ಬೆಂಗಳೂರು: ರಾಜಧಾನಿ ಬೆಂಗಳೂರು ನಗರ ಸೇರಿದಂತೆ ರಾಜ್ಯದ ಗ್ರಾಮೀಣ ಭಾಗಗಳಲ್ಲಿ ಡೆಂಗ್ಯೂ ಪ್ರಕರಣಗಳು ದಿನೇ ದಿನೇ ಭಾರಿ ಪ್ರಮಾಣದಲ್ಲಿ ಹೆಚ್ಚಾಗುತ್ತಿರುವುದನ್ನು ಕರ್ನಾಟಕ ಹೈಕೋರ್ಟ್ ಗಂಭೀರವಾಗಿ ಪರಿಗಣಿಸಿದೆ.
ಅಷ್ಟೇ ಅಲ್ಲದೆ, ಈ ಸಂಬಂಧ ಸ್ವಯಂಪ್ರೇರಿತ ಸಾರ್ವಜನಿಕ ಹಿತಾಸಕ್ತಿ ಅರ್ಜಿ ದಾಖಲಿಸಿಕೊಂಡು, ಸರ್ಕಾರಕ್ಕೆ ತುರ್ತು ನೋಟಿಸ್ ಜಾರಿಗೊಳಿಸಿದೆ. ಡೆಂಗ್ಯೂ ಜ್ವರ ನಿಯಂತ್ರಣಕ್ಕೆ ಕೈಗೊಂಡಿರುವ ಕ್ರಮಗಳ ಬಗ್ಗೆ ಪ್ರಮಾಣಪತ್ರ ಸಲ್ಲಿಸುವಂತೆ ಸೂಚನೆ ನೀಡಿದೆ.
ಹಾಗಾಗಿ ಸರ್ಕಾರ ಇನ್ನಾದರೂ ಡೆಂಗ್ಯೂ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿ ಅದನ್ನು ನಿಯಂತ್ರಿಸಲು ಕ್ರಮ ಕೈಗೊಳ್ಳಬೇಕಾಗಿದೆ. ಗುರುವಾರದ ಆರೋಗ್ಯ ಇಲಾಖೆ ಮಾಹಿತಿಯಂತೆ 24 ಗಂಟೆಯಲ್ಲಿ ರಾಜ್ಯಾದ್ಯಂತ 239 ಡೆಂಗ್ಯೂ ಪ್ರಕರಣ ದಾಖಲಾಗಿದೆ. 100 ರೋಗಿಗಳು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಬುಧವಾರ ಬೆಳಗ್ಗೆ ಕಲಾಪ ಆರಂಭವಾಗುತ್ತಿದ್ದ ಮುಖ್ಯನ್ಯಾಯಮೂರ್ತಿ ಎನ್. ವಿ. ಅಂಜಾರಿಯಾ ಮತ್ತು ನ್ಯಾಯಮೂರ್ತಿ ಕೆ. ವಿ. ಅರವಿಂದ್ ಅವರಿದ್ದ ನ್ಯಾಯಪೀಠ ವಿಷಯ ಪ್ರಸ್ತಾಪಿಸಿತು. ಅಲ್ಲದೆ, ಡೆಂಗ್ಯೂ ಹೆಚ್ಚಳ ಸಂಬಂಧ ರಾಜ್ಯಲ್ಲಿ ವೈದ್ಯಕೀಯ ತುರ್ತು ಪರಿಸ್ಥಿತಿ ಘೋಷಣೆ ಮಾಡಬೇಕಾದ ಅಗತ್ಯವಿದೆ ಎಂಬುದಾಗಿ ಆಂಗ್ಲ ಪತಿಕೆಯೊಂದಕ್ಕೆ ರಾಯಚೂರಿನ ವ್ಯಕ್ತಿಯೊಬ್ಬರು ಬರೆದಿದ್ದ ಸಂಪಾದಕರಿಗೆ ಪತ್ರ ಅಂಕಣದ ವರದಿಯನ್ನು ಪ್ರಸ್ತಾಪಿಸಿದರು. ಜತೆಗೆ, ಇತರೆ ಪತ್ರಿಕೆಗಳ ವರದಿಯನ್ನು ಉಲ್ಲೇಖಿಸಿ ಅರ್ಜಿ ದಾಖಲಿಸಿಕೊಂಡಿತು.
ಅಲ್ಲದೆ, ಸರ್ಕಾರದ ಮುಖ್ಯ ಕಾರ್ಯದರ್ಶಿ ಹಾಗೂ ಆರೋಗ್ಯ ಇಲಾಖೆಯ ಕಾರ್ಯದರ್ಶಿಗೆ ತುರ್ತು ನೋಟಿಸ್ ಜಾರಿಗೊಳಿಸಿ, ಜುಲೈ 23ರೊಳಗೆ ಡೆಂಗ್ಯೂ ನಿಯಂತ್ರಣಕ್ಕೆ ಕೈಗೊಂಡಿರುವ ಕ್ರಮಗಳ ಕುರಿತು ಪ್ರತಿಕ್ರಿಯೆ ನೀಡುವಂತೆ ಸೂಚನೆ ನೀಡಿ ವಿಚಾರಣೆ ಮುಂದೂಡಿತು.
ಮೂಲಭೂತ ಹಕ್ಕು: ಅಲ್ಲದೆ, ಉತ್ತಮ ವಾತಾವರಣದಲ್ಲಿ ಬದುಕುವುದು ಸಂವಿಧಾನ ಪರಿಚ್ಛೇದ 21ರ ಅಡಿಯಲ್ಲಿ ಮೂಲಭೂತ ಹಕ್ಕಾಗಿದೆ ಎಂದು ತಿಳಿಸಿದ ಪೀಠ, ಬೆಂಗಳೂರು ನಗರ ಸೇರಿದಂತೆ ರಾಜ್ಯದ ಗ್ರಾಮೀಣ ಭಾಗಗಳಲ್ಲಿ ಸೊಳ್ಳೆಗಳನ್ನು ನಿಂತ್ರಿಸಿ ಡೆಂಗ್ಯೂ ಹರಡದಂತೆ ತಡೆಯಲು ರಾಜ್ಯ ಸರ್ಕಾರ ಕೈಗೊಂಡಿರುವ ಕ್ರಮಗಳು, ಬೆಂಗಳೂರು ನಗರ ಸೇರಿದಂತೆ ರಾಜ್ಯಾದ್ಯಂತ ಡೆಂಗ್ಯೂ ರೋಗಿಗಳಿಗಾಗಿ ಒದಗಿಸಿರುವ ವೈದ್ಯಕೀಯ ಮೂಲ ಸೌಲಭ್ಯಗಳ ಕುರಿತ ಸಂಪೂರ್ಣ ವಿವರ, ಈ ಕುರಿತಂತೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಕೈಗೊಂಡಿರುವ ಕ್ರಮಗಳು, ಸೊಳ್ಳೆ ನಿಯಂತ್ರಣಕ್ಕಾಗಿ ಕೈಗೊಂಡಿರುವ ಕ್ರಮಗಳು ಕುರಿತು ವಿವರಣೆ ನೀಡಬೇಕು ಎಂದು ಆದೇಶದಲ್ಲಿ ತಿಳಿಸಿತು.