ಬೆಂಗಳೂರು: ಕೇಂದ್ರ ಸರ್ಕಾರವು ಅಧಿಕಾರಕ್ಕೆ ಬಂದು 11 ವರ್ಷಗಳಲ್ಲಿ ವಿಪಕ್ಷ ನಾಯಕರ ಮೇಲೆ ದುರುದ್ದೇಶ ಪೂರ್ವಕವಾಗಿ ಐ.ಟಿ, ಇ.ಡಿ ದಾಳಿ ನಡೆಸಿರುವುದೇ ದೊಡ್ಡ ಸಾಧನೆಯಾಗಿದೆ. ಈ 11 ವರ್ಷದಲ್ಲಿ ಬಿಜೆಪಿ ನೀಡಿದ್ದ ಯಾವುದೇ ಆಶ್ವಾಸನೆ-ಯನ್ನು ಈಡೇರಿಸಲಿಲ್ಲ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಲೇವಡಿ ಮಾಡಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಬಿಜೆಪಿ ಸರ್ಕಾರ ಇರುವ ರಾಜ್ಯಗಳಲ್ಲಿ ಅಕ್ರಮ ಪತ್ತೆ ಮಾಡುತ್ತಿಲ್ಲ. ಈ ಬಗ್ಗೆ ಐ.ಟಿ, ಇ.ಡಿ ಗಮನ ವಹಿಸಬೇಕು ಎಂದರು.
ವಿಮಾನ ನಿಲ್ದಾಣ, ಬಂದರು, ರಾಷ್ಟ್ರೀಯ ಹೆದ್ದಾರಿ, ಗಣಿಗಳು, ರೈಲು ಸೇರಿದಂತೆ ಹಲವಾರು ಸರ್ಕಾರಿ ಸ್ವಾಮ್ಯವನ್ನು ಮಾರಾಟ ಮಾಡಿದ್ದು ಮತ್ತೊಂದುಸಾಧನೆಯಾಗಿದೆ ಎಂದರು
ವಿದೇಶದಲ್ಲಿರುವ ಕಪ್ಪು ಹಣ ವಾಪಸ್ ತರಲಿಲ್ಲ. ಉದ್ಯೋಗ ಸೃಷ್ಟಿ ಮಾಡಲಿಲ್ಲ. ಅಗತ್ಯ ವಸ್ತುಗಳ ಬೆಲೆ, ಡಿಸೇಲ್, ಪೆಟ್ರೋಲ್ ಮತ್ತು ಗ್ಯಾಸ್ ಸಿಲಿಂಡರ್ ಸೇರಿದಂತೆ ಎಲ್ಲಾ ಬೆಲೆಗಳು ಗಗನಕ್ಕೇರಿವೆ. ಗಾಳಿ ಬೆಳಕು ಬಿಟ್ಟು ಉಳಿದ ಎಲ್ಲಾ ಪದಾರ್ಥಗಳಿಗೂ ಜಿಎಸ್ಟಿ ಹಾಕಿದ ಕೀರ್ತಿ ಕೇಂದ್ರ ಸರ್ಕಾರಕ್ಕೆ ಸಲ್ಲುತ್ತದೆ ಎಂದರು.
ಸ್ವಾತಂತ್ರ್ಯ ಬಂದ ದಿನದಿಂದಲೂ ಎಲ್ಲಾ ಪ್ರಧಾನಿಗಳು ಸೇರಿ ₹52ಲಕ್ಷ ಕೋಟಿ ಸಾಲ ಮಾಡಿದ್ದರು. ಆದರೆ ನರೇಂದ್ರ ಮೋದಿ ಅವರ ಅವಧಿಯಲ್ಲಿ ₹150ಲಕ್ಷ ಕೋಟಿ ಸಾಲ ಮಾಡಿದ್ದಾರೆ. ಸಾಲ ಮಾಡಿ ಸಾರ್ವಜನಿಕರ ಮೇಲೆ ಸಾಲದ ಭಾರ ಹೊರಿಸಿದ್ದೇ ಬಿಜೆಪಿಯ ಬಹುದೊಡ್ಡ ಸಾಧನೆಯಾಗಿದೆ ಎಂದರು.!