ನವದೆಹಲಿ : ಪ್ರಯಾಗ್ರಾಜ್ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳದಲ್ಲಿ ಕಾಲ್ತುಳಿತ ಸಂಭವಿಸಿದ್ದು, ಇದರಿಂದ ಮೃತರಾದ ಕುಟುಂಬಗಳಿಗೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ.
ಮೌನಿ ಅಮಾವಾಸ್ಯೆಯಂದು ಪ್ರಯಾಗ್ರಾಜ್ನ ತ್ರಿವೇಣಿ ಸಂಗಮದಲ್ಲಿ ಸ್ನಾನ ಮಾಡಲು ಭಕ್ತರು ಭರದಿಂದ ಹರಿದು ಬಂದಿದ್ದರು. ಈ ವೇಳೆ ಕಾಲ್ತುಳಿತ ಸಂಭವಿಸಿ, 15ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ ಎಂದು ಶಂಕೆ ವ್ಯಕ್ತವಾಗಿದೆ. 60ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದು, ಈ ಬಗ್ಗೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ಗೆ ಪ್ರಧಾನಿ ಮೋದಿ ಕರೆ ಮಾಡಿ ಮಾಹಿತಿ ಪಡೆದುಕೊಂಡಿದ್ದಾರೆ ಮತ್ತು ಕೇಂದ್ರದಿಂದ ಅಗತ್ಯವಾದ ಎಲ್ಲ ಸಹಾಯವನ್ನು ನೀಡಲು ಭರವಸೆ ನೀಡಿದ್ದಾರೆ.
ಇದರ ಕುರಿತು ಟ್ವೀಟ್ ಮಾಡಿದ ಮೋದಿ, “ಪ್ರಯಾಗ್ರಾಜ್ ಮಹಾ ಕುಂಭದಲ್ಲಿ ಸಂಭವಿಸಿದ ಕಾಲ್ತುಳಿತ ಅತ್ಯಂತ ದುಃಖಕರವಾಗಿದೆ. ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡ ಕುಟುಂಬಗಳಿಗೆ ನನ್ನ ಸಂತಾಪಗಳು. ಎಲ್ಲ ಗಾಯಾಳುಗಳು ಶೀಘ್ರದಲ್ಲಿ ಚೇತರಿಸಿಕೊಳ್ಳಲಿ ಎಂದು ನಾನು ಹಾರೈಸುತ್ತೇನೆ. ಸ್ಥಳೀಯ ಆಡಳಿತವು ಸಂತ್ರಸ್ತರಿಗೆ ಅಗತ್ಯ ಸಹಾಯವನ್ನು ಒದಗಿಸಲು ಶ್ರಮಿಸುತ್ತಿದೆ. ನಾನು ಮುಖ್ಯಮಂತ್ರಿ ಯೋಗಿ ಜಿ ಅವರೊಂದಿಗೆ ಮಾತನಾಡಿದ್ದೇನೆ ಮತ್ತು ರಾಜ್ಯ ಸರ್ಕಾರದೊಂದಿಗೆ ನಿರಂತರವಾಗಿ ಸಂಪರ್ಕದಲ್ಲಿದ್ದೇನೆ.” ಎಂದು ಹೇಳಿದ್ದಾರೆ.
				
															
                    
                    
                    
                    
































