ಧಾರವಾಡ: ಬೆಳಗಾವಿಯ ಸುವರ್ಣಸೌಧದಲ್ಲಿ ಡಿಸೆಂಬರ್ 8 ರಿಂದ ವಿಧಾನ ಮಂಡಲ ಚಳಿಗಾಲದ ಅಧಿವೇಶನ ನಡೆಯಲಿದೆ. ಈ ದಿನಾಂಕಕ್ಕೆ ಮುಖ್ಯಮಂತ್ರಿ ಒಪ್ಪಿಗೆ ಸೂಚಿಸಿದ್ದಾರೆ ಎಂದು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಳಗಾವಿಯಲ್ಲಿ ಡಿಸೆಂಬರ್ 8ರಂದು ಚಳಿಗಾಲದ ಅಧಿವೇಶನ ದಿನಾಂಕ ನಿಗದಿ ಮಾಡಲಾಗಿದ್ದು, ಈ ಬಾರಿಯಾದರೂ ಉತ್ತರ ಕರ್ನಾಟಕ ಶಾಸಕರು ತಮ್ಮ ಕ್ಷೇತ್ರದ ಸಮಸ್ಯೆಗಳ ಬಗ್ಗೆ ಧ್ವನಿ ಎತ್ತಲಿ ಎಂದು ಹೇಳಿದ್ದಾರೆ.
ಮುಖ್ಯಮಂತ್ರಿಯೊಂದಿಗೆ ಚಳಿಗಾಲದ ಅಧಿವೇಶನದ ಬಗ್ಗೆ ಮಾತನಾಡಿದ್ದು ಒಪ್ಪಿಗೆ ಸೂಚಿಸಿದ್ದಾರೆ. ಬೆಳಗಾವಿ ಜಿಲ್ಲಾಧಿಕಾರಿಯೊಂದಿಗೆ ಮಾತನಾಡಿ ಸಿದ್ದತೆ ಮಾಡಿಕೊಳ್ಳಲಾಗುವುದು. ಉತ್ತರ ಕರ್ನಾಟಕದ ಸಮಸ್ಯೆಗಳಿಗೆ ಧ್ವನಿಯಾಗಲೆಂದು ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ನಡೆಸಲಾಗುತ್ತದೆ. ಆದರೆ ಈ ಭಾಗದ ಶಾಸಕರಿಗೆ ಗಂಭೀರತೆ ಇಲ್ಲ. ಪ್ರತಿ ಬುಧವಾರ, ಗುರುವಾರ ಉತ್ತರ ಕರ್ನಾಟಕ ಸಮಸ್ಯೆಗಳ ಬಗ್ಗೆ ಮಾತನಾಡಲು ನಿಗದಿ ಮಾಡಿದರೂ ಯಾವ ಶಾಸಕರು ಮಾತನಾಡುವುದಿಲ್ಲ. ಪ್ರಶ್ನೆ ಕೇಳಿದ ಶಾಸಕರೇ ಒಂದೇ ನಿಮಿಷದಲ್ಲಿ ಸದನ ಬಿಟ್ಟು ಹೋಗಿರುತ್ತಾರೆ. ಈ ಬಾರಿ ಆ ರೀತಿ ಆಗದಂತೆ ಕ್ರಮವಹಿಸಲಾಗುವುದು ಎಂದು ಹೇಳಿದ್ದಾರೆ.






























