ನವದೆಹಲಿ : ಅಹಮದಾಬಾದ್ನಲ್ಲಿ ನಡೆದ ಏರ್ ಇಂಡಿಯಾ ವಿಮಾನ ದುರಂತಕ್ಕೆ ಮೃತಪಟ್ಟ ಪೈಲಟ್ ಕ್ಯಾಪ್ಟನ್ ಸುಮಿತ್ ಸಭರ್ವಾಲ್ ಕಾರಣವಲ್ಲ, ಇದೊಂದು ಅಪಘಾತವಾಗಿದ್ದು, ಇದಕ್ಕೆ ಪೈಲಟ್ ಅನ್ನು ಹೊಣೆ ಮಾಡಬಾರದು ಎಂದು ಸುಪ್ರೀಂಕೋರ್ಟ್ ಹೇಳಿದೆ.
ಅಪಘಾತದಲ್ಲಿ ಮೃತಪಟ್ಟ ಪೈಲಟ್ ಕ್ಯಾಪ್ಟನ್ ಸುಮಿತ್ ಸಭರ್ವಾಲ್ ಅವರ ತಂದೆ ಪುಷ್ಕರಾಜ್ ಸಭರ್ವಾಲ್ ಮತ್ತು ಭಾರತೀಯ ಪೈಲಟ್ಗಳ ಒಕ್ಕೂಟವು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾ. ಸೂರ್ಯಕಾಂತ್ ನೇತೃತ್ವದ ದ್ವಿ ಸದಸ್ಯ ಪೀಠ ಕೇಂದ್ರ ಸರ್ಕಾರ ಮತ್ತು ನಾಗರಿಕ ವಿಮಾನಯಾನ ನಿರ್ದೇಶನಾಲಯಕ್ಕೆ ನೋಟಿಸ್ ನೀಡಿ, ಪ್ರತಿಕ್ರಿಯಿಸಿದೆ.
ನಿವೃತ್ತ ನ್ಯಾಯಧೀಶರ ನೇತೃತ್ವದಲ್ಲಿ ಸ್ವತಂತ್ರ ತನಿಖೆಗೆ ಕೋರಿ ಪುಷ್ಕರಾಜ್ ಸಭರ್ವಾಲ್ ಅರ್ಜಿ ಸಲ್ಲಿಸಿದ್ದರು. ಅಪಘಾತಕ್ಕೆ ತಮ್ಮ ಮಗ ಕ್ಯಾಪ್ಟನ್ ಸುಮಿತ್ ಸಭರ್ವಾಲ್ ಅವರನ್ನು ಹೊಣೆಯಾಗಿಸಲಾಗುತ್ತಿದೆ. ಈ ಬಗ್ಗೆ ನ್ಯಾಯಯುತ ತನಿಖೆಯಾಗಬೇಕು ಎಂದು ಮನವಿ ಮಾಡಿದ್ದರು. ಅರ್ಜಿ ವಿಚಾರಣೆ ನಡೆಸಿದ ನ್ಯಾಯಲಯ ಪ್ರಾಥಮಿಕ ತನಿಖಾ ವರದಿಯಲ್ಲಿಯೂ ಪೈಲಟ್ ವಿರುದ್ಧ ಯಾವುದೇ ಆರೋಪಗಳಿಲ್ಲ, ಅಪಘಾತಕ್ಕೆ ನಿಮ್ಮ ಮಗ ಕಾರಣನಲ್ಲ ಮತ್ತು ಅವರು ಇದರ ಹೊಣೆ ಹೊರಬಾರದು, ನೀವು ಕೂಡ ನಿಮ್ಮ ಮೇಲೆ ಹೊಣೆ ಹಾಕಿಕೊಳ್ಳಬಾರದು ಎಂದು ತಿಳಿಸಿದೆ.
ಮೃತ ಪೈಲಟ್ ತಂದೆ ಪುಷ್ಕರಾಜ್ ಸಭರ್ವಾಲ್ ಪರವಾಗಿ ಹಿರಿಯ ವಕೀಲ ಗೋಪಾಲ್ ಶಂಕರನಾರಾಯಣ್, ಅಮೆರಿಕದ ಪತ್ರಿಕೆಯೊಂದರಲ್ಲಿ ಪ್ರಕಟವಾದ ವರದಿಯಲ್ಲಿ ಪೈಲಟ್ ಅನ್ನು ಹೊಣೆ ಮಾಡಲು ಪ್ರಯತ್ನಿಸಲಾಗಿದೆ ಎಂದು ವಾದಿಸಿದರು. ಇದಕ್ಕೆ ಉತ್ತರಿಸಿದ ನ್ಯಾಯಾಲಯವು ಅದು ಭಾರತವನ್ನು ದೂಷಿಸುವ ವರದಿಯಾಗಿತ್ತು ಎಂದು ಅಸಮಧಾನ ವ್ಯಕ್ತಪಡಿಸಿದೆ.
ಇಲ್ಲಿ ಯಾರನ್ನೂ ಹೊಣೆ ಮಾಡಬಾರದು, ಭವಿಷ್ಯದಲ್ಲಿ ಇಂತಹ ಅಪಘಾತಗಳನ್ನು ತಡೆಗಟ್ಟಲು ಕ್ರಮವಹಿಸಬೇಕು. ಯಾವುದೇ ಕಾರಣಕ್ಕೂ ಪೈಲಟ್ ಅನ್ನು ಹೊಣೆಗಾರರನ್ನಾಗಿ ಮಾಡಲು ಸಾಧ್ಯವಿಲ್ಲ ಎಂದು ಪೀಠ ಸ್ಪಷ್ಟಪಡಿಸಿದೆ. ಪ್ರಕರಣದ ಮುಂದಿನ ವಿಚಾರಣೆಯನ್ನು ನ.10ಕ್ಕೆ ಮುಂದೂಡಲಾಯಿತು.
































