ನವದೆಹಲಿ : 24 ವರ್ಷಗಳ ಹಿಂದಿನ ಮಾನನಷ್ಟ ಮೊಕದ್ದಮೆ ಪ್ರಕರಣಕ್ಕೆ ಸಂಬಂಧಿಸಿದಂತೆ ನರ್ಮದಾ ಬಚಾವೋ ಆಂದೋಲನದ ನಾಯಕಿ ಹಾಗೂ ಸಾಮಾಜಿಕ ಕಾರ್ಯಕರ್ತೆ ಮೇಧಾ ಪಾಟ್ಕರ್ ಅವರನ್ನು ಇಂದು ಬಂಧಿಸಲಾಗಿದೆ.
ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿನಯ್ ಕುಮಾರ್ ಸಕ್ಷೇನಾ ಅವರು 24 ವರ್ಷಗಳ ಹಿಂದೆ ಹೂಡಿರುವ ಮಾನನಷ್ಟ ಮೊಕದ್ದಮೆ ಪ್ರಕರಣ ಸಂಬಂಧ ಪ್ರೊಬೇಷನ್ ಬಾಂಡ್ಗಳನ್ನು ಸಲ್ಲಿಸದ ಕಾರಣ ಪಾಟ್ಕರ್ ವಿರುದ್ಧ ದೆಹಲಿ ನ್ಯಾಯಾಲಯ ಬುಧವಾರ (ಏ.23) ಜಾಮೀನು ರಹಿತ ವಾರಂಟ್ ಹೊರಡಿಸಿತ್ತು. ಈ ಹಿನ್ನೆಲೆ ಆಗ್ನೆಯ ದೆಹಲಿಯ ನಿಜಾಮುದ್ದೀನ್ ಪ್ರದೇಶದಲ್ಲಿರುವ ಪಾಟ್ಕರ್ ಅವರ ನಿವಾಸಕ್ಕೆ ಇಂದು ಬೆಳಿಗ್ಗೆ ತೆರಳಿದ ಪೊಲೀಸರು ಅವರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
2000ನೇ ಇಸವಿಯಲ್ಲಿ ದಾಖಲಾಗಿದ್ದ ಮಾನಹಾನಿ ಪ್ರಕರಣದಲ್ಲಿ ಪಾಟ್ಕರ್ ಅಪರಾಧಿ ಎಂದು ತೀರ್ಪು ನೀಡಿದ್ದ ದೆಹಲಿ ನ್ಯಾಯಾಲಯ 5 ತಿಂಗಳ ಜೈಲು ಶಿಕ್ಷೆ ವಿಧಿಸಿತ್ತು. ಇದನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ್ದ ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ವಿಶಾಲ್ ಸಿಂಗ್, ಪಾಟ್ಕರ್ ಅವರ ವಯಸ್ಸು, ಅಪರಾಧದ ತೀವ್ರತೆ ಮತ್ತು ಅವರು ಈ ಹಿಂದೆ ಯಾವುದೇ ಪ್ರಕರಣದಲ್ಲಿ ಶಿಕ್ಷೆಗೆ ಒಳಗಾಗದೇ ಇರುವುದನ್ನು ಪರಿಗಣಿಸಿ ಏಪ್ರಿಲ್ 8 ರಂದು ಪ್ರೊಬೇಷನ್ ಅವಧಿ ವಿಧಿಸಿ ಆದೇಶ ಹೊರಡಿಸಿದ್ದರು.
ಇನ್ನು ಈ ಪ್ರೊಬೇಷನ್ ಅವಧಿಯಲ್ಲಿ ಅಪರಾಧಿಗಳನ್ನು ಜೈಲಿನಲ್ಲಿ ಇರಿಸದೆ, ಅವರ ದೈನಂದಿನ ಚಟುವಟಿಕೆಯ ಮೇಲೆ ನಿಗಾ ವಹಿಸಲಾಗುತ್ತದೆ. ಆದೇಶದ ಅನುಸಾರ, ಏಪ್ರಿಲ್ 23ರೊಳಗೆ ಪ್ರೊಬೇಷನ್ ಬಾಂಡ್ಗಳನ್ನು ಸಲ್ಲಿಸುವಂತೆ ಪಾಟ್ಕರ್ ಅವರಿಗೆ ಸೂಚನೆ ನೀಡಲಾಗಿತ್ತು. ಆದರೆ ಯಾವುದೇ ದಾಖಲೆಗಳನ್ನು ಸಲ್ಲಿಸದ ಹಿನ್ನಲೆ, ಕೋರ್ಟ್ ಅವರ ವಿರುದ್ಧ ಜಾಮೀನು ರಹಿತ ವಾರಂಟ್ ಹೊರಡಿಸಿದೆ.