ಬೆಂಗಳೂರು : ಮಂಗಳವಾರ ಬಂಟ್ವಾಳದಲ್ಲಿ ನಡೆದ ಅಬ್ದುಲ್ ರಹಿಮಾನ್ ಹತ್ಯೆ ಪ್ರಕರಣವೂ ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದ ಒಂದೂವರೆ ತಿಂಗಳಲ್ಲಿ ನಡೆದಿರುವ ಮೂರು ಕೊಲೆಗಳು ಹಾಗೂ ಆಗಾಗ ಸಂಭವಿಸುತ್ತಿರುವ ಕೋಮು ಹಿಂಸಾಚಾರ ಸಂಬಂಧಿ ಘಟನೆಗಳನ್ನು ತಡೆಯಲು ವಿಫಲವಾಗಿರುವ ಪೊಲೀಸ್ ಇಲಾಖೆಯ ವಿರುದ್ಧ ಭಾರಿ ಸಾರ್ವಜನಿಕ ಆಕ್ರೋಶ ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ ಕೆಲವು ಉನ್ನತ ಅಧಿಕಾರಿಗಳ ತಲೆದಂಡವಾಗುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.
ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ವಿಧಾನ ಪರಿಷತ್ ಸದಸ್ಯ ಹಾಗೂ ಹಿರಿಯ ಕಾಂಗ್ರೆಸ್ ಮುಖಂಡ ಬಿ.ಕೆ.ಹರಿಪ್ರಸಾದ್ ಅವರ ಬೆಂಗಳೂರಿನ ನಿವಾಸಕ್ಕೆ ಭೇಟಿ ನೀಡಿ ಕರಾವಳಿಯ ಬೆಳವಣಿಗೆಗಳ ಕುರಿತು ಚರ್ಚೆ ನಡೆಸಿದ್ದು, ಈ ಸಂದರ್ಭದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಕೆಲವು ಉನ್ನತ ಅಧಿಕಾರಿಗಳನ್ನು ಬದಲಾಯಿಸಿ ಅಲ್ಲಿಗೆ ಕೆಲವು ದಕ್ಷ ಮತ್ತು ಖಡಕ್ ಆಧಿಕಾರಿಗಳನ್ನು ನೇಮಿಸಬೇಕು ಎಂಬ ವಿಚಾರ ಪ್ರಸ್ತಾಪವಾಗಿದೆ ಎಂದು ಮೂಲಗಳು ತಿಳಿಸಿವೆ.
ಸದ್ಯದಲ್ಲೇ ಸಚಿವ ಸಂಪುಟ ಪುನರ್ ರಚನೆಯಾಗುವ ಸಾಧ್ಯತೆಯಿದ್ದು, ಹರಿಪ್ರಸಾದ್ ಅವರಿಗೆ ಸಚಿವ ಸ್ಥಾನಮಾನ ನೀಡುವ ವಿಚಾರವನ್ನು ಚರ್ಚಿಸಲು ಸಿದ್ದರಾಮಯ್ಯ ಗುರುವಾರ ಬೆಳಗ್ಗೆ ಅವರ ಮನೆಗೆ ಹೋಗಿದ್ದರೂ ಈ ಸಂದರ್ಭದಲ್ಲಿ ಪ್ರಮುಖವಾಗಿ ಕರಾವಳಿಯ ಸರಣಿ ಕೊಲೆಗಳು ಮತ್ತು ಕೋಮು ಹಿಂಸಾಚಾರ ವಿಚಾರವೇ ಚರ್ಚೆಯಾಗಿದೆ. ಹರಿಪ್ರಸಾದ್ ಕರಾವಳಿಯವರೇ ಆಗಿದ್ದು, ಇಲ್ಲಿನ ಪರಿಸ್ಥಿತಿಯನ್ನು ಸುಧಾರಿಸಲು ಮುಖ್ಯಮಂತ್ರಿಗೆ ಕೆಲವು ಸಲಹೆಗಳನ್ನು ನೀಡಿದ್ದಾರೆ ಎನ್ನಲಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆಯುತ್ತಿರುವ ಸರಣಿ ಕೊಲೆಗಳು, ಹಿಂಸೆಯ ಘಟನೆಗಳು, ಪ್ರಚೋದನಕಾರಿ ಭಾಷಣಗಳು, ಕಾನೂನು ಸುವ್ಯವಸ್ಥೆ ಹದಗೆಟ್ಟಿರುವುದು ಇತ್ಯಾದಿಗಳ ಬಗ್ಗೆ ಇಬ್ಬರ ನಡುವೆ ಗಂಭೀರ ಚರ್ಚೆ ನಡೆದಿದೆ ಎಂದು ಹೇಳಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋಮು ಹಿಂಸಾಚಾರಕ್ಕೆ ತಕ್ಷಣ ಕಡಿವಾಣ ಹಾಕಲು ಹಾಗೂ ಅಲ್ಲಿನ ಪೊಲೀಸ್ ವ್ಯವಸ್ಥೆಗೆ ಕಾಯಕಲ್ಪ ನೀಡಲು ಏನು ಮಾಡಬಹುದು ಎಂಬ ಬಗ್ಗೆ ಮುಖ್ಯಮಂತ್ರಿಗಳು ಬಿ.ಕೆ ಹರಿಪ್ರಸಾದ್ ಅವರ ಸಲಹೆ ಪಡೆದಿದ್ದಾರೆ.
ತಕ್ಷಣದ ಕ್ರಮವಾಗಿ ಜಿಲ್ಲೆಯ ಎಸ್ಪಿ ಹಾಗೂ ಮಂಗಳೂರಿನ ಪೊಲೀಸ್ ಕಮಿಷನರ್ ಇಬ್ಬರನ್ನೂ ತಕ್ಷಣ ಬದಲಾಯಿಸಬೇಕು ಎಂಬ ನಿರ್ಧಾರಕ್ಕೆ ಬರಲಾಗಿದೆ ಎಂದು ಎಂದು ತಿಳಿದು ಬಂದಿದೆ. ಜಿಲ್ಲೆಯ ಪೊಲೀಸ್ ವ್ಯವಸ್ಥೆಯನ್ನು ಆಮೂಲಾಗ್ರವಾಗಿ ಬದಲಾಯಿಸಲು ಏನು ಮಾಡಬೇಕು ಎಂಬ ಬಗ್ಗೆಯೂ ಚರ್ಚಿಸಲಾಗಿದೆ ಎಂದು ಹೇಳಲಾಗಿದೆ.