ಬೆಂಗಳೂರು : ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಕೇಸ್ಗಳು ಹೆಚ್ಚಾಗುತ್ತಿದ್ದು, ಜನರಲ್ಲಿ ಆತಂಕ ಮೂಡಿಸಿದೆ. ಇದರ ಮಧ್ಯೆ ಶುಕ್ರವಾರ ಕೊರೊನಾಗೆ ಒಬ್ಬರು ಮೃತಪಟ್ಟಿದ್ದಾರೆ.
ಮೈಸೂರಲ್ಲಿ 63 ವರ್ಷದ ವ್ಯಕ್ತಿ ಕೊವಿಡ್ನಿಂದ ಸಾವನ್ನಪ್ಪಿದ್ದಾರೆ. ಈ ಮೂಲಕ ಕೊರೊನಾದಿಂದ ಸಾವನ್ನಪ್ಪಿದವರ ಸಂಖ್ಯೆ 3ಕ್ಕೆ ಏರಿಕೆಯಾಗಿದೆ. ಇನ್ನು ಮತ್ತೊಂದೆಡೆ ತೀವ್ರ ಉಸಿರಾಟದ ಸೋಂಕಿನ(SARI) ಗುಣಲಕ್ಷಣ ಹೊಂದಿರುವವರಿಗೆ ಕೊವಿಡ್ ಟೆಸ್ಟ್ ಕಡ್ಡಾಯಗೊಳಿಸಿ ಕೇಂದ್ರ ಆರೋಗ್ಯ ಇಲಾಖೆ ಮಹತ್ವದ ಸುತ್ತೋಲೆ ಹೊರಡಿಸಿದೆ.
ಮುಂಗಾರು ಆರಂಭವಾದ ಹಿನ್ನೆಲೆ ಕೋವಿಡ್ ಸೋಂಕು ವೇಗವಾಗಿ ಹರಡಲು ಪ್ರಾರಂಭವಾಗಿದ್ದು, ರಾಜ್ಯದ ಕೋವಿಡ್ ಪಾಸಿಟಿವಿಟಿ ರೇಟ್ ಶೇ. 24 ರ ಗಡಿ ದಾಟಿದೆ. ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ 114 ಹೊಸ ಕೊರೊನಾ ಪ್ರಕರಣ ದಾಖಲಾಗಿದ್ದು, ಇದರೊಂದಿಗೆ ಪಾಸಿಟಿವ್ ಪ್ರಕರಣ 367ಕ್ಕೆ ಏರಿಕೆಯಾಗಿದೆ.
ಮೈಸೂರಿನ 63 ವರ್ಷದ ವ್ಯಕ್ತಿ ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ. ಕಿಡ್ನಿ ವೈಫಲ್ಯವಾಗಿ ಮೇ 15ರಂದು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಮೇ 25ರಂದು ಸಾವನ್ನಪ್ಪಿದ್ದಾರೆ. ಬಳಿಕ ಮೃತಪಟ್ಟ ವ್ಯಕ್ತಿಯ ಕೊವಿಡ್ ರಿಪೋರ್ಟ್ ಪಾಸಿಟಿವ್ ಎಂದು ಬಂದಿದೆ.
ಕೊವಿಡ್ ಪ್ರಕರಣಗಳು ಹೆಚ್ಚಳ ಹಿನ್ನೆಲೆಯಲ್ಲಿ ಕೊವಿಡ್ ಪರೀಕ್ಷೆ ಕಡ್ಡಾಯಗೊಳಿಸಿ ಕೇಂದ್ರ ಆರೋಗ್ಯ ಇಲಾಖೆ ಸುತ್ತೋಲೆ ಹೊರಡಿಸಿದೆ. SARI ಗುಣಲಕ್ಷಣ ಹೊಂದಿರುವವರಿಗೆ ಕೊವಿಡ್ ಟೆಸ್ಟ್ ಕಡ್ಡಾಯಗೊಳಿಸಿದ್ದು, ಸ್ವ್ಯಾಬ್ ಪಡೆದ ದಿನವೇ ಪ್ರಯೋಗಾಲಯಕ್ಕೆ ಕಳಿಸಬೇಕು ಎಂದು ಸೂಚನೆ ನೀಡಿದೆ.