ಚಿತ್ರದುರ್ಗ: ಚಿತ್ರದುರ್ಗದ ಜಿಲ್ಲಾ ಕಾಂಗ್ರೆಸ್ ಕಚೇರಿ ಬಳಿ ಮಾದಿಗ ಸಮುದಾಯದ ವತಿಯಿಂದ ಒಳ ಮೀಸಲಾತಿ ಜಾರಿ ಮಾಡುವಲ್ಲಿ ವಿಳಂಬ ನೀತಿಯನ್ನು ಅನುಸರಿಸುತ್ತಿರುವುದನ್ನು ವಿರೋಧಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಆಕ್ರೋಶವನ್ನು ವ್ಯಕ್ತಪಡಿಸಿದ ಘಟನೆ ಮಂಗಳವಾರ ನಡೆದಿದೆ.
ಒಳ ಮೀಸಲಾತಿಯನ್ನು ಜಾರಿ ಮಾಡಲು ನ್ಯಾಯಾಲಯ ಆಯಾ ರಾಜ್ಯಗಳಿಗೆ ಅಧಿಕಾರವನ್ನು ನೀಡಿದ ಹಿನ್ನಲೆಯಲ್ಲಿ ರಾಜ್ಯ ಸಕಾರ ಆಯೋಗವನ್ನು ರಚನೆ ಮಾಡಿ ಅದರಿಂದ ವರದಿಯನ್ನು ತರಿಸಿಕೊಂಡು ಬಹಳ ದಿನಗಳಾದರೂ ಸಹಾ ಅದನ್ನು ಜಾರಿ ಮಾಡದೆ ಕಾಂಗ್ರೆಸ್ ಸರ್ಕಾರ ವಿಳಂಭ ಧೋರಣೆಯನ್ನು ಅನುಸರಿ ಸುತ್ತಿದೆ ಇದರಿಂದ ಬೇಸತ್ತ ಮಾದಿಗ ಸಮುದಾಯದವರು ಇಂದು ಚಿತ್ರದುರ್ಗ ಜಿಲ್ಲಾ ಕಾಂಗ್ರೆಸ್ ಕಚೇರಿ ಬಳಿ ಆಗಮಿಸಿ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ ಸಿ.ಎಂ ಸಿದ್ದರಾಮಯ್ಯ ಹಾಗೂ ಡಿ.ಕೆ. ಶಿವಕುಮಾರ್ ರವರ ಭಾವಚಿತ್ರ ಹರಿದು ಆಕ್ರೋಶ ವ್ಯಕ್ತಪಡಿಸಿದರು.
ಸಿದ್ದರಾಮಯ್ಯ ಹಾಗೂ ರಾಹುಲ್ ಗಾಂಧಿ ಭಾವಚಿತ್ರಕ್ಕೆ ಬೆಂಕಿ ಇಟ್ಟು ಆಕ್ರೋಶ ವ್ಯಕ್ತಪಡಿಸಿ, ಮಾದಿಗ ಸಮುದಾಯದ ಸಚಿವರಾದ ಹೆಚ್ ಸಿ ಮಹದೇವಪ್ಪ ಭಾವಚಿತ್ರ ಹರಿದ ಮಾಧಿಗ ಸಮುದಾಯದ ಮುಖಂಡರು ಕಾಂಗ್ರೆಸ್ ಸರ್ಕಾರ, ಸಿ ಎಂ ಸಿದ್ದರಾಮಯ್ಯ, ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ ಡಿ.ಕೆ. ಶಿವಕುಮಾರ್ ಹಾಗೂ ಹೆಚ್.ಸಿ. ಮಹದೇವಪ್ಪ ಪ್ರಿಯಾಂಕ ಖರ್ಗೆಯ ವಿರುದ್ಧ ಘೋಷಣೆಗಳನ್ನು ಕೂಗಿ ಪ್ರತಿಭಟನೆ ನಡೆಸಿ ಕಾಂಗ್ರೆಸ್ ಕಚೇರಿ ಬಳಿಯ ಫ್ಲೆಕ್ಸ್ ಹರಿದು ಆಕ್ರೋಶ ವ್ಯಕ್ತಪಡಿಸಿದರು.
ಕರ್ನಾಟಕ ಸರ್ಕಾರ 56432 ಹುದ್ದೆಗಳ ಭರ್ತಿಗೆ ಮುಂದಿನ 30 ದಿನಗಳಲ್ಲಿ ಪ್ರಕ್ರಿಯೆ ಆರಂಭಿಸುವುದಾಗಿ ಪ್ರಕಟಿಸಿದೆ. ಆದರೆ ರಾಜ್ಯದಲ್ಲಿ ಒಳ ಮೀಸಲಾತಿಯನ್ನು ಜಾರಿ ಮಾಡದೇ ಹೊರೆತು ಈ ಹುದ್ದೆಗಳನ್ನು ಭರ್ತಿ ಮಾಡಬಾರದು ಒಳ ಮೀಸಲಾತಿ ಜಾರಿ ಮಾಡದೆ ಈ ಹುದ್ದೆಗಳನ್ನು ಭರ್ತಿ ಮಾಡಿದರೆ ಮಾದಿಗ ಸಮುದಾಯಕ್ಕೆ ಅನ್ಯಾಯವಾಗುತ್ತದೆ ಸಾವಿರಾರು ಯುವ ಜನತೆ ಹುದ್ದೆಗಳನ್ನು ಪಡೆಯಲು ಆಗುವುದಿಲ್ಲ ಈ ಹಿನ್ನಲೆಯಲ್ಲಿ ರಾಜ್ಯದಲ್ಲಿ ಒಳ ಮೀಸಲಾತಿ ಜಾರಿಯಾಗುವವರೆಗೂ ಹುದ್ದೆಗಳನ್ನು ಭರ್ತಿ ಮಾಡುವುದನ್ನು ತಡೆ ಹಿಡಿಯುವಂತೆ ಸರ್ಕಾರವನ್ನು ಆಗ್ರಹಿಸಲಾಯಿತು.































