಳ ಖಾತೆಗೆ ಹಣ ಜಮಾ ಮಾಡುವ ಕುರಿತಂತೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಚರ್ಚೆ ನಡೆಸಲಾಗಿದೆ.
ಗ್ಯಾರಂಟಿ ಯೋಜನೆಯ ಅಧ್ಯಕ್ಷರು, ಉಪಾಧ್ಯಕ್ಷರ ಜೊತೆಗೆ ಸಿಎಂ ಸಭೆ ನಡೆಸಿದ್ದಾರೆ. ಗೃಹಲಕ್ಷ್ಮಿ, ಗೃಹಜ್ಯೋತಿ ಫಲಾನುಭವಿಗಳ ಮುಖ ಚಹರೆ, ಬೆರಳಚ್ಚು ಪಡೆಯುವ ಮೂಲಕ ದೃಢೀಕರಣ ಮಾಡಬೇಕು. ಜೊತೆಗೆ ಫಲಾನುಭವಿಗಳ ಆಧಾರ್ ಮತ್ತು ವೋಟರ್ ಐಡಿಯನ್ನು ಲಿಂಕ್ ಮಾಡಬೇಕು. ಆಧಾರ್ ಮತ್ತು ವೋಟರ್ ಐಡಿ ಎರಡೂ ಜೋಡಣೆಯಾದ ಫಲಾನುಭವಿಗಳಿಗೆ ಮಾತ್ರ ಯೋಜನೆಯ ಹಣ ನೀಡಬೇಕು ಎಂದು ಸಿಎಂ ಸೂಚನೆ ನೀಡಿದ್ದಾರೆ ಎನ್ನಲಾಗಿದೆ.
ಈಗಾಗಲೇ ನಡೆಯುತ್ತಿರುವ ಗೃಹಜ್ಯೋತಿ ಯೋಜನೆ ಫಲಾನುಭವಿಗಳ ಮರು ಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಲು ಸೆಪ್ಟೆಂಬರ್ ಅಂತ್ಯದವರೆಗೆ ಕಾಲಾವಕಾಶ ವಿಸ್ತರಿಸುವುದಾಗಿ ಸಿಎಂ ತಿಳಿಸಿದ್ದಾರೆ.
ವಿಧಾನಸೌಧದಲ್ಲಿ ಕರ್ನಾಟಕ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಹೆಚ್. ಎಂ. ರೇವಣ್ಣ ಅವರು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿ ಮಾಡಿ, ಸಮಾಲೋಚನೆ ನಡೆಸಿದರು.
ಈ ವೇಳೆ ಕರ್ನಾಟಕ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷರಾದ ಪಿ.ಟಿ. ಪರಮೇಶ್ವರ ನಾಯ್ಕ್, ಡಾ. ಪುಷ್ಪಾ ಅಮರನಾಥ್, ದಿನೇಶ್ ಗೂಳಿಗೌಡ ಹಾಗೂ ಪ್ರಜಾಸೇವಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಹರ್ಷ ಗುಪ್ತ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.